ಚಿಕ್ಕಬಳ್ಳಾಪುರ: ಮುಂಬರುವ ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದ ಯುತವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲೆಯ ಎಲ್ಲಾ ಫ್ಲೆಕ್ಸ್ ಪ್ರಿಂಟಿಂಗ್ ಹಾಗೂ ಡಿಜೆ ಸೌಂಡ್ ಸಿಸ್ಟಮ್ ಮಾಲೀಕರೊಂದಿಗೆ ಜಿಲ್ಲಾ ಮಟ್ಟದ ಶಾಂತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ(District Superintendent of Police Padmini Sahu), ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಹಾಗೂ ಉತ್ಸವ ಆಯೋಜಕರು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಹಕರಿಸಬೇಕು ಎಂದು ಸೂಚಿಸಿದರು.
ಫ್ಲೆಕ್ಸ್ ಮುದ್ರಿಸುವ ಸಂದರ್ಭದಲ್ಲಿ ಸಂಬಂಧಪಟ್ಟ ನಿಯಮಗಳನ್ನು ಪಾಲಿಸಬೇಕು. ಡಿಜೆ ಸೌಂಡ್ ಸಿಸ್ಟಮ್ ಬಳಕೆಯಲ್ಲಿಯೂ ಸರ್ಕಾರ ನಿಗದಿಪಡಿಸಿರುವ ನಿಯಮ, ಸಮಯ ಹಾಗೂ ಧ್ವನಿಮಿತಿ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘನೆಯಾಗದಂತೆ ಮಾಲೀಕರು ಹಾಗೂ ಆಯೋಜಕರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಗಣೇಶೋತ್ಸವವು ಎಲ್ಲ ಸಮುದಾಯಗಳ ಸಹಭಾಗಿತ್ವದಲ್ಲಿ ಶಾಂತಿಯುತವಾಗಿ ನಡೆಯಬೇಕು. ಯಾವುದೇ ರೀತಿಯ ಪ್ರಚೋದನಕಾರಿ ಸಂದೇಶ, ಬ್ಯಾನರ್, ಫ್ಲೆಕ್ಸ್ ಅಥವಾ ಧ್ವನಿವರ್ಧಕ ಬಳಕೆ ಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪೊಲೀಸ್ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸಿ ಸಹಕಾರ ನೀಡುವಂತೆ ಎಸ್ಪಿ ಪದ್ಮಿನಿ ಸಾಹೂ ಮನವಿ ಮಾಡಿದರು.
ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲೆಯ ವಿವಿಧೆಡೆಯ ಫ್ಲೆಕ್ಸ್ ಪ್ರಿಂಟಿಂಗ್ ಮತ್ತು ಡಿಜೆ ಸೌಂಡ್ ಸಿಸ್ಟಮ್ ಮಾಲೀಕರು ಭಾಗವಹಿಸಿದ್ದರು.