ಗುಡಿಬಂಡೆ: ಭೌಗೋಳಿಕ ಪ್ರದೇಶವನ್ನೊಳಗೊಂಡ ಕ್ಷೇತ್ರವನ್ನು ಮರುವಿಂಗಡನೆ ಮಾಡಿ ಗುಡಿ ಬಂಡೆಯನ್ನು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಬೇರ್ಪಡಿಸಿ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ತಾಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ವತಿಯಿಂದ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಮಾತನಾಡಿ, ಗುಡಿಬಂಡೆ ತಾಲೂಕು ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲೂಕಾಗಿದೆ. ಇದಕ್ಕೆ ಮುಖ್ಯ ಕಾರಣ ಅನುದಾನಗಳ ಕೊರತೆ. ಗುಡಿಬಂಡೆ ತಾಲೂಕು ಬಾಗೇಪಲ್ಲಿ ಕ್ಷೇತ್ರಕ್ಕೆ ಸೇರಿರುವ ಕಾರಣದಿಂದ ಕ್ಷೇತ್ರಕ್ಕೆ ಬರುವಂತಹ ಅನುದಾನ ಸಾಕಾಗುತ್ತಿಲ್ಲ. ಇದರಿಂದ ಅಭಿವೃದ್ದಿ ವೇಗ ಕುಂಠಿತವಾಗುತ್ತಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರಗಳ ಪುನರ್ ವಿಂಗಡನೆ ಕಾರ್ಯ ನಡೆಯಲಿದೆ ಎಂಬ ಮಾಹಿತಿ ಇದ್ದು, ಆ ಸಮಯದಲ್ಲಿ ಗುಡಿಬಂಡೆಯನ್ನು ಸಹ ಪ್ರತ್ಯೇಕ ವಿಧಾನಸಭಾ ಕ್ಷೇತ್ರವನ್ನಾಗಿ ಘೋಷಣೆ ಮಾಡಬೇಕು ಎಂದರು.
ಇದನ್ನೂ ಓದಿ: Gudibande News: ವ್ಯಾಸಂಗದ ಸಮಯವನ್ನು ವ್ಯರ್ಥ ಮಾಡದೇ ಓದುವ ಮೂಲಕ ಸಾಧನೆ ಮಾಡಿ: ಭರತ್ ಪಟೇಲ್
ಬಳಿಕ ನಿವೃತ್ತ ಉಪನ್ಯಾಸಕ ಬಿ.ಅಮೀರ್ ಜಾನ್ ಮಾತನಾಡಿ, ನಮ್ಮ ಅಸ್ತಿತ್ವದ ಉಳಿವಿಗಾಗಿ ನಾವೆಲ್ಲರೂ ಹೋರಾಟಕ್ಕೆ ಇಳಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಪ್ರಸ್ತುತ ಜನಗಣತಿ ಕಾರ್ಯ ನಡೆಯುತ್ತಿದ್ದು, ಇದು ಮುಗಿದ ತಕ್ಷಣ ಕ್ಷೇತ್ರ ಪುನರ್ವಿಂಗಡನೆ ಪ್ರಕ್ರಿಯೆ ಆರಂಭವಾಗಲಿದೆ. ನಮ್ಮ ಹೋರಾಟದ ಕಿಚ್ಚು ಸರ್ಕಾರಕ್ಕೆ ಮುಟ್ಟುವ ತನಕ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತಿರುತ್ತದೆ. ಈ ಹೋರಾಟಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಆಗ ಮಾತ್ರ ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂದರು.
ಈ ಸಮಯದಲ್ಲಿ ನಿವೃತ್ತ ನೌಕರರ ಸಂಘದ ಜಿ.ವಿ.ವೆಂಕಟೇಶ್, ನಾರಾಯಣಸ್ವಾಮಿ, ಮಂಜು ನಾಥ್, ಮುಖಂಡರಾದ ಶ್ರೀನಿವಾಸ್ ಯಾದವ್ ಸೇರಿದಂತೆ ಹಲವರು ಹಾಜರಿದ್ದರು.