ಶಿಡ್ಲಘಟ್ಟ: ಗಣೇಶೋತ್ಸವವನ್ನು ಪರಿಸರಕ್ಕೆ ಹಾನಿಯಾಗದಂತೆ ಆಚರಿಸಲು ಸಾರ್ವಜನಿಕರು ಹಾಗೂ ಸಂಘಟಕರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಗಗನ ಸಿಂಧು ಮನವಿ ಮಾಡಿದರು.
ನಗರದ ವಿವಿಧೆಡೆ ಗಣೇಶ ಮೂರ್ತಿಗಳ ವೀಕ್ಷಣೆ ನಡೆಸಿದ ಅವರು, ಪಿಒಪಿ ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳ ಬಳಕೆಯಿಂದ ಜಲಮೂಲಗಳು ಕಲುಷಿತಗೊಳ್ಳುವ ಸಾಧ್ಯತೆ ಇದೆ. ಇಂತಹ ಮೂರ್ತಿಗಳಲ್ಲಿರುವ ಹಾನಿಕಾರಕ ಅಂಶಗಳು ನೀರಿನಲ್ಲಿ ಸುಲಭವಾಗಿ ಕರಗದೆ ಜಲಚರ ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುವುದರಿಂದ ಪಿಒಪಿ ಮೂರ್ತಿಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು ಎಂದರು.
ಇದನ್ನೂ ಓದಿ: Sowthadka Ganapathi Temple: ಈ ಗಣಪತಿಗೆ ಘಂಟೆ ಕೊಟ್ಟರೆ ಸಾಕು ಸಮಸ್ಯೆಗಳೆಲ್ಲಾ ಮಾಯ! ದೇವಸ್ಥಾನದ ವಿಶೇಷತೆ ಏನು?
ನೈಸರ್ಗಿಕ ಮಣ್ಣಿನಿಂದ ತಯಾರಿಸಿದ ಮೂರ್ತಿಗಳು ನೀರಿನಲ್ಲಿ ಕರಗುವುದರಿಂದ ಪರಿಸರಕ್ಕೆ ಹೆಚ್ಚಿನ ಹಾನಿಯಾಗುವುದಿಲ್ಲ. ಹೀಗಾಗಿ ಭಕ್ತರು ಮಣ್ಣಿನ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸುವವರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಧ್ವನಿವರ್ಧಕ, ಮೆರವಣಿಗೆ ಹಾಗೂ ವಿಸರ್ಜನೆಗೆ ಸಂಬಂಧಿಸಿದ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿ ಪಿಒಪಿ ಮೂರ್ತಿಗಳ ಮಾರಾಟ, ಖರೀದಿ ಅಥವಾ ಪ್ರತಿಷ್ಠಾಪನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪೌರಾಯುಕ್ತೆ ಅಮೃತ, ಪಿಎಸ್ಐ ಸುನಿಲ್, ರಾಜೇಶ್, ಮುನಿಕೃಷ್ಣ, ಭುವನ್, ಮುಬಾರಕ್ ಮತ್ತಿತರರು ಉಪಸ್ಥಿತರಿದ್ದರು.