ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವ ಉದ್ದೇಶ ದಿಂದ ಘನ ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ಕಡ್ಡಾಯವಾಗಿ ವಸೂಲಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 157 ಗ್ರಾಮ ಪಂಚಾಯಿತಿಗಳಿದ್ದು, ಈ ಪೈಕಿ 130 ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿನಿತ್ಯ ಕಸ ಸಂಗ್ರಹಣೆ ಮಾಡಲಾಗುತ್ತಿದೆ.
ಇದನ್ನೂ ಓದಿ: Chinthamani News: ಮುರುಗಮಲ್ಲ ಉರುಸ್ ಮಹೋತ್ಸವ: ದರ್ಗಾದಲ್ಲಿ ಜೆ.ಕೆ.ಕೃಷ್ಣಾರೆಡ್ಡಿ ವಿಶೇಷ ಪೂಜೆ
ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟುಂಬ ಗಳಿಗೆ ಈಗಾಗಲೇ ಕಸದ ಬುಟ್ಟಿಗಳನ್ನು ವಿತರಿಸಲಾಗಿದೆ. ಪ್ರತಿ ಪಂಚಾಯಿತಿಗೆ ಕಸ ವಿಲೇವಾರಿ ವಾಹನ ಹಾಗೂ ಕ್ಲಸ್ಟರ್ ಮಟ್ಟದಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ನಿರ್ಮಿಸಲಾಗಿದ್ದು, ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರ ಮೂಲಕ ಕಸವನ್ನು ವೈಜ್ಞಾನಿಕವಾಗಿ ವಿಂಗಡಿಸಿ ನಿರ್ವಹಿಸಲಾಗುತ್ತಿದೆ ಎಂದರು.
ಸ್ವಚ್ಛತಾ ಸಿಬ್ಬಂದಿಗೆ ಗೌರವಧನಕ್ಕೆ ಬಳಕೆ
ಪ್ರತಿ ತಿಂಗಳು ಬಳಕೆದಾರರ ಶುಲ್ಕವನ್ನು ಕಡ್ಡಾಯವಾಗಿ ವಸೂಲಿ ಮಾಡಬೇಕು. ಇದರಿಂದ ಕಸ ಸಂಗ್ರಹಿಸುವ ವಾಹನಗಳ ಚಾಲಕರು, ಮನೆ ಹಂತದಲ್ಲಿ ತ್ಯಾಜ್ಯ ಸಂಗ್ರಹಿಸುವವರು ಹಾಗೂ ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಕಸ ವಿಂಗಡಿಸುವ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಗೌರವಧನ ನೀಡಲು ಅನುಕೂಲವಾಗಲಿದೆ ಎಂದು ಡಾ.ನವೀನ್ ಭಟ್ ತಿಳಿಸಿದರು.
ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ತ್ಯಾಜ್ಯವನ್ನು ಎಲ್ಲೆಂದ ರಲ್ಲಿ ಎಸೆಯದೆ, ಗ್ರಾಮ ಪಂಚಾಯಿತಿಗಳ ಕಸ ಸಂಗ್ರಹಣಾ ವ್ಯವಸ್ಥೆಗೆ ಸಹಕರಿಸಬೇಕು. ಗ್ರಾಮೀಣ ಪ್ರದೇಶವನ್ನು ಸ್ವಚ್ಛ ಹಾಗೂ ಸುಂದರವಾಗಿಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯ ವಾಗಿದೆ ಎಂದು ಮನವಿ ಮಾಡಿದರು.