Sringeri recount: ಶೃಂಗೇರಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡಗೆ ಬಿಗ್ ರಿಲೀಫ್; ಶಾಸಕರಾಗಿ ಮುಂದುವರಿಸಲು ಸುಪ್ರೀಂ ಕೋರ್ಟ್ ಆದೇಶ
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಮತ್ತು ಅರ್ಹ ಮತಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಹೈಕೋರ್ಟ್ ಸೂಚನೆ ಮೇರೆಗೆ ನಡೆದ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಹೈಕೋರ್ಟ್ ಸೂಚನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಯಥಾಸ್ಥಿತಿ ಮುಂದುವರಿಸುವಂತೆ ಸೂಚನೆ ನೀಡಿದೆ.
ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ. -
ನವದೆಹಲಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡರಿಗೆ (TD Rajegowda) ಬಿಗ್ ರಿಲೀಫ್ ಸಿಕ್ಕಿದೆ. ಶಾಸಕರಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡರನ್ನೇ ಮುಂದುವರಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮರು ಮತ ಎಣಿಕೆಯ ದಾಖಲೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ.
ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಡಿ.ಎನ್. ಜೀವರಾಜ್ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಯಥಾಸ್ಥಿತಿ ಮುಂದುವರಿಸಲು ಸುಪ್ರೀ ಕೋರ್ಟ್ ಸೂಚನೆ ನೀಡಿದೆ. ಇದರಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಅವರೇ ಮತ್ತೆ ಶಾಸಕರಾಗಿ ಮುಂದುವರಿಯಲಿದ್ದಾರೆ.
ಈ ಹಿಂದೆ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಅಂಚೆ ಮತಗಳ ಎಣಿಕೆಯಲ್ಲಿ ಲೋಪವಿದೆ ಎಂದು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ ಮರು ಎಣಿಕೆಗೆ ಹೈಕೋರ್ಟ್ ಆದೇಶ ನೀಡಿತ್ತು. ಮರು ಎಣಿಕೆ ಸಂದರ್ಭದಲ್ಲಿ ಜೀವರಾಜ್ ಅವರ ಕೈ ಮೇಲಾಗಿ ಚುನಾವಣಾ ಆಯೋಗ ಜೀವರಾಜ್ ಅವರನ್ನು ಶಾಸಕ ಎಂದು ಘೋಷಿಸಿ, ಪ್ರಮಾಣಪತ್ರ ನೀಡಿತ್ತು.
ಕಳೆದ 4 ದಿನಗಳ ಹಿಂದಷ್ಟೆ ಅವರು ಶಾಸಕರಾಗಿ ಜೀವರಾಜ್ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಅಂಚೆ ಮತಗಳ ಮರು ಎಣಿಕೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಶಾಸಕ ರಾಜೇಗೌಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಸರ್ವೋಚ್ಚ ನ್ಯಾಯಾಲಯವು, ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿದೆ.