ಚಿಂತಾಮಣಿ: ರಾಜ್ಯದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ(Transport and Excise Minister Ramalinga Reddy) ಅವರು ಚಿಂತಾಮಣಿ ತಾಲೂಕಿನ ಯಗವ ಕೋಟೆ ಗ್ರಾಮದ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ವಿವಿಧ ವಿಷಯಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಮಸೂದೆ(Women's Reservation Bill) ಜಾರಿಯ ವಿಳಂಬದ ಕುರಿತು ಭಾರತೀಯ ಜನತಾ ಪಾರ್ಟಿ(ಬಿಜೆಪಿ)ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
2023ರಲ್ಲಿಯೇ ಪಾರ್ಲಿಮೆಂಟ್ ಮತ್ತು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಎಲ್ಲಾ ಪಕ್ಷಗಳು ಒಮ್ಮತದ ಅನುಮೋದನೆ ನೀಡಿವೆ. ಹೀಗಿದ್ದರೂ, ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆಯ ನೆಪವೊಡ್ಡಿ ಇದನ್ನು ಜಾರಿಗೊಳಿಸುವುದನ್ನು ಮುಂದೂಡುತ್ತಿರು ವುದು ಸರಿಯಲ್ಲ ಎಂದು ಕಿಡಿಕಾರಿದರು.
ದೇಶದಲ್ಲಿ ಪ್ರಥಮ ಬಾರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ತಂದವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ. ಅಧಿಕಾರ ವಿಕೇಂದ್ರಿಕರಣದ ಮೂಲಕ ಮಹಿಳೆಯರಿಗೆ ರಾಜಕೀಯ ಶಕ್ತಿ ನೀಡಿದ್ದು ಕಾಂಗ್ರೆಸ್ ಪಕ್ಷ ಎಂದು ಅವರು ಪ್ರತಿಪಾದಿಸಿದರು.
ಬಿಜೆಪಿ ನಾಯಕರಿಗೆ "ನಾಚಿಕೆ, ಮಾನ, ಮರ್ಯಾದೆ ಇಲ್ಲ"ಎಂದು ಕಟುವಾಗಿ ಟೀಕಿಸಿದ ಅವರು, ಈಗಾಗಲೇ ಅನುಮೋದನೆಗೊಂಡಿರುವ ಮಸೂದೆಯನ್ನು ಜಾರಿಗೊಳಿಸಲು ಯಾವುದೇ ಅಡೆತಡೆಗಳಿಲ್ಲದಿದ್ದರೂ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು.
ಇಲಾಖೆಗೆ ಸಂಬಂಧಿಸಿದ ದೂರುಗಳ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಮತ್ತು ಅಂತಹವ ರನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.