ಗುಡಿಬಂಡೆ: ಮಕ್ಕಳಾಗದಂತೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಗುಡಿಬಂಡೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಆಂಧ್ರಪ್ರದೇಶ ಮೂಲದ 31 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕೊತ್ತವಾರಿ ಪಲ್ಲಿ ಗ್ರಾಮದ ನಿವಾಸಿ ಸಿಂಧೂಜಾ (31) ಎಂದು ಗುರುತಿಸಲಾಗಿದೆ.
ಮಕ್ಕಳಾಗದಂತೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಉದ್ದೇಶದಿಂದ ಸಿಂಧೂಜಾ ಅವರನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆಗೂ ಮುನ್ನ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿತ್ತು. ಬಳಿಕ ಅವರನ್ನು ಶಸ್ತ್ರಚಿಕಿತ್ಸಾ ಕೊಠಡಿಗೆ ಕರೆದೊಯ್ಯಲಾಗಿತ್ತು.
ಇದನ್ನೂ ಓದಿ: Shidlaghatta Crime: ಅಕ್ರಮವಾಗಿ ಸಾಗಿಸುತ್ತಿದ್ದ ಗೋಧಿ ಕ್ಯಾಂಟರ್ ಸೆರೆ; ಇಬ್ಬರ ವಿರುದ್ಧ ಪ್ರಕರಣ ದಾಖಲು
ಶಸ್ತ್ರಚಿಕಿತ್ಸೆ ಆರಂಭಕ್ಕೂ ಮುನ್ನ ಅರಿವಳಿಕೆ ನೀಡುವ ಸಂದರ್ಭದಲ್ಲಿ ಸಿಂಧೂಜಾ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ ಎನ್ನಲಾಗಿದ್ದು, ತಕ್ಷಣ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಲು ಮುಂದಾದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮೃತರ ಪತಿ ಪ್ರತಿಕ್ರಿಯಿಸಿ, ತಮ್ಮ ಪತ್ನಿಗೆ ಈ ಹಿಂದಿನಿಂದಲೂ ಹೃದಯ ಸಂಬಂಧಿ ಆರೋಗ್ಯ ಸಮಸ್ಯೆ ಇತ್ತು. ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಅಕಸ್ಮಿಕವಾಗಿ ಮೃತಪಟ್ಟಿದ್ದಾರೆ. ಇದರಲ್ಲಿ ಆಸ್ಪತ್ರೆಯ ವೈದ್ಯರ ಯಾವುದೇ ತಪ್ಪಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಮರಣೋತ್ತರ ಪರೀಕ್ಷೆಯ ಅಗತ್ಯವಿಲ್ಲ ಎಂಬುದಾಗಿಯೂ ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.