ಗೌರಿಬಿದನೂರು: ಕಳೆದ ಮೂರು ವರ್ಷಗಳಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ಸುಮಾರು 600 ಕೋಟಿ ರೂಪಾಯಿ ಅನುದಾನ ತಂದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿರುವ ತೃಪ್ತಿ ಇದೆ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ(MLA K H Puttaswamy Gowda) ಹೇಳಿದರು.
ತಮ್ಮ ಗೃಹ ಕಚೇರಿಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿ.ಪಾಳ್ಯ ಹೋಬಳಿಯ ಒಂಟಿಮನೆಹಳ್ಳಿ ಹಾಗೂ ಸೂರ್ಯನಾಯಕನಹಳ್ಳಿ ಗ್ರಾಮದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಹಲವು ಕಾರ್ಯಕರ್ತರನ್ನು ತಮ್ಮ ಬಣಕ್ಕೆ ಸ್ವಾಗತಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ರಸ್ತೆ, ಚರಂಡಿ, ಶಾಲಾ ಹಾಗೂ ಅಂಗನವಾಡಿ ಕೊಠಡಿಗಳ ನಿರ್ಮಾಣ, ಸೇತುವೆ, ಚೆಕ್ಡ್ಯಾಂ, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಹಲವು ಜನೋಪಯೋಗಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ ಕೆಲವರಿಗೆ ತಾಲೂಕಿನಲ್ಲಾಗಿರುವ ಅಭಿವೃದ್ಧಿ ಕಾಮಗಾರಿಗಳು ಕಾಣಿಸುತ್ತಿಲ್ಲ ಎಂದು ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ವ್ಯಂಗ್ಯವಾಡಿ ದರು.
ಮುಂದಿನ ಕೆಲ ದಿನಗಳಲ್ಲಿ ಸುಮಾರು 100 ಕೋಟಿ ರೂಪಾಯಿ ಅನುದಾನ ದೊರೆಯಲಿದ್ದು, ತಾಲೂಕಿನ ಅಗತ್ಯವಿರುವ ಪ್ರದೇಶಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳ ಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಆರ್.ಆರ್.ರೆಡ್ಡಿ, ನಾಗೇಂದ್ರ, ವಿಜಯಕುಮಾರ್ ಸೇರಿದಂತೆ ಒಂಟಿಮನೆಹಳ್ಳಿ ಹಾಗೂ ಸೂರ್ಯನಾಯಕನಹಳ್ಳಿ ಗ್ರಾಮದ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.