Dharmasthala: ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ
ಒಂದು ದೇಶದ ಇತಿಹಾಸವನ್ನು ನಿರ್ಧರಿಸುವಲ್ಲಿ ಆ ಕಾಲದಲ್ಲಿ ಬಳಕೆಯಲ್ಲಿದ್ದ ನಾಣ್ಯಗಳೂ ಸಹ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಭಾರತ ಭವ್ಯವಾದ ಪ್ರಾಚೀನ ಇತಿಹಾಸವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ವಿವಿಧ ಕಾಲ ಘಟ್ಟಗಳಲ್ಲಿ ಬಳಕೆಯಲ್ಲಿದ್ದ ಸುಮಾರು 1000 ನಾಣ್ಯಗಳ ಪ್ರದರ್ಶನವೊಂದು ಧರ್ಮಸ್ಥಳದಲ್ಲಿ ನಡೆಯುತ್ತಿದೆ.

ಧರ್ಮಸ್ಥಳ ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ.

ಉಜಿರೆ: ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ಅಪರೂಪ. ಅಂತಹ ನಾಣ್ಯಗಳನ್ನು ನೋಡುವುದರ ಜೊತೆಗೆ ಅವುಗಳ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ (Manjusha Museum) ಅಚ್ಚುಕಟ್ಟಾಗಿ ಮಾಡಿದ್ದಾರೆ. ಡಾ. ಹೆಗ್ಗಡೆಯವರ (Dr D Veerendra Heggade) ಪುರಾತನ ವಸ್ತುಗಳ ಸಂಗ್ರಹಗಳ ಜೊತೆಗೆ ಮೂಡಿಗೆರೆಯ (Mudigere) ಎಂ. ಎಲ್. ಅಶೋಕ್ ಅವರು ಸಂಗ್ರಹಿಸಿದ ಪ್ರಾಚೀನ ಕಾಲದ ನಾಣ್ಯಗಳ ಪ್ರದರ್ಶನವನ್ನು ಆಯೋಜಿಸಿದ್ದು ಶಾಲಾ ಮಕ್ಕಳಿಗೆ, ಆಸಕ್ತರಿಗೆ ನಾಣ್ಯಗಳ ಮೂಲಕ ಇತಿಹಾಸವನ್ನು ತಿಳಿದುಕೊಳ್ಳಲು ಇರುವ ಅವಕಾಶವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ಹೇಳಿದರು.
ಅವರು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಫೆ. 17 ರಿಂದ ಮಾರ್ಚ್ 01ರವರೆಗೆ ನಡೆಯಲಿರುವ ಪ್ರಾಚೀನ ಕಾಲದ ನಾಣ್ಯ ಹಾಗೂ ಅಂಚೆ ಚೀಟಿಗಳ ವಿಶೇಷ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ನಾಣ್ಯಗಳ ಸಂಗ್ರಹಕಾರರಾದ ಮೂಡಿಗೆರೆಯ ಎಂ. ಎಲ್. ಅಶೋಕ್ ಮಾತನಾಡಿ ನನ್ನ ಪ್ರಾಚೀನ ವಸ್ತುಗಳ ಸಂಗ್ರಹಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಮಂಜೂಷಾ ವಸ್ತು ಸಂಗ್ರಹಾಲಯವೇ ಪ್ರೇರಣೆ. ಅವಕಾಶ ಮಾಡಿಕೊಟ್ಟ ಪೂಜ್ಯರಿಗೆ ಹಾಗೂ ಮಂಜೂಷಾದ ಸಿಬಂದಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಾಚೀನ ಭಾರತದಿಂದ ಆರಂಭಗೊಂಡು ಮೊನ್ನೆ ಮೊನ್ನೆಯಷ್ಟೇ ಬಿಡುಗಡೆಗೊಂಡ ನಾಣ್ಯಗಳವರೆಗೆ ಸಂಗ್ರಹಿಸಲಾದ 1000ಕ್ಕೂ ಹೆಚ್ಚಿನ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ.
ಇದನ್ನೂ ಓದಿ: ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ -ನೋಂದಣಿ ಕಛೇರಿ ಉದ್ಘಾಟನೆ

ವಿವಿಧ ರಾಜ-ಮಹಾರಾಜರ ಕಾಲ, ಸ್ವಾತಂತ್ರ್ಯ ಪೂರ್ವ, ಸ್ವತಂತ್ರ ಭಾರತದ ಕಾಲದಿಂದ ಹಿಡಿದು ವಿಶೇಷ ಸಂದರ್ಭಗಳಲ್ಲಿ ಸರಕಾರವು ಬಿಡುಗಡೆಗೊಳಿಸಿದ ನಾಣ್ಯಗಳು, ಅಂಚೆ ಚೀಟಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಚಿನ್ನ, ಬೆಳ್ಳಿ, ತಾಮ್ರ ಹೀಗೆ ಹಲವು ರೀತಿಯ ನಾಣ್ಯಗಳನ್ನು ನೋಡಬಹುದು ಎಂದು ಹೇಳಿದರು.
ಧರ್ಮಸ್ಥಳದಲ್ಲಿರುವ ಮಂಜೂಷಾ ಮ್ಯೂಸಿಯಂನಲ್ಲಿ ವೀರೇಂದ್ರ ಹೆಗ್ಗಡೆಯವರ ಸಂಗ್ರಹಗಳ ಪ್ರದರ್ಶನದ ಜೊತೆಗೆ ವಿವಿಧ ಚಟುವಟಿಕೆ, ಕಾರ್ಯಾಗಾರಗಳ ಮೂಲಕ ಶಾಲಾ ಮಕ್ಕಳಿಗೆ, ಆಸಕ್ತರಿಗೆ ಪುರಾತನ ವಸ್ತುಗಳ ಮಾಹಿತಿ ಒದಗಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಸ್ತು ಸಂಗ್ರಹಾಲಯವು ಜ್ಞಾನ ಹೆಚ್ಚಿಸುವುದರ ಜೊತೆಗೆ ಪ್ರಾಚೀನ ವಸ್ತುಗಳ ಬಗ್ಗೆ ಅರಿವು ಮೂಡಿಸಿ, ಇನ್ನಷ್ಟು ಆಸಕ್ತಿ, ಕುತೂಹಲ ಹೆಚ್ಚಲು ಪ್ರೇರಣೆಯಾಗಿವೆ ಎಂದು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ ಹೇಳಿದರು.
ಈ ಸಂದರ್ಭದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯದ ಉಪ ನಿರ್ದೇಶಕ ರಿತೇಶ್ ಶರ್ಮಾ ಎಸ್.ಡಿ.ಎಂ. ಸಂಸ್ಕೃತಿ ಮತ್ತು ಸಂಶೋಧನಾ ಪ್ರತಿಷ್ಠಾನದ ಡಾ. ಪವನ್ ಕುಮಾರ್ ಹಾಗೂ ಇತರ ಸಿಬಂದಿಗಳು ಉಪಸ್ಥಿತರಿದ್ದರು.