ಶಿಡ್ಲಘಟ್ಟ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಹಾಗೂ ಜನಸಂಪರ್ಕ ಕಾರ್ಯ ಗಳು ಶಿಸ್ತಿನಿಂದ ಮತ್ತು ನಿರಂತರವಾಗಿ ನಡೆಯುತ್ತಿವೆ ಎಂದು ಪಕ್ಷದ ಮುಖಂಡ ಪುಟ್ಟು ಆಂಜಿನಪ್ಪ ಹೇಳಿದರು.
ತಾಲ್ಲೂಕಿನ ಗಂಗನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರಾದ ವಿ.ಮುನಿಯಪ್ಪ ಹಾಗೂ ಶಶಿಧರ್ ಮುನಿಯಪ್ಪ ಅವರ ಮಾರ್ಗದರ್ಶನದಲ್ಲಿ ಪಕ್ಷದ ತತ್ವ ಮತ್ತು ಸಿದ್ಧಾಂತಗಳನ್ನು ಅನುಸರಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯ ಕರ್ತರೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದರು.
ಇದೇ ವೇಳೆ, ಪುಟ್ಟು ಆಂಜಿನಪ್ಪ ಬಣ ಹಾಗೂ ರಾಜೀವ್ ಗೌಡರ ಬಣ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ ಹುಟ್ಟುಹಾಕಲು ಕೆಲವು ಗುಂಪುಗಳು ಯತ್ನಿಸುತ್ತಿವೆ ಎಂದು ಆರೋಪಿಸಿದರು. ಪಕ್ಷದಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಬಲವರ್ಧನೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಕಾರ್ಯಕರ್ತರು ಶಿಸ್ತಿನಿಂದ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಜನರ ವಿಶ್ವಾಸ ಗಳಿಸಲು ಸಾಧ್ಯ ಎಂದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.