ಶಿಡ್ಲಘಟ್ಟ: ವಿದ್ಯಾಭ್ಯಾಸವೇ ವಿದ್ಯಾರ್ಥಿಗಳ ನಿಜವಾದ ಶಕ್ತಿ. ಗುರಿ ಸಾಧನೆಗೆ ಆತ್ಮವಿಶ್ವಾಸ ಹಾಗೂ ನಿರಂತರ ಪರಿಶ್ರಮ ಅಗತ್ಯ ಎಂದು ಕಾಂಗ್ರೆಸ್ ಮುಖಂಡ ಪುಟ್ಟು ಅಂಜಿನಪ್ಪ ಹೇಳಿದರು.
ತಾಲೂಕಿನ ಬೆಳ್ಳೂಟಿ ಗೇಟ್ ಬಳಿಯ ಶ್ರೀ ಆಂಜನೇಯಸ್ವಾಮಿ ಕಲ್ಯಾಣ ಮಂಟಪದ ಆವರಣದಲ್ಲಿ ಎಸ್ಎನ್ ಕ್ರಿಯಾ ಟ್ರಸ್ಟ್ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಂದೆ-ತಾಯಿ ಸದಾ ಮಕ್ಕಳ ಬೆಂಬಲಕ್ಕೆ ನಿಲ್ಲುತ್ತಾರೆ. ಆದರೆ ತಮ್ಮ ಕನಸುಗಳನ್ನು ನನಸಾಗಿಸಿ ಕೊಳ್ಳಲು ವಿದ್ಯಾರ್ಥಿಗಳ ಸ್ವಂತ ಪರಿಶ್ರಮ ಮತ್ತು ಆತ್ಮವಿಶ್ವಾಸವೇ ಪ್ರಮುಖವಾಗಿದೆ. ಯಾರು ಬೆಂಬಲಿಸುತ್ತಾರೆ, ಯಾರು ಬೆಂಬಲಿಸುವುದಿಲ್ಲ ಎಂಬುದನ್ನು ಚಿಂತಿಸದೆ ಶಿಕ್ಷಣದ ಮೂಲಕ ಉನ್ನತ ಸಾಧನೆ ಮಾಡಬೇಕು. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಅಂಕ ಗಳಿಸಿ ಶಿಡ್ಲಘಟ್ಟ ಕ್ಷೇತ್ರಕ್ಕೆ ಕೀರ್ತಿ ತಂದು, ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು ಎಂದು ಕರೆ ನೀಡಿದರು.
ಎಸ್ಎಸ್ಎಲ್ಸಿಯಲ್ಲಿ 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ಉಡುಗೊರೆಯಾಗಿ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ವಾಚ್ಗಳನ್ನು ವಿತರಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀನಿವಾಸ ರಾಮಯ್ಯ, ವರಲಕ್ಷ್ಮಿ ಸಂತೋಷ್, ರಾಜಕುಮಾರ್, ವರದರಾಜು, ರಾಮಾಂಜನೇಯ, ವೆಂಕಟೇಶ್, ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.