ಗುಡಿಬಂಡೆ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಕಾಲೇಜು ಶಿಕ್ಷಣ ಪಡೆಯುತ್ತಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹರಾಗಿರು ತ್ತಾರೆ.
ಗ್ರಾಮೀಣ ಹಾಗೂ ದೂರದ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಶಾಲೆಯಿಂದ 5 ಕಿ.ಮೀ ಗಿಂತ ಹೆಚ್ಚು ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಶೇಕಡಾ 90 ರಷ್ಟು ಸೀಟುಗಳನ್ನು ಹಾಗೂ 5 ಕಿ.ಮೀ ಗಿಂತ ಕಡಿಮೆ ದೂರವಿರುವ ವಿದ್ಯಾರ್ಥಿಗಳಿಗೆ ಶೇಕಡಾ 10 ರಷ್ಟು ಸೀಟುಗಳನ್ನು ನೀಡಲಾಗುತ್ತದೆ. ಇನ್ನು ಮೀಸಲಾತಿ ವಿವರವನ್ನು ನೋಡುವುದಾದರೆ, ಪ್ರತಿ ವಿದ್ಯಾರ್ಥಿನಿಲಯದಲ್ಲಿ ಲಭ್ಯವಿರುವ ಒಟ್ಟು ಸೀಟುಗಳ ಪೈಕಿ ಶೇ.75 ರಷ್ಟು ಸೀಟುಗಳನ್ನು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಹಾಗೂ ಇನ್ನುಳಿದ ಶೇಕಡಾ 25 ರಷ್ಟು ಸೀಟುಗಳನ್ನು ಪರಿಶಿಷ್ಟ ವರ್ಗ ಮತ್ತು ಇತರ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಿರಿಸಲಾಗಿದೆ.
ಇದನ್ನೂ ಓದಿ: Gudibande News: ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಕರವೇಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಕೆ
ಅರ್ಜಿ ಸಲ್ಲಿಕೆಯು ಈಗಾಗಲೇ ಮೇ 11, 2026 ರಿಂದ ಪ್ರಾರಂಭವಾಗಿದ್ದು, ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಜೂನ್ 30, 2026 ಕೊನೆಯ ದಿನಾಂಕವಾಗಿರುತ್ತದೆ. ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಆದ https://swdservices.karnataka.gov.in/website ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅದರ ಪ್ರತಿಯೊಂದಿಗೆ ವಿದ್ಯಾರ್ಥಿಯ ಇತ್ತೀಚಿನ ಒಂದು ಭಾವಚಿತ್ರ, SATS ಐಡಿ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್ಡಿ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ, ಆಧಾರ್ ಕಾರ್ಡ್ ನಕಲು ಹಾಗೂ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಪಾಸ್ಬುಕ್ ನಕಲು ಪ್ರತಿಯನ್ನು ಲಗತ್ತಿಸಬೇಕು. ಈ ಎಲ್ಲ ದಾಖಲೆಗಳ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯದ ವಾರ್ಡನ್ ಅಥವಾ ಗುಡಿಬಂಡೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕಾಗಿರುತ್ತದೆ.
ಆಯ್ಕೆ ಸಮಿತಿಯಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಂಪೂರ್ಣ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕಗಳು, ನೋಟ್ಬುಕ್ಗಳು ಮತ್ತು ಇತರ ಮೂಲಸೌಲಭ್ಯ ಗಳನ್ನು ನೀಡಲಾಗುವುದು. ಅಪೂರ್ಣವಾಗಿರುವ ಹಾಗೂ ನಿಗದಿತ ಜೂನ್ 30ರ ದಿನಾಂಕ ದ ನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸದೆ ಕಡ್ಡಾಯವಾಗಿ ತಿರಸ್ಕರಿಸ ಲಾಗುವುದು ಎಂದು ಇಲಾಖೆ ತಿಳಿಸಿದೆ.
ಸಾರ್ವಜನಿಕರು ಅಥವಾ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಥವಾ ಹಾಸ್ಟೆಲ್ ಗಳ ವಾರ್ಡನ್ ಗಳನ್ನು ಸಂಪರ್ಕಿಸಲು ಮನವಿ ಮಾಡಿದ್ದಾರೆ.