ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಬಂಧನ; 150 ಮಂದಿ ವಿರುದ್ಧ ತನಿಖೆ
Pradeep Eshwar: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರ ಭಾಷಣಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಿ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಕುಶಾಲ್ ಚೌಕ್ಸಿ ಅವರು, ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ -
ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರ ಭಾಷಣಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಿ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಕುಶಾಲ್ ಚೌಕ್ಸಿ ಅವರು, ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಗದ್ದಲ ಮತ್ತು ಗಲಾಟೆಯಲ್ಲಿ ಸುಮಾರು 100 ರಿಂದ 150 ಕ್ಕೂ ಹೆಚ್ಚು ಮಂದಿ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ವಿಡಿಯೋ ಸಾಕ್ಷ್ಯಗಳ ಆಧಾರದ ಮೇಲೆ ಉಳಿದ ಎಲ್ಲ ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ಎಸ್ಪಿ, ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಸಮರ್ಪಕ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇದರಲ್ಲಿ ಪೊಲೀಸರ ಯಾವುದೇ ವೈಫಲ್ಯ ಇಲ್ಲ. ಇದೊಂದು ಉದ್ದೇಶಪೂರ್ವಕವಾಗಿ ಶಾಸಕರಿಗೆ ಅವಮಾನ ಮಾಡುವ ಯತ್ನವಾಗಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಕನ್ನಡ ಭವನಕ್ಕೆ ನುಗ್ಗಿದ್ದ ಎನ್ಡಿಎ ಕಾರ್ಯಕರ್ತರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದ ಶಾಸಕ ಪ್ರದೀಪ್ ಈಶ್ವರ್ ಕ್ಷಮೆ ಕೇಳಬೇಕು. ಇಲ್ಲ ಕಾರ್ಯಕ್ರಮದಿಂದ ಹೊರಗೆ ಕಳಿಸಿ ಎಂದು ಘೋಷಣೆ ಕೂಗಿದ್ದರು. ಕನ್ನಡ ಭವನದ ಹೊರಗೆ ಹಾಗೂ ಒಳಗೆ ನಡೆದ ಗಲಾಟೆಯಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ಹಾಗೂ ಮಾತಿನ ಚಕಮಕಿಯೂ ನಡೆದಿತ್ತು.
ಬಿಬಿ ರಸ್ತೆಯ ಶನಿಮಹಾತ್ಮ ದೇವಸ್ಥಾನದವರೆಗೂ ಶಾಸಕರು ಮತ್ತು ಎನ್ಡಿಎ ಕಾರ್ಯಕರ್ತರು ಪರ - ವಿರೋಧ ಘೋಷಣೆಗಳು ಮೊಳಗುತ್ತಲೇ ಇದ್ದವು. ಶಾಸಕರ ನಡವಳಿಕೆಯಿಂದ ರೊಚ್ಚಿಗೆದ್ದ ಕಾರ್ಯ ಕರ್ತರೊಬ್ಬರು ಶಾಸಕರ ಕಾರಿನತ್ತ ಚಪ್ಪಲಿ ತೂರಿದ್ದರು. ಈ ವೇಳೆ ಗೊಂದಲ ನಡೆದು ದೊಡ್ಡ ಹೈಡ್ರಾಮಾ ನಡೆಯಿತು. ಗಲಾಟೆಯಲ್ಲಿ ಭಾಗಿಯಾದ ಆರೋಪದ ಮೇಲೆ ಜೆಡಿಎಸ್ ಯುವ ಮುಖಂಡ ಅಖಿಲ್ರೆಡ್ಡಿ, ಚಪ್ಪಲಿ ತೂರಿದ ವ್ಯಕ್ತಿ ಸೇರಿದಂತೆ 4 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.