ದಾವಣಗೆರೆ, ಡಿ.15: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur shivashankarappa) ಅವರ ಅಂತ್ಯ ಸಂಸ್ಕಾರ ನಗರದಲ್ಲಿ ಸೋಮವಾರ ಸಂಜೆ ನೆರವೇರಿತು. ಇಲ್ಲಿನ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಕುಟುಂಬಸ್ಥರು ಸೇರಿ ಸಾವಿರಾರು ಜನರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಪಂಚಪೀಠಗಳ ಜಗದ್ಗುರುಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿತು. ಪಾರ್ಥಿವ ಶರೀರಕ್ಕೆ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿ ಮೂವರು ಪುತ್ರರು ಪೂಜೆ ಸಲ್ಲಿಸಿದರು. ನಂತರ ವಿಭೂತಿ, ಬಿಲ್ವಪತ್ರೆ, ಗಂಗಾಜಲ ಹಾಕಿ ಕ್ರಿಯಾಸಮಾಧಿ ಮಾಡಲಾಯಿತು. ಅಂತ್ಯಕ್ರಿಯೆಗೆ ಜಿಲ್ಲೆ ಸೇರಿ ವಿವಿಧೆಡೆಯಿಂದ ಜನಸಾಗರವೇ ಹರಿದು ಬಂದಿತ್ತು.

ಪಾರ್ಥಿವ ಶರೀರ ಬೆಂಗಳೂರಿನಿಂದ ದಾವಣಗೆರೆಗೆ ತೆಗೆದುಕೊಂಡು ಬರುತ್ತಿದ್ದಂತೆ ರಾಜ್ಯದ ಪ್ರಮುಖ ಮಠಾಧೀಶರು ಹಾಗೂ ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು. ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು ದರ್ಶನ ಪಡೆದರು.

ದಾವಣಗೆರೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬೆಳವಣಿಗೆಗೆ ಶಾಮನೂರು ಕಾರಣ: ಸಿಎಂ
ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರ ಅವರು ಶಾಮನೂರು ಅವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಶಿವಮೊಗ್ಗ ಶಾಸಕ ಚನ್ನಬಸಪ್ಪ, ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರು ಉಪಸ್ಥಿತರಿದ್ದರು.

ಸಿಎಂ, ಡಿಸಿಎಂ ಅಂತಿಮ ನಮನ
ಮನೆಯಿಂದ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಹೈಸ್ಕೂಲ್ ಮೈದಾನಕ್ಕೆ ತೆಗೆದುಕೊಂಡು ಹೋಗಲಾಯಿತು. ವಿವಿಧ ಗಣ್ಯರು ಹಾಗೂ ಸಾರ್ವಜನಿಕರು ದರ್ಶನ ಪಡೆದ ಬಳಿಕ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ಆರ್.ವಿ ದೇಶಪಾಂಡೆ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಸುಧಾಕರ್, ಈಶ್ವರ್ ಖಂಡ್ರೆ, ಬಸವರಾಜ ರಾಯರಡ್ಡಿ, ವಿಜಯಾನಂದ ಕಾಶಪ್ಪನವರ್, ವಿಪಕ್ಷ ನಾಯಕ ಆರ್. ಅಶೋಕ್, ಸಿ.ಟಿ ರವಿ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.
ಕುಟುಂಬಸ್ಥರಿಗೆ ಸಿಎಂ ಸಾಂತ್ವನ
ಅಂತಿಮ ದರ್ಶನದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪನವರ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಲಾಯಿತು. ಭಗವಂತನು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ ವರ್ಗಕ್ಕೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಶಾಮನೂರು ಶಿವಶಂಕರಪ್ಪನವರು ಕೊಡುಗೈ ದಾನಿ: ಡಿಸಿಎಂ
ಅಂತಿಮ ದರ್ಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ನಮ್ಮ ರಾಜ್ಯದ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಲಾಯಿತು.
ಶ್ರೀ ಶಾಮನೂರು ಶಿವಶಂಕರಪ್ಪನವರು ಕೊಡುಗೈ ದಾನಿಗಳಾಗಿದ್ದರು. ಅವರು ಹೃದಯ ಶ್ರೀಮಂತಿಕೆ ಉಳ್ಳವರು ಹಾಗೂ ಯಾರಿಗೂ ಕೆಡುಕನ್ನು ಬಯಸದವರು. ಮಾನವೀಯತೆಯ ದೊಡ್ಡ ಶಕ್ತಿಯಾಗಿದ್ದ ಅವರು ಶಿಕ್ಷಣ, ಉದ್ಯಮ, ಅಧಿಕಾರ ಎಲ್ಲದರಲ್ಲೂ ಶುದ್ಧ ಆಡಳಿತ ನಡೆಸುತ್ತಿದ್ದರು. ವೈದ್ಯಕೀಯ ಶಿಕ್ಷಣದಲ್ಲಿ ಅತಿದೊಡ್ಡ ಸಾಮ್ರಾಜ್ಯವನ್ನೇ ಕಟ್ಟಿದ್ದಾರೆ. ಶಾಸಕರಾಗಿ, ಸಚಿವರಾಗಿ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರನ್ನು ಕಳೆದುಕೊಂಡಿರುವುದು ದುಃಖಕರ ಸಂಗತಿಯಾಗಿದ್ದು, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರಿಗೆ, ಆಪ್ತರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.