Delhi Election Result 2025: ಭ್ರಷ್ಟಾಚಾರದ ವಿರೋಧಿಸುತ್ತಾ ಅಧಿಕಾರಕ್ಕೆ ಬಂದಿದ್ದ ಕೇಜ್ರಿವಾಲ್ ಮುಖವಾಡ ಕಳಚಿ ಬಿದ್ದಿದೆ-ವಿಜಯೇಂದ್ರ
Delhi Election Result 2025: ದೆಹಲಿ ರಾಜ್ಯದಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಅವರ ಮುಖವಾಡ ಕಳಚಿ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
![ಕೇಜ್ರಿವಾಲ್ ಮುಖವಾಡ ಕಳಚಿ ಬಿದ್ದಿದೆ: ವಿಜಯೇಂದ್ರ](https://cdn-vishwavani-prod.hindverse.com/media/original_images/BY_Vijayendra.jpg)
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ.
![Profile](https://vishwavani.news/static/img/user.png)
ಬೆಂಗಳೂರು: ಪ್ರಬುದ್ಧ ಮತದಾರರು ದೆಹಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು (BJP) ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ (PM Narendra Modi) ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಪರ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ (Delhi Election Result 2025) ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆಯ ಬಳಿಕ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ದೆಹಲಿ ರಾಜ್ಯದಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ದೆಹಲಿಯ ಪಕ್ಷದ ಮುಖಂಡರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅವರು, ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಅವರ ಮುಖವಾಡ ಕಳಚಿ ಬಿದ್ದಿದೆ ಎಂದು ದೂರಿದರು .ಲಿಕ್ಕರ್ ಗೇಟ್, ಶೀಷ್ ಮಹಲ್ ಹಗರಣದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಪ್ ಬಣ್ಣ ಬಯಲಾಗಿದೆ. ದೆಹಲಿ ಮತದಾರರು, ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ತಿಳಿಸಿದರು.
ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ಲೋಕಸಭಾ ಚುನಾವಣೆಯಲ್ಲೂ ಅದು ಶೂನ್ಯ ಸಂಪಾದನೆ ಮಾಡಿತ್ತು ಎಂದ ಅವರು, ಹರಿಯಾಣ, ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ಸಿಗೆ ಮುಖಭಂಗ ಆಗಿತ್ತು ಎಂದು ತಿಳಿಸಿದರು. ಗ್ಯಾರಂಟಿಗಳೆಲ್ಲ ತಾತ್ಕಾಲಿಕ. ತಾತ್ಕಾಲಿಕ ಗ್ಯಾರೆಂಟಿಗಿಂತ ದೃಢ ನಾಯಕತ್ವ ಕೊಡುವ ನರೇಂದ್ರ ಮೋದಿಜೀ ನೇತೃತ್ವದ ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂಬುದನ್ನು ದೆಹಲಿ ಮತದಾರರು ಮತ್ತೊಮ್ಮೆ ರುಜುವಾತು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.
ಮುಂದಿನ ಚುನಾವಣೆಗೆ ದಿಕ್ಸೂಚಿ: ಅಶೋಕ್
ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ದೆಹಲಿ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ, ತೆಲಂಗಾಣದ ಚುನಾವಣೆಗೆ ದಾರಿದೀಪ ಎಂದ ಅವರು, ಇದು ದೇಶಕ್ಕೆ ಸಿಕ್ಕಿದ ಗೆಲುವು. ಡಿಕೆಶಿ ಗ್ಯಾರಂಟಿ ದೆಹಲಿಯಲ್ಲಿ ಠುಸ್ ಪಟಾಕಿ ಆಗಿದೆ ಎಂದು ವ್ಯಂಗ್ಯವಾಡಿದರು. ಕರ್ನಾಟಕದಲ್ಲಿ 5 ಗ್ಯಾರಂಟಿ ಕೊಟ್ಟು ಅಭಿವೃದ್ಧಿ ಇಲ್ಲವಾಗಿದೆ. ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಇದೇ ಕೇಜ್ರಿವಾಲ್ 25 ಉಚಿತಗಳನ್ನು ನೀಡಿದ್ದರು. ಅವರ ಸ್ಥಿತಿ ಏನಾಗಿದೆ? ಎಂದು ಪ್ರಶ್ನಿಸಿದರು. ಇದು ದೇಶಕ್ಕೆ ದಿಕ್ಸೂಚಿ ಎಂದು ತಿಳಿಸಿದರು.
ಕೇಜ್ರಿವಾಲ್ ಸರ್ಕಾರ ಭ್ರಷ್ಟಾಚಾರಕ್ಕೆ ಬಲಿಯಾಗಿದೆ: ಛಲವಾದಿ ನಾರಾಯಣಸ್ವಾಮಿ
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅರವಿಂದ ಕೇಜ್ರಿವಾಲ್ ಅವರ ದೆಹಲಿ ಸರ್ಕಾರ ಭ್ರಷ್ಟಾಚಾರಕ್ಕೆ ಬಲಿಯಾಗಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಇಡೀ ದೇಶದಲ್ಲಿ ಭ್ರಷ್ಟಾಚಾರದ ವಿಚಾರದಲ್ಲಿ ಒಂದೇ ಒಂದು ಆಪಾದನೆಯನ್ನೂ ಹೊತ್ತಿಲ್ಲ ಎಂದು ತಿಳಿಸಿದರು.
ಕರ್ನಾಟಕದಲ್ಲಿ ನಮ್ಮ ವಿರುದ್ಧ ಶೇ 40 ಕಮಿಷನ್, ಪೇ ಸಿಎಂ ಮತ್ತಿತರ ಆರೋಪ ಮಾಡಿ ಚುನಾವಣಾ ತಂತ್ರ ಹೆಣೆದಿದ್ದ ಕಾಂಗ್ರೆಸ್ಸಿನದು ದೆಹಲಿಯಲ್ಲಿ ಶೂನ್ಯ ಸಂಪಾದನೆ ಎಂದು ಟೀಕಿಸಿದ ಅವರು, ಈಗ ಅವರು ಖಾತೆ ತೆರೆದಿಲ್ಲ. ಆದರೆ ಕ್ಯಾತೆ ತೆಗೆಯುವುದನ್ನು ಅವರು ಬಿಡುವುದಿಲ್ಲ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | Delhi Election Result 2025: ಅಭಿವೃದ್ಧಿ ಗೆದ್ದಿದೆ; ದಿಲ್ಲಿಯ ಪ್ರಚಂಡ ಗೆಲುವಿಗೆ ಮತದಾರರಿಗೆ ಧನ್ಯವಾದ ಅರ್ಪಿಸಿದ ಮೋದಿ
ಸುಳ್ಳಿನ ಮುಖವಾಡ ಕಳಚಿ ಬಿದ್ದಿದೆ: ಸಿ.ಟಿ. ರವಿ
ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಕೇಜ್ರಿವಾಲ್ ಪ್ರಾಮಾಣಿಕ ಅಲ್ಲ, ಭ್ರಷ್ಟ ಎಂಬುದು ಜನರಿಗೆ ಮನವರಿಕೆ ಆಗಿದೆ. ಸುಳ್ಳಿನ ಮುಖವಾಡ ಕಳಚಿಬಿದ್ದಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಅವಲೋಕನ ಮಾಡಿಕೊಳ್ಳಬೇಕಿದೆ. ಕೇವಲ ನಕಾರಾತ್ಮಕ ಪ್ರಚಾರದಿಂದ ಚುನಾವಣೆ ಗೆಲ್ಲಲು ಅಸಾಧ್ಯ ಎಂದು ತಿಳಿಸಿದರು.