ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lake Encroachment: ಕೆರೆ ಒತ್ತುವರಿ ತೆರವುಗೊಳಿಸದ್ದಕ್ಕೆ ಸಿಎಂ ಗರಂ; ಡಿಸಿ, ಸಿಇಒಗಳ ವಿರುದ್ಧ ಕ್ರಮಕ್ಕೆ ಸೂಚನೆ

Lake Encroachment: ರಾಜ್ಯದಲ್ಲಿ 10931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

ಕೆರೆ ಒತ್ತುವರಿ ತೆರವುಗೊಳಿಸದ್ದಕ್ಕೆ ಡಿಸಿ, ಸಿಇಒಗಳ ವಿರುದ್ಧ ಸಿಎಂ ಗರಂ

Profile Prabhakara R May 30, 2025 1:54 PM

ಬೆಂಗಳೂರು: ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಒಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಸಭೆಯಲ್ಲಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ (Lake Encroachment) ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಸಿಎಂ, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

ರಾಜ್ಯದಲ್ಲಿ 10931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕೂಡಲೇ ಇದರ ಬಗ್ಗೆ ಗಮನಹರಿಸಿ, ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ, ಒತ್ತುವರಿ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗೆ ಹರಿದು ಬರುವಂತೆ ವ್ಯವಸ್ಥೆ ಮಾಡಬೇಕು. ಕೆರೆಗಳ ಒತ್ತುವರಿ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಇನ್ನು ಸಿಂಧುತ್ವ ಪ್ರಮಾಣ ಪತ್ರವನ್ನು ನಿಗದಿತವಾಗಿ ಒಂದು ತಿಂಗಳ ಒಳಗಾಗಿ ನೀಡಬೇಕಿದ್ದರೂ, ಅದನ್ನು ಕೆಲವು ಜಿಲ್ಲೆಗಳಲ್ಲಿ ತಿಂಗಳುಗಟ್ಟಲೆ ವಿಲೇವಾರಿ ಮಾಡದೆ ಸತಾಯಿಸುವ ಬಗ್ಗೆ ದೂರುಗಳು ಬರುತ್ತಿವೆ. ಅಂತಹ ವಿಳಂಬ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಎಸ್ಎಸ್ಎಲ್‌ಸಿ, ಪಿಯುಸಿ ಫಲಿತಾಂಶ ಕಳಪೆಯಾಗಲು ಕಾರಣವೇನು?

ಸರ್ಕಾರಿ ಶಾಲೆಗಳಿಗೆ ಎಲ್ಲಾ ಸವಲತ್ತುಗಳನ್ನು ನೀಡದರೂ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಫಲಿತಾಂಶ ಕಳಪೆಯಾಗಿರಲು ಕಾರಣವೇನು? ಈ ಬಗ್ಗೆ ಆತ್ಮಾವಲೋಕನ ನಡೆಸಬೇಕು. ತಮ್ಮ ಜಿಲ್ಲೆಗಳಲ್ಲಿ ಫಲಿತಾಂಶ ಸುಧಾರಿಸುವುದು ಆಯಾ ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸುಧಾರಣೆಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದರೂ, ಫಲಿತಾಂಶದಲ್ಲಿ ಯಾವಾಗಲೂ ಹಿಂದಿರಲು ಕಾರಣವೇನು? ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ, ಸಿಇಒಗಳು ನಿರಂತರ ಗಮನ ಹರಿಸಬೇಕು.

ರಾಜ್ಯದಲ್ಲಿ ಕಂದಾಯ ಗ್ರಾಮಗಳ ಘೋಷಣೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಆದರೆ ಇನ್ನೂ ಬಾಕಿಯುಳಿದಿರುವ ಕಂದಾಯ ಗ್ರಾಮಗಳನ್ನು ಘೋಷಿಸುವ ಕಾರ್ಯ ಮುಂದಿನ 6ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಬಗರ್ ಹುಕುಂ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸಬೇಕು. ಇದು ಯಾಕೆ ಕಡಿಮೆಯಾಗುತ್ತಿದೆ? ಪೋಡಿಮುಕ್ತ ಅಭಿಯಾನ ನಿರಂತರವಾಗಿ ಮುಂದುವರೆಸಬೇಕು. ಶೇ.63 ಪೋಡಿಮುಕ್ತ ಆಗಿದ್ದು, ಇದರಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು.

ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ, ಖಬರಸ್ತಾನಗಳಿಗೆ ನಿವೇಶನ ಒದಗಿಸುವುದನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರುದ್ರಭೂಮಿ, ಕಬರಸ್ಥಾನಗಳಿಗೆ ಜಮೀನು ಒದಗಿಸುವುದನ್ನು ವಿಳಂಬ ಮಾಡಬಾರದು. ನಿವೇಶನಗಳು ಅಗತ್ಯವಿರುವ ಇಲಾಖೆಗಳಿಗೆ ನಿವೇಶನಗಳನ್ನು ಆದ್ಯತೆ ಮೇರೆಗೆ ಒದಗಿಸಬೇಕು. 1858 ಗ್ರಾಮೀಣ ಅಂಗನವಾಡಿಗಳಿಗೆ 5187 ನಗರ ಅಂಗನವಾಡಿಗಳಿಗೆ ನಿವೇಶನ ಅಗತ್ಯವಿದೆ. 14 ಸರ್ಕಾರಿ ಕಾಲೇಜು ನಿವೇಶನ ಹಂಚಿಕೆಯಾಗಿಲ್ಲ. ಅರಣ್ಯ ಹಕ್ಕುಗಳಿಗಾಗಿ 295176 ಅರ್ಜಿಗಳು ಸಲ್ಲಿಕೆಯಾಗಿದ್ದು, 16700 ಮಾತ್ರ ಅರಣ್ಯ ಹಕ್ಕು ಪತ್ರ ಒದಗಿಸಲಾಗಿದೆ. ಇದನ್ನು ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಈ ಸುದ್ದಿಯನ್ನೂ ಓದಿ | Karnataka Rains: ಗುಡ್ಡ ಕುಸಿತ; ತಕ್ಷಣ ದಕ್ಷಿಣ ಕನ್ನಡಕ್ಕೆ ತೆರಳಲು ಸಚಿವ ದಿನೇಶ್‌ ಗುಂಡೂರಾವ್‌ಗೆ ಸಿಎಂ ಸೂಚನೆ

ಜಿಲ್ಲಾಧಿಕಾರಿ, ತಹಸೀಲ್ದಾರ್, ಎಸಿ ಕೋರ್ಟ್ ಗಳಲ್ಲಿ ಪ್ರಕರಣಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಮೆರಿಟ್ ಮೇಲೆ ತೀರ್ಮಾನ ಮಾಡಬೇಕು. ಪ್ರಕರಣಗಳನ್ನು ಮುಂದಕ್ಕೆ ಹಾಕುವ ಪ್ರವೃತ್ತಿ ಇರಬಾರದು ಎಂದು ಹೇಳಿದರು.