KSRTC staff strike: ಸಾರಿಗೆ ಮುಷ್ಕರ; 38 ತಿಂಗಳ ಬಾಕಿ ವೇತನ ಬೇಡಿಕೆ ಸಮಂಜಸವಲ್ಲ ಎಂದ ಸಿಎಂ
CM Siddaramaiah: ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.


ಬೆಂಗಳೂರು: ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ಹೀಗಾಗಿ ನಾಳೆ ಕರೆದಿರುವ ಮುಷ್ಕರವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮನವಿ ಮಾಡಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ (KSRTC staff strike) ಸೋಮವಾರ ವಿಧಾನಸೌಧ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ಹೆಚ್ಚಳ ಮಾಡಲಾಗಿತ್ತು. ಬಳಿಕ 2020ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 01-03-23ರಲ್ಲಿ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ.
ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯು 01-1-22 ರಿಂದ 28-2-23ರವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು ಎಂದು ತಿಳಿಸಿದರು.
ಸಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು 01-03-23 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4 ಸಾವಿರ ಕೋಟಿ ಸಾಲ ಇತ್ತು. 2018ರಲ್ಲಿ ಕೇವಲ ರೂ. 14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲಾ ನಿಗಮದವರು ಸಹಕರಿಸಬೇಕು. ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಈ ಸುದ್ದಿಯನ್ನೂ ಓದಿ | KSRTC staff strike: ನಾಳಿನ ಸಾರಿಗೆ ಮುಷ್ಕರ ಮುಂದೂಡಲು ಹೈಕೋರ್ಟ್ ಸೂಚನೆ
ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಸ್ಆರ್ಟಿಸಿ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್, ಎನ್ಡಬ್ಲ್ಯುಕೆಎಸ್ಆರ್ಟಿಸಿ ಅಧ್ಯಕ್ಷ ರಾಜು ಕಾಗೆ, ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.