ಶಿಡ್ಲಘಟ್ಟ : ನಗರದ ನೆಹರೂ ಕ್ರೀಡಾಂಗಣದ ಅಭಿವೃದ್ಧಿಗೆ ವಿವಿಧ ಹಂತಗಳಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದರೂ, ಕ್ರೀಡಾಂಗಣದ ಸ್ಥಿತಿ ಮಾತ್ರ ಬದಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಕಾಮಗಾರಿ ವಿಳಂಬ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ಕ್ರೀಡಾಪಟು ಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಿರ್ಮಿತಿ ಕೇಂದ್ರದ ಕಾರ್ಯವೈಖರಿಯನ್ನು ಪ್ರಶ್ನಿಸಿ ದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಯಂತಿ ಗ್ರಾಮದ ಕ್ರೀಡಾಪಟು ನಾರಾಯಣ ಸ್ವಾಮಿ, 2025–26ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯೋಜನೆಯಡಿ ನೆಹರೂ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದೆ. ಫೆಬ್ರವರಿ ಯಲ್ಲೇ ಅನುಮೋದನೆ ದೊರೆತಿದ್ದರೂ ಸ್ಥಳದಲ್ಲಿ ಕೇವಲ ನಿರ್ಮಾಣ ಸಾಮಗ್ರಿಗಳನ್ನು ಹಾಕಿರುವು ದನ್ನು ಬಿಟ್ಟರೆ ಯಾವುದೇ ಕೆಲಸ ನಡೆದಿಲ್ಲ ಎಂದು ಆರೋಪಿಸಿದರು.
ಕ್ರೀಡಾಂಗಣದಲ್ಲಿರುವ ಶೌಚಾಲಯಗಳು ಸಂಪೂರ್ಣ ಹಾಳಾಗಿದ್ದು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕಾಂಪೌಂಡ್ ಗೋಡೆ ಹಲವೆಡೆ ಕುಸಿದಿದ್ದು, ಸ್ವಚ್ಛತೆಯ ಕೊರತೆಯಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರೀಡಾಪಟುಗಳು ಪ್ರತಿದಿನ ಅಭ್ಯಾಸ ನಡೆಸುವುದು ಕಷ್ಟಕರವಾಗಿದೆ ಎಂದು ತಿಳಿಸಿದರು.
ಯೋಜನೆಯಡಿ 400 ಮೀಟರ್ ಅಥ್ಲೆಟಿಕ್ಸ್ ಟ್ರ್ಯಾಕ್ ಅಭಿವೃದ್ಧಿ, ಶೌಚಾಲಯ ದುರಸ್ತಿ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಬೇಕಿತ್ತು. ಆದರೆ ಕಾಮಗಾರಿ ಆರಂಭದಲ್ಲೇ ವಿಳಂಬವಾಗಿದ್ದು, ಅಳವಡಿಸಿರುವ ಕೆಲವು ಸ್ಲ್ಯಾಬ್ಗಳು ಒಡೆದು ಹೋಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಅನುಮಾನ ಹುಟ್ಟಿಸಿದೆ ಎಂದು ಹೇಳಿದರು.
2014–15ನೇ ಸಾಲಿನಲ್ಲಿ ನಿರ್ಮಿತಿ ಕೇಂದ್ರದ ಮೂಲಕ 1.48 ಕೋಟಿ ಹಾಗೂ 2025–26ನೇ ಸಾಲಿ ನಲ್ಲಿ ಮತ್ತೆರಡು ಹಂತಗಳಲ್ಲಿ 10 ಲಕ್ಷ ಅನುದಾನ ಬಿಡುಗಡೆಯಾಗಿದೆ. ಇಷ್ಟೊಂದು ಅನುದಾನ ಬಂದಿದ್ದರೂ ಕ್ರೀಡಾಂಗಣದ ಸ್ಥಿತಿ ಸುಧಾರಿಸದಿರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ 2014ರಿಂದ ಇದುವರೆಗೆ ಬಿಡುಗಡೆಯಾದ ಎಲ್ಲ ಅನುದಾನ ಹಾಗೂ ಕಾಮಗಾರಿಗಳ ಬಗ್ಗೆ ತಾಂತ್ರಿಕ ಮತ್ತು ಆಡಳಿತಾತ್ಮಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಸರ್ಕಾರದ ಅನುದಾನ ದುರುಪಯೋಗವಾಗಿರುವುದು ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿ ಗಳು, ನಿರ್ಮಿತಿ ಕೇಂದ್ರ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಖಾಲಿ ಇರುವ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಿ, ನೆಹರೂ ಕ್ರೀಡಾಂಗಣವನ್ನು ಕ್ರೀಡಾಪಟುಗಳಿಗೆ ಅನುಕೂಲಕರವಾದ ಮಾದರಿ ಕ್ರೀಡಾಂಗಣವಾಗಿ ಅಭಿವೃದ್ಧಿಪಡಿಸಬೇಕು ಎಂದು ನಾರಾಯಣ ಸ್ವಾಮಿ ಒತ್ತಾಯಿಸಿದರು.