ಬಾಗೇಪಲ್ಲಿ: ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧು ಗೊಳಿಸಿ ರಾಜ್ಯ ಬೆಂಗಳೂರು ಹೈಕೋರ್ಟ್ನ ಏಕಸದಸ್ಯ ಪೀಠ ಸೋಮವಾರ ಆದೇಶ ಹೊರಡಿಸಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.
2023ರ ಚುನಾವಣೆಯಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅವರು ಸುಬ್ಬಾ ರೆಡ್ಡಿ ವಿರುದ್ದ ಸಲ್ಲಿಸಿದ್ದ ತಕರಾರು ಅರ್ಜಿ ಸಲ್ಲಿಸಿ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ಹೈಕೋರ್ಟ್ ಸೋಮವಾರ ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠವು ತೀರ್ಪು ಪ್ರಕಟಿಸಲಾಗಿದೆ.
ತಮ್ಮನ್ನು ವಿಜಯಿ ಅಭ್ಯರ್ಥಿ ಎಂದು ಘೋಷಿಸಲು ಮುನಿರಾಜು ಮನವಿ
ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಹೇಳಿರುವ ಇದೇ ಏಕ ಸದಸ್ಯ ಪೀಠದ ಎದುರು ಪರಾಜಿತ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಅವರು ತಮ್ಮನ್ನು ವಿಜಯಿ ಅಭ್ಯರ್ಥಿ ಎಂದು ಘೋಷಿಸಲು ಮನವಿ ಮಾಡಿದರು. ಆದರೆ ನ್ಯಾಯಾಲಯ ಸಿ. ಮುನಿರಾಜು ಅವರನ್ನು ವಿಜಯಿ ಎಂದು ಘೋಷಿಸಲು ನಿರಾಕರಿಸಿದೆ.
ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಆದೇಶ ಪ್ರಕಟವಾಗುತ್ತಿದ್ದಂತೆ ಹೈಕೋರ್ಟ್?, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೆ ಆದೇಶದ ಪ್ರತಿ ನೀಡಲಾಗಿದೆ. ಇನ್ನು ಸುಬ್ಬಾರೆಡ್ಡಿ ಪರ ವಕೀಲರು ಒಂದು ತಿಂಗಳ ಕಾಲ ಆದೇಶ ಅಮಾನತಿನಲ್ಲಿಡಿ ಎಂದು ಮನವಿ ಮಾಡಿದರು. ಆದರೆ ಕೋರ್ಟ್ ಆದೇಶ ಅಮಾನತಿನಲ್ಲಿಡಲು ನಿರಾಕರಿಸಿದೆ.
ಏನಿದು ಪ್ರಕರಣ?
ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚುನಾವಣಾ ಅಯೋಗಕ್ಕೆ ಸಲ್ಲಿಸಿರುವ ನಾಮ ಪತ್ರ ದೋಷ ಪೂರಿತವಾಗಿತ್ತು ಎಂದು ಆರೋಪಿಸಲಾಗಿತ್ತು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ 2023 ಮೇ 10 ರಂದು ನಡೆದ ಚುನಾವಣೆ ವೇಳೆ ಸಲ್ಲಿಸಿದ್ದ ನಾಮಪತ್ರದಲ್ಲಿ ಬಾಗೇಪಲ್ಲಿಯ ಸದರಿ ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟಿದ್ದರು ಮತ್ತು ಆಸ್ತಿಗಳ ತೆರಿಗೆ ಪಾವತಿ ಬಾಕಿ ಕುರಿತು ಮಾಹಿತಿ ನೀಡದೆ ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಸಿ ಮುನಿರಾಜು ಆರೋಪ ಮಾಡಿದ್ದರು.
ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಬೆಂಬಲಿತ ಅಭ್ಯರ್ಥಿ ಮಂಜುನಾಥರೆಡ್ಡಿ ಚಿಮುಲ್ ಆಧ್ಯಕ್ಷ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಸಂತೋಷಕ್ಕೆ ಕಾರಣವಾದ ದಿನವೇ ಹೈಕೋರ್ಟ್ ಶಾಸಕತ್ವ ಅಹರ್ನ ಎಂದು ಘೋಷಣೆ ಮಾಡಿರುವುದು ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರದಲ್ಲಿ ಸೂತಕದ ವಾತಾವರಣ ಮನೆ ಮಾಡುವಂತೆ ಮಾಡಿದೆ.
ಈ ಎಲ್ಲಾ ಬೆಳವಣಿಗೆಗಳು ಎಲ್ಲಿಗೆ ಹೋಗಿ ಮುಟ್ಟುತ್ತವೆ ಎಂಬುದನ್ನು ಕಾಲವೇ ಉತ್ತರಿಸಬೇಕಿದೆ.