ಚಿಕ್ಕಬಳ್ಳಾಪುರ: ಮಕ್ಕಳ ಹಕ್ಕುಗಳ ರಕ್ಷಣೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ಅಧಿಕಾರಿಯ ಕಾನೂನುಬದ್ಧ ಮತ್ತು ನೈತಿಕ ಹೊಣೆಗಾರಿಕೆಯಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು, ಆರೋಗ್ಯ ಸಂಸ್ಥೆಗಳು ಹಾಗೂ ಮಕ್ಕಳ ಆರೈಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಮಕ್ಕಳಿಗೆ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ, ಸುರಕ್ಷಿತ ವಾತಾವರಣ ಹಾಗೂ ಗುಣಮಟ್ಟದ ಸೇವೆಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯಕ್ಕೆ ಒಳಗಾಗಬಾರದು ಎಂದರು.
ಮಕ್ಕಳಿಗೆ ದೊರೆಯುತ್ತಿರುವ ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದ ಅವರು ಪರಿಶೀಲನೆ ವೇಳೆ ಕಂಡುಬರುವ ಲೋಪಗಳನ್ನು ತಕ್ಷಣವೇ ಸರಿಪಡಿಸಿ, ಮಕ್ಕಳ ಕಲ್ಯಾಣಕ್ಕೆ ಯಾವುದೇ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇದನ್ನೂ ಓದಿ: Chinthamani News: ಗ್ರಾಮಗಳ ಅಭಿವೃದ್ಧಿಗಾಗಿ ನಿಲ್ಲದ ಹೋರಾಟ: ಮೂರನೇ ಹಂತದ ಪಾದಯಾತ್ರೆಗೆ ಅನುಮತಿ ಕೋರಿದ ಮಂಜುನಾಥ್
ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ತೀವ್ರ ನಿಗಾ ಘಟಕ (SNCU)ಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಶಿಶುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಅವರು, ಅಗತ್ಯ ಔಷಧೋಪಚಾರ, ವೈದ್ಯಕೀಯ ಉಪಕರಣಗಳು ಹಾಗೂ ಪರಿಣಿತ ವೈದ್ಯರ ಸೇವೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳುವಂತೆ ನಿರ್ದೇಶಿಸಿದರು.
ಪ್ರತಿಯೊಂದು ಮಗುವಿಗೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ . ಇದನ್ನು ತಪ್ಪದೇ ಅಧಿಕಾರಿಗಳು ಪಾಲಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿ ನಿಲಯಗಳ ಅಡುಗೆಮನೆ, ಆಹಾರ ಸಂಗ್ರಹಣೆ, ಅಡುಗೆ ತಯಾರಿಕೆ ಹಾಗೂ ಬಿಸಿಯೂ ಟದ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಸ್ವಚ್ಛತೆ, ಪೌಷ್ಟಿಕತೆ ಮತ್ತು ಸಮಯ ಪಾಲನೆಗೆ ಹೆಚ್ಚಿನ ಒತ್ತು ನೀಡಬೇಕು ಖಡಕ್ ಸೂಚನೆ ನೀಡಿದರು.
ಆಹಾರದ ಗುಣಮಟ್ಟದಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಬಾಲಮಂದಿರ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಕಸ್ತೂರಿಬಾ ಗಾಂಧಿ ಬಾಲಕಿಯರ ವಸತಿ ಶಾಲೆ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಗಳಲ್ಲಿ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಶಿಕ್ಷಣ, ವಸತಿ, ಶೌಚಾಲಯ, ಕುಡಿಯುವ ನೀರು, ಭದ್ರತೆ ಹಾಗೂ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಸುಧಾರಣೆಗೆ ಸೂಚನೆ ನೀಡಿದರು.
ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿದ ವೇಳೆ ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ತನಿಖೆ ನಡೆಸಿ ಮಕ್ಕಳ ಸ್ನೇಹಿ ವಾತಾವರಣದಲ್ಲಿ ನ್ಯಾಯ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆಯಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಪೂರೈಕೆಯಾಗುವ ಆಹಾರ ಧಾನ್ಯಗಳ ಗುಣಮಟ್ಟ ಮತ್ತು ಸಂಗ್ರಹಣೆ ವ್ಯವಸ್ಥೆಯನ್ನು ಪರಿಶೀಲಿಸಿ, ಯಾವುದೇ ರೀತಿಯ ಕಳಪೆ ಆಹಾರ ಮಕ್ಕಳಿಗೆ ತಲುಪದಂತೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯನಾರಾಯಣ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್ ಬಿ., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಸ್ಮಾನ್, ನರೇಂದ್ರ ಬಾಬು, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.