ಚಿಂತಾಮಣಿ: ನಗರದ 24ನೇ ವಾರ್ಡ್ ವ್ಯಾಪ್ತಿಯ ನರಸಿಂಹ ಪೇಟೆಯಲ್ಲಿ ಮೂಲ ಸೌಕರ್ಯಗಳಿಲ್ಲದೆ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಸ್ತೆ, ಚರಂಡಿ ಮತ್ತು ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದೆ ಈ ಭಾಗದ ಜನರು ನರಕಯಾತನೆ ಅನುಭವಿಸುತ್ತಿದ್ದು, ನಗರಸಭೆಯ ನಿರ್ಲಕ್ಷ್ಯದ ವಿರುದ್ಧ ಸದರಿ ವಾರ್ಡಿನ ದಾದಾಪೀರ್, ನಿಜಾಮ್, ವರಲಕ್ಷ್ಮೀ, ಮನ್ಸೂರ್ ಸೇರಿದಂತೆ ಮತ್ತಿತರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಡಾವಣೆಯಲ್ಲಿ ಸರಿಯಾದ ರಸ್ತೆಗಳಿಲ್ಲದೆ ಮಳೆಗಾಲದಲ್ಲಂತೂ ಓಡಾಡುವುದು ಹರಸಾಹಸವಾಗಿದೆ. ಚರಂಡಿಗಳು ತುಂಬಿ ತುಳುಕುತ್ತಿದ್ದು,ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸಿದೆ.
ನಿವಾಸಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ವಾರಗಟ್ಟಲೆ ನೀರಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.
ಚುನಾವಣೆ ಸಮಯದಲ್ಲಿ ಮತ ಕೇಳಲು ಬರುವ ಜನಪ್ರತಿನಿಧಿಗಳು, ಗೆದ್ದ ನಂತರ ಈ ಭಾಗದ ಕಡೆಗೆ ತಿರುಗಿಯೂ ನೋಡುತ್ತಿಲ್ಲ. ಅನೇಕ ಬಾರಿ ದೂರು ನೀಡಿದರೂ ಅಧಿಕಾರಿ ಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಿವಾಸಿಗಳು ದೂರಿದ್ದಾರೆ. ನರಸಿಂಹ ಪೇಟೆಯ ನಿವಾಸಿಗಳು ಗುಂಪುಗೂಡಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ನಮಗೆ ಕನಿಷ್ಠ ಸೌಕರ್ಯಗಳಾದ ರಸ್ತೆ ಮತ್ತು ನೀರನ್ನು ಒದಗಿಸಿಕೊಡಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು"ಎಂದು ಎಚ್ಚರಿಸಿದ್ದಾರೆ.
ನಗರಸಭೆ ಅಧಿಕಾರಿಗಳು ಮತ್ತು ಸಂಬಂಧಪಟ್ಟ ವಾರ್ಡ್ ಕೌನ್ಸಿಲರ್ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಇಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿ ದ್ದಾರೆ.