ಜನಾಕ್ರೋಶಕ್ಕೆ ಮಣಿದ ಸರ್ಕಾರ; ಪಾರ್ಕ್ನ ಶೇಕಡಾ 5ರಷ್ಟು ಜಾಗ ಬಳಸುವ ಬಿಲ್ ವಾಪಸ್
ಜನಾಕ್ರೋಶಕ್ಕೆ ಕೊನೆಗೂ ಸರ್ಕಾರ ಮಣಿದಿದ್ದು, ಪಾರ್ಕ್ನ ಶೇಕಡಾ 5ರಷ್ಟು ಜಾಗ ಬಳಸುವ ಬಿಲ್ ವಾಪಸ್ ಪಡೆದಿದೆ. ಬಿಲ್ಗೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಪಸ್ ಪಡೆಯಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
-
ಬೆಂಗಳೂರು, ಸೆ. 3: ಜನಾಕ್ರೋಶಕ್ಕೆ ಕೊನೆಗೂ ಸರ್ಕಾರ ಮಣಿದಿದ್ದು, ಪಾರ್ಕ್ನ ಶೇಕಡಾ 5ರಷ್ಟು ಜಾಗ ಬಳಸುವ ಬಿಲ್ ವಾಪಸ್ ಪಡೆದಿದೆ. ಬಿಲ್ಗೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಪಸ್ ಪಡೆಯಲಾಗಿದೆ. ಗುರುವಾರ (ಸೆಪ್ಟೆಂಬರ್ 3) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ) ವಿಧೇಯಕ 2026 ವಿಧಾನಸಭೆಯಲ್ಲಿಇತ್ತೀಚೆಗೆ ಅಂಗೀಕಾರಗೊಂಡಿತ್ತು. ಬಿಜೆಪಿ ಸದಸ್ಯರ ಗದ್ದಲದ ನಡುವೆಯೂ ಡಿಸಿಎಂ ಡಾ.ಜಿ. ಪರಮೇಶ್ವರ್ ವಿಧೇಯಕ ಮಂಡಿಸಿದ್ದರು. ಚರ್ಚೆ ಇಲ್ಲದೆ ವಿಧೇಯಕ ಅಂಗೀಕಾರಗೊಂಡಿತು. ಅದಾದ ಬಳಿಕ ಈ ಬಗ್ಗೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಸರ್ಕಾರ ಮಣಿದಿದೆ.
ಸರ್ಕಾರದ ಇಲಾಖೆಗಳು, ಶಾಸನಬದ್ಧ ಪ್ರಾಧಿಕಾರಗಳು, ಸರ್ಕಾರಿ ಕಂಪನಿಗಳು ಅಥವಾ ಸಾರ್ವಜನಿಕ ಉಪಯುಕ್ತತೆಯ ಯೋಜನೆಗಳಿಗಾಗಿ ಸ್ಥಳೀಯ ಪ್ರಾಧಿಕಾರಗಳ ಪರವಾಗಿ ಮಾತ್ರ ಉದ್ಯಾನವನದ ಒಟ್ಟು ವಿಸ್ತೀರ್ಣದ ಗರಿಷ್ಠ ಶೇಕಡಾ 5ರಷ್ಟು ಭೂಮಿಯನ್ನು ಮಾರಾಟ, ಗೇಣಿ (ಲೀಸ್), ಕೊಡುಗೆ (ಗಿಫ್ಟ್), ವಿನಿಮಯ, ಅಡಮಾನ ಅಥವಾ ಇನ್ನಿತರ ಯಾವುದೇ ರೀತಿಯಲ್ಲಿ ಪರಭಾರೆ ಮಾಡಲು ರಾಜ್ಯ ಸರ್ಕಾರಕ್ಕೆ ಅನುಮತಿಯನ್ನು ನೀಡುವ ವಿಧೇಯಕ ಇದಾಗಿತ್ತು. ಕರ್ನಾಟಕ ಸರ್ಕಾರಿ ಉದ್ಯಾನಗಳ (ಸಂರಕ್ಷಣೆ) ಕಾಯಿದೆ-1975ಕ್ಕೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರ ನಗರದ ಹಸಿರು ಪ್ರದೇಶವನ್ನು ಕುಗ್ಗಿಸಲು ಮುಂದಾಗಿದೆ ಎಂದು ಸಾರ್ವಜನಿಕರು, ಪರಿಸರವಾದಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.
ರಾಜ್ಯ ಸರ್ಕಾರ ಅಂಗೀಕರಿಸಿರುವ ವಿಧೇಯಕ ವಿರೋಧಿಸಿ ಪರಿಸರವಾದಿ ಯಲ್ಲಪ್ಪರೆಡ್ಡಿ ಮತ್ತು ಸಂಸದ ತೇಜಸ್ವಿಸೂರ್ಯ ನೇತೃತ್ವದಲ್ಲಿ ಬೆಂಗಳೂರಿನ ಲಾಲ್ಬಾಗ್ನ ಪಶ್ಚಿಮ ದ್ವಾರದಿಂದ ನಡಿಗೆ ಚಳವಳಿ ನಡೆಸಲಾಗಿತ್ತು. ಪಾರ್ಕ್ ಜಾಗವನ್ನು ಅನ್ಯ ಉದ್ದೇಶಗಳಿಗಾಗಿ ನೀಡಲು ಮುಂದಾಗಿರುವ ಸರ್ಕಾರದ ನಡೆ ಖಂಡಿಸಿ ಪರಿಸರ ಹೋರಾಟಗಾರರು, ಕನ್ನಡಪರ ಹೋರಾಟಗಾರರು ನಡಿಗೆ ಚಳವಳಿಗೆ ಸಾಥ್ ನೀಡಿದ್ದರು.