ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದವರ ಕಾರು ಚಿಕ್ಕಮಗಳೂರು ಬಳಿ ಭೀಕರ ಅಪಘಾತಕ್ಕೀಡಾಗಿ (Chikkamagaluru Car Accident) ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಮೃತರು ತುಮಕೂರಿನ ಮೂಲದವರು ಎಂದು ತಿಳಿದು ಬಂದಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಶುಕ್ರವಾರ ರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರಿನಲ್ಲಿದ್ದ ಗುರುಕಿರಣ್ (28), ಮೋಹನ್ (30) ಜ್ಞಾನೇಶ್ (28) ಮೃತ ದುರ್ದೈವಿಗಳಾಗಿದ್ದಾರೆ.
ಅಪಘಾತದ ಶಬ್ಧ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದು ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆದು, ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಘಟನೆಯ ಕುರಿತು ಆಂಬುಲೆನ್ಸ್ ಚಾಲಕ ಆರೀಫ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಮಧ್ಯರಾತ್ರಿ ಸುಮಾರು 1:30ರ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಕಾರು ರಸ್ತೆ ಬದಿಯ ಕಟ್ಟೆಗೆ ಹೊಡೆದು ನಂತರ ಲಾರಿಗೆ ಡಿಕ್ಕಿಯಾಗಿದೆ. ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣೆಗೆ ಮುಂದಾಗಿದ್ದರು. ಆದರೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಾಯಗೊಂಡ ಇಬ್ಬರನ್ನು ಹಾಸನ ಆಸ್ಪತ್ರೆಗೆ ರವಾನಿಸಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಇನ್ನೊಬ್ಬರಿಗೆ ಹೆಚ್ಚಿನ ಗಾಯಗಳಾಗಿಲ್ಲ. ಎಲ್ಲರೈ ಧರ್ಮಸ್ಥಳ ಪ್ರವಾಸಕ್ಕೆ ಹೊರಟಿದ್ದರು ಎಂದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ಮೃತ ದೇಹಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.