ಧಾರವಾಡ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.7 ಲಕ್ಷ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳಿಂದ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಶ್ರೀನಗರ ವೃತ್ತದಲ್ಲಿ ಜಮಾಯಿಸಿದ ಸಾವಿರಾರು ಉದ್ಯೋಗಾಕಾಂಕ್ಷಿಗಳು, ಅಲ್ಲಿಂದ ಡಿಸಿ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ (Dharwad Protest) ನಡೆಸಿದರು. ಅವರನ್ನು ನಿಯಂತ್ರಿಸಲು ಪೊಲೀಸ್ ಹರಸಾಹಸ ಪಟ್ಟರು.
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (AKSSA) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಉದ್ಯೋಗಾಕಾಂಕ್ಷಿಗಳು ಡಿಸಿ ಕಚೇರಿಯತ್ತ ಧಾವಿಸಿದ ವೇಳೆ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹಾಗೂ ಹೋರಾಟದ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಮುಖಂಡ ಕಾಂತಕುಮಾರ್. ಆರ್ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪ್ರತಿಭಟನಾಕಾರರನ್ನು ಶ್ರೀನಗರ ವೃತ್ತದಲ್ಲೇ ಪೊಲೀಸರು ತಡೆದು ನಿಲ್ಲಿಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮತ್ತೊಂದೆಡೆ ಜುಬಿಲಿ ವೃತ್ತದಲ್ಲಿ ಕೂಡ ಸಾವಿರಾರು ವಿದ್ಯಾರ್ಥಿಗಳು ಹೋರಾಟಕ್ಕಿಳಿದಿದ್ದರಿಂದ ನಗರದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರು, ಸಚಿವರ ಭಾವಚಿತ್ರಗಳನ್ನು ಸುಟ್ಟು, ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಬಿಜೆಪಿ ನಾಯಕರ ಬೆಂಬಲ
ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿಜೆಪಿ ನಾಯಕರು ಬೆಂಬಲ ಸೂಚಿಸಿದ್ದು, ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಮತ್ತಿತರರು ಸಾಥ್ ನೀಡಿದರು.
ಈ ವೇಳೆ ಆರ್.ಅಶೋಕ್ ಮಾತನಾಡಿ, ನೇಮಕಾತಿ ಆರಂಭಿಸದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಡಿನ ಯುವ ಸಮುದಾಯ ಸಿಡಿದೆದ್ದಿದೆ. ಧಾರವಾಡದಲ್ಲಿ ಆರಂಭಗೊಂಡಿರುವ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಜ್ವಾಲೆ ನಿಷ್ಕ್ರಿಯಗೊಂಡಿರುವ ಕಾಂಗ್ರೆಸ್ ಸರ್ಕಾರವನ್ನು ದಹಿಸುವುದರಲ್ಲಿ ಯಾವ ಅನುಮಾನವಿಲ್ಲ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಯುವಕರ ಕಿಚ್ಚು ನಾಡಿನೆಲ್ಲೆಡೆ ಹರಡುವ ಮುನ್ನ ನೇಮಕಾತಿ ಆರಂಭಿಸಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಿ ಎಂದು ಆಗ್ರಹಿಸಿದ್ದಾರೆ.