ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸಿಎಂ ಬದಲಾವಣೆ ವಿಚಾರದಲ್ಲಿ ಮೌನ ಮುರಿದ ಡಿಸಿಎಂ ಡಿ.ಕೆ. ಶಿವಕುಮಾರ್‌; ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೇಳಿದ್ದೇನು?

DK Shivakumar: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರ ಬದಲು ಡಿ.ಕೆ. ಶಿವಕುಮಾರ್‌ ಅವರಿಗೆ ಪಟ್ಟ ಕಟ್ಟಲಾಗುತ್ತಿದೆ ಎನ್ನುವ ಗುಸುಗುಸು ಕೇಳಿ ಬಂದಿದೆ. ಈ ಬಗ್ಗೆ ಇದೀಗ ಸ್ವತಃ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದು, ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಸಿಎಂ ಬದಲಾವಣೆ ವಿಚಾರದಲ್ಲಿ ಮೌನ ಮುರಿದ ಡಿಕೆಶಿ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Ramesh B
Ramesh B Dec 24, 2025 5:37 PM

ದೆಹಲಿ, ಡಿ. 24: “ಅಧಿಕಾರ, ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರಲು ನಾನು ಬಯಸುತ್ತೇನೆ. ನನಗೆ ಅದೇ ಶಾಶ್ವತ. 1980ರಿಂದ ನಾನು ಪಕ್ಷದ ಕಾರ್ಯಕರ್ತನಾಗಿದ್ದು, 45 ವರ್ಷಗಳಿಂದ ಇಲ್ಲಿಯವರೆಗೂ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ನೀವು ಐದು ವರ್ಷಗಳ ಕಾಲ ಉಪಮುಖ್ಯಮಂತ್ರಿಯಾಗಿರಲು ಬಯಸುತ್ತೀರಾ ಎಂದು ಕೇಳಿದಾಗ ಶಿವಕುಮಾರ್ ಈ ರೀತಿ ಪ್ರತಿಕ್ರಿಯಿಸಿದರು.

ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಒಪ್ಪಂದ ನಡೆದಿತ್ತೆ? ಎಂದು ಕೇಳಿದಾಗ, “ನಮ್ಮ ನಡುವೆ ಏನೆಲ್ಲ ಚರ್ಚೆಯಾಗಿತ್ತು ಎಂದು ನಾನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಾವು ಒಟ್ಟಾಗಿ ಸೇರಿ ಕೆಲಸ ಮಾಡಿ, ಸರ್ಕಾರವನ್ನು ರಚಿಸಿದ್ದೇವೆ. ಪ್ರತಿ ಕಾರ್ಯಕರ್ತರು ಪಕ್ಷಕ್ಕಾಗಿ ತಮ್ಮ ಬೆವರು ಹರಿಸಿ ದುಡಿದಿದ್ದಾರೆ. ನಮಗೆ ಸ್ಪಷ್ಟ ಬಹುಮತ ನೀಡಿದ ರಾಜ್ಯದ ಜನರಿಗೆ ನಾವು ಚಿರಋಣಿಯಾಗಿರುತ್ತೇವೆ. ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದ್ದು, ಇದನ್ನು ಮುಂದುವರಿಸುತ್ತೇವೆ. ಹೈಕಮಾಂಡ್ ಕೂಡ ನಮಗೆ ಸ್ವಾತಂತ್ರ್ಯ ನೀಡಿದ್ದು, ನಮ್ಮ ಸರ್ಕಾರ ಒಂದು ತಂಡವಾಗಿ ಕೆಲಸ ಮಾಡುತ್ತಿದೆ. ಇಲ್ಲಿ ಕೇವಲ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಾತ್ರವಲ್ಲ. ಎಲ್ಲ ಶಾಸಕರು, ಕಾರ್ಯಕರ್ತರು ಅನೇಕ ತ್ಯಾಗ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್‌ ಸುದ್ದಿಗೋಷ್ಠಿ:



ಸಂಕ್ರಾಂತಿ ವೇಳೆಗೆ ರಾಜ್ಯ ಸರ್ಕಾರದಲ್ಲಿ ಬದಲಾವಣೆಯಾಗಲಿದೆ ಎಂಬ ಚರ್ಚೆ ನಡೆಯುತ್ತಿದೆ ಎಂದು ಕೇಳಿದಾಗ, “ಕೇವಲ ಮಾಧ್ಯಮಗಳಲ್ಲಿ ಮಾತ್ರ ಈ ಚರ್ಚೆ ಇದೆ. ಅದರ ಹೊರತಾಗಿ ಪಕ್ಷ ಅಥವಾ ಸರ್ಕಾರದಲ್ಲಿ ಯಾವುದೇ ಚರ್ಚೆ ಇಲ್ಲ” ಎಂದು ತಿಳಿಸಿದರು.

ಉಪಹಾರಕೂಟದ ಬಗ್ಗೆ ಕೇಳಿದಾಗ, “ನಾವು, ಸಿಎಂ, ಸಚಿವರು, ಜನ, ಉದ್ಯಮಿಗಳು, ಅಧಿಕಾರಿಗಳು ಆಗಾಗ್ಗೆ ಭೇಟಿ ಮಾಡುತ್ತಲೇ ಇರುತ್ತೇವೆ. ಇದರಲ್ಲಿ ಯಾವುದೇ ವಿಶೇಷತೆಗಳಿಲ್ಲ” ಎಂದರು. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಈ ಬಾರಿಯ ಪ್ರಯಾಣದಲ್ಲಿ ನಾನು ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿಲ್ಲ. ರಾಹುಲ್ ಗಾಂಧಿ ಅವರು ನಿನ್ನೆಯಷ್ಟೇ ಮರಳಿದ್ದಾರೆ. ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ” ಎಂದು ಹೇಳಿದರು.

ರಾಜಣ್ಣ ನನಗೂ ಆಪ್ತರೇ, ನಾನು ಯಾರ ಮೇಲೂ ಜಗಳಕ್ಕೆ ಹೋಗಿಲ್ಲ ಎಂದ ಡಿ.ಕೆ.ಶಿವಕುಮಾರ್‌

ಪಕ್ಷದಲ್ಲಿ ಶಿಸ್ತು ಮುಖ್ಯ

ಮೈಸೂರಿನಲ್ಲಿ ಅಹಿಂದ ಸಮಾವೇಶ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು, ಶಕ್ತಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಕೇಳಿದಾಗ, “ನಾನು ಅವರಿಗೆ ಶುಭ ಕೋರುತ್ತೇನೆ” ಎಂದು ತಿಳಿಸಿದರು. ಪ್ರಿಯಾಂಕಾ ಗಾಂಧಿ ಅವರಿಗೆ ರಾಜಕೀಯವಾಗಿ ಉಜ್ವಲ ಭವಿಷ್ಯವಿದ್ದು, ಆಕೆ ಪ್ರಧಾನ ಮಂತ್ರಿಯಾಗಬೇಕು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರಗಳ ಬಗ್ಗೆ ಮಾಹಿತಿ ಇಲ್ಲ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ನಮ್ಮ ಪಕ್ಷವನ್ನು ಮುನ್ನಡೆಸುತ್ತಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಪಾಲಿಸುತ್ತೇವೆ. ಪಕ್ಷದಲ್ಲಿ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಪಕ್ಷದಲ್ಲಿ ಶಿಸ್ತು ಮುಖ್ಯವಾಗಿರಬೇಕು. ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆ ಮಾಡಿ ಇಡೀ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿ ನಾಯಕತ್ವ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಪ್ರಧಾನ ಮಂತ್ರಿ ಮಾಡಬೇಕು ಎಂಬುದು ಪ್ರಿಯಾಂಕಾ ಗಾಂಧಿ ಅವರ ಗುರಿ. ಅದಕ್ಕೆ ಅವರು ಶ್ರಮಿಸುತ್ತಿದ್ದಾರೆ” ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆಯಾಗುತ್ತ?

ಸಚಿವ ಸಂಪುಟ ವಿಸ್ತರಣೆಯಾಗಲಿದೆಯೇ ಎಂದು ಕೇಳಿದಾಗ, “ಈ ಬಗ್ಗೆ ನಮ್ಮ ಮುಖ್ಯಮಂತ್ರಿಯನ್ನು ಕೇಳಿ. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ” ಎಂದು ತಿಳಿಸಿದರು. ರಾಜಣ್ಣ ರಾಹುಲ್ ಗಾಂಧಿ ಅವರಿಗೆ ಸರಣಿ ಪತ್ರ ಬರೆದು ಬಿಎಲ್ಓಗಳ ಆಯ್ಕೆಯಿಂದ 12-13 ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ನನಗೆ ಅನುಭವ ಕಡಿಮೆ ಇದೆ. ತರಬೇತಿ ತೆಗೆದುಕೊಂಡು ಬರುತ್ತೇನೆ” ಎಂದು ತಿರುಗೇಟು ನೀಡಿದರು.

ನನ್ನ, ಸಿಎಂ ನಡುವೆ ಒಪ್ಪಂದ ಆಗಿದೆ: ಅಂಕೋಲಾದಲ್ಲಿ ಡಿಕೆ ಶಿವಕುಮಾರ್‌

ನನ್ನನ್ನು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ಎಸ್.ಎಂ. ಕೃಷ್ಣ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ, ಕೃಷ್ಣ ಈಗ ನಮ್ಮೊಂದಿಗಿಲ್ಲ. ದೇವರ ಬಳಿ ಕೇಳಿಕೊಳ್ಳಬೇಕಷ್ಟೆ” ಎಂದು ತಿಳಿಸಿದರು. ಮಹಿಳೆ ಮೇಲಿನ ಹಲ್ಲೆ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಇಂತಹ ಪ್ರಕರಣಗಳ ಪಟ್ಟಿ ನೀಡಲೇ? ಕರ್ನಾಟಕ ದೇಶದಲ್ಲೇ ಅತ್ಯಂತ ಸುರಕ್ಷಿತ ರಾಜ್ಯ. ಈ ರಾಜ್ಯದಲ್ಲಿ ದಕ್ಷ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ಇದೆ” ಎಂದು ತಿಳಿಸಿದರು.