ಚಿಂತಾಮಣಿ: ತಾಲ್ಲೂಕಿನ ಇರಗಂಪಲ್ಲಿ ಗ್ರಾಮ ಪಂಚಾಯಿತಿ ಕಚೇರಿಯ ಹಿಂಭಾಗದ ಬೀದಿಯಲ್ಲಿ ಚರಂಡಿಗಳು ಸಮರ್ಪಕವಾಗಿ ನಿರ್ವಹಣೆಯಾಗದೆ ತುಂಬಿ ತುಳುಕುತ್ತಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಚರಂಡಿಗಳಲ್ಲಿ ಕಸ-ಕಡ್ಡಿ ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ನಿಂತಲ್ಲೇ ನಿಲ್ಲುತ್ತಿದ್ದು, ದುರ್ವಾಸನೆ ಬೀರುತ್ತಿದೆ.ನಿಂತ ನೀರಿನಿಂದಾಗಿ ಸೊಳ್ಳೆಗಳ ಕಾಟ ವಿಪರೀತವಾಗಿದ್ದು,ಈ ಭಾಗದ ಮಕ್ಕಳು ಹಾಗೂ ಹಿರಿಯರಲ್ಲಿ ನಿರಂತರವಾಗಿ ಜ್ವರ ಕಾಣಿಸಿಕೊಳ್ಳುತ್ತಿದೆ. ಇನ್ಫೆಕ್ಷನ್ ಹರಡುವ ಭೀತಿ ಎದುರಾಗಿದೆ.
ಇದನ್ನೂ ಓದಿ: Chinthamani News: ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಮುಖಂಡ ವೇಣುಗೋಪಾಲ್ ಭಾಗಿ
ಗ್ರಾಮ ಪಂಚಾಯಿತಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ಅರ್ಜಿ ಸಲ್ಲಿಸಿದರೂ ಸಹ ಯಾವುದೇ ಖಾಯಂ ಕ್ರಮ ಕೈಗೊಂಡಿಲ್ಲ. ಕೇವಲ ಬಂದಾಗ ಮೇಲ್ನೋಟಕ್ಕೆ ಸ್ವಚ್ಛಗೊಳಿಸಿ ಹೋಗುತ್ತಾರೆ ವಿನಃ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂದು ಸ್ಥಳೀಯ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾತ್ರಿ ಹೊತ್ತು ಸೊಳ್ಳೆಗಳ ಕಾಟದಿಂದಾಗಿ ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ಸಣ್ಣ ಮಕ್ಕಳು ಹಾಗೂ ಕುಟುಂಬದ ಸದಸ್ಯರು ಜ್ವರದಿಂದ ಬಳಲುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು.
ಗ್ರಾಮಸ್ಥರ ಆರೋಗ್ಯದ ದೃಷ್ಟಿಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಚರಂಡಿಗಳನ್ನು ಸ್ವಚ್ಛಗೊಳಿಸಿ ಸುಗಮ ನೀರಿನ ಹರಿವಿಗೆ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.