ಚಿಕ್ಕಬಳ್ಳಾಪುರ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅಸಂಘಟಿತ ವಲಯದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಿಐಟಿಯು(CITU) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ನಡೆದ 'ಕರಾಳ ದಿನಾಚರಣೆ' ಯಲ್ಲಿ ಸಾವಿರಾರು ಸ್ಕೀಂ ನೌಕರರು ಭಾಗವಹಿಸಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಮಾನ ಕೆಲಸಕ್ಕೆ ಸಮಾನ ವೇತನ, ಗೌರವಧನ ಹೆಚ್ಚಳ, ಅಂಗನವಾಡಿ ಮತ್ತು ಅಕ್ಷರ ದಾಸೋಹ ಯೋಜನೆಗಳಿಗೆ ಸಮರ್ಪಕ ಅನುದಾನ, ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಪ್ರಸ್ತಾವ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: CITU: ಸಿಐಟಿಯುನಿಂದ ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ಲಕ್ಷ್ಮಿದೇವಮ್ಮ ಮತ್ತು ಇತರೆ ಮುಖಂಡರು, ಐಸಿಡಿಎಸ್ ಹಾಗೂ ಅಕ್ಷರ ದಾಸೋಹ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಸರ್ಕಾರಗಳು ಹೆಚ್ಚಿಸದೆ ಯೋಜನೆಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಆರೋಪಿಸಿದರು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸಬೇಕು, ಚುನಾವಣಾ ಭರವಸೆಯಂತೆ ವೇತನ ಪರಿಷ್ಕರಣೆ ಜಾರಿಗೊಳಿಸಬೇಕು, ಎಲ್ಲ ಅಂಗನವಾಡಿ ಕೇಂದ್ರ ಗಳಲ್ಲಿ ಎಲ್ಕೆಜಿ–ಯುಕೆಜಿ ಆರಂಭಿಸಲು ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ದರು.
ಬಿಸಿಯೂಟ ನೌಕರರಿಗೆ ಆರು ಗಂಟೆಗಳ ಕೆಲಸದ ಅವಧಿ ಜಾರಿಗೊಳಿಸುವುದು, ಎಸ್ಡಿಎಂಸಿಗೆ ಜವಾಬ್ದಾರಿ ವರ್ಗಾಯಿಸುವ ಕ್ರಮ ಹಿಂಪಡೆಯುವುದು, ಇಸ್ಕಾನ್ ಸೇರಿದಂತೆ ಖಾಸಗಿ ಸಂಸ್ಥೆಗಳಿಗೆ ಬಿಸಿಯೂಟ ಯೋಜನೆ ನೀಡದಿರುವುದು, ಕೆಲಸದ ಭದ್ರತೆ, ಮಾಸಿಕ ₹10 ಸಾವಿರ ಪಿಂಚಣಿ, ನಿವೃತ್ತಿ ಸೌಲಭ್ಯ, ಅಪಘಾತ ಪರಿಹಾರ ಹಾಗೂ ಡಿಜಿಟಲ್ ಕಾರ್ಯದ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳ ನಿಲ್ಲಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾ ರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಜಿ.ಎಂ. ಲಕ್ಷ್ಮೀದೇವಮ್ಮ, ಕಾರ್ಯದರ್ಶಿ ರತ್ನಮ್ಮ, ಖಜಾಂಚಿ ವೆಂಕಟಲಕ್ಷ್ಮಿ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಸಿಐಟಿಯು ಗೌರವಾಧ್ಯಕ್ಷ ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಮಂಜುಳಾ ಕೆ.ಆರ್., ಖಜಾಂಚಿ ರಾಜಮ್ಮ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸಾವಿರಾರು ಅಂಗನವಾಡಿ ಮತ್ತು ಅಕ್ಷರ ದಾಸೋಹ ನೌಕರರು ಪಾಲ್ಗೊಂಡಿದ್ದರು.