Koppala Murder Case: ಮುಸ್ಲಿಂ ಹುಡುಗಿಯ ಪ್ರೀತಿಸಿದ್ದಕ್ಕೆ ಕೊಲೆ; NIA ತನಿಖೆಗೆ ಬಿಜೆಪಿ ಮನವಿ
Gavi Siddappa Murder Case: ಕೊಪ್ಪಳದ ಗವಿಸಿದ್ದಪ್ಪ ನಾಯಕರ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಿಯೋಗವು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಕೊಪ್ಪಳದ ಗವಿಸಿದ್ದಪ್ಪ ನಾಯಕರ ಕೊಲೆ ಪ್ರಕರಣವನ್ನು ಎನ್.ಐ.ಎ.ಗೆ ವಹಿಸಬೇಕು. ಕಾನೂನಿನಡಿ ಈ ಬಡ ಕುಟುಂಬಕ್ಕೆ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಬೇಕು. ಎರಡು ಎಕರೆ ಜಮೀನು ನೀಡಬೇಕು. ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.


ಬೆಂಗಳೂರು: ಕೊಪ್ಪಳದ ಗವಿಸಿದ್ದಪ್ಪ ನಾಯಕರ ಕೊಲೆ(Gavi Siddappa) ಪ್ರಕರಣವನ್ನು ಎನ್.ಐ.ಎ.ಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ(BY Vijayendra) ಆಗ್ರಹಿಸಿದ್ದಾರೆ. ಮುಸ್ಲಿಂ ಮತಾಂಧರರಿಂದ ಹತ್ಯೆಯಾದ ಕೊಪ್ಪಳದ ಗವಿಸಿದ್ದಪ್ಪ ನಾಯಕ ಅವರ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಿಯೋಗವು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಕಾನೂನಿನಡಿ ಈ ಬಡ ಕುಟುಂಬಕ್ಕೆ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಬೇಕು. ಎರಡು ಎಕರೆ ಜಮೀನು ನೀಡಬೇಕು. ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಆಗ್ರಹಿಸಿದರು.
ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ಮಾಜಿ ಸಚಿವ ಶ್ರೀರಾಮುಲು, ರಾಜು ಗೌಡ, ಶಿವನಗೌಡ ನಾಯಕ, ಜನಾರ್ದನ ರೆಡ್ಡಿ ಅವರು ಸಂತ್ರಸ್ತನ ಕುಟುಂಬದವರನ್ನು ಭೇಟಿ ಮಾಡಿದ್ದಾರೆ ಎಂದರು. ಇಂಥ ಕೊಲೆಗಡುಕರಿಗೆ ಈ ಕಾಂಗ್ರೆಸ್ ಸರ್ಕಾರದ ಬಗ್ಗೆ ವಿಪರೀತ ವಿಶ್ವಾಸ ಇದೆ. ಇದರಿಂದ ಮಂಗಳೂರು ಸೇರಿ ವಿವಿಧೆಡೆ ಸರಣಿ ಕೊಲೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದೇವೆ ಎಂದರು. ಮೃತರು ಬಿಜೆಪಿ ಇರಲಿ; ಕಾಂಗ್ರೆಸ್ ಅಥವಾ ಜೆಡಿಎಸ್ ಕಾರ್ಯಕರ್ತನೇ ಇರಲಿ; ಬೇರೆ ಪಕ್ಷದಲ್ಲಿ ಹಿಂದೂ ಕಾರ್ಯಕರ್ತ ಇರಬಾರದು ಎಂದೇನಿಲ್ಲ. ಇದು ಬಹಳ ಗಂಭೀರವಾದ ವಿಚಾರ. ಇಡೀ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದಲ್ಲೇ ಸುದ್ದಿಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಡ ಹೇರುವುದಾಗಿ ತಿಳಿಸಿದರು.
ಸ್ಮಾರ್ಟ್ ಮೀಟರ್ ವಿಚಾರ
ಸ್ಮಾರ್ಟ್ ಮೀಟರ್ ವಿಚಾರವನ್ನೂ ಪ್ರಸ್ತಾಪಿಸಿದ ಅವರು, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕೊಳ್ಳೆ ಹೊಡೆಯುವ, ಲೂಟಿ ಮಾಡುವ ಕೆಲಸ ನಡೆದಿದೆ. ವಿಪಕ್ಷ ನಾಯಕರು, ಡಾ.ಅಶ್ವತ್ಥ ನಾರಾಯಣ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದರು. ಆ ವಿಷಯದಲ್ಲೂ ಮತ್ತೊಮ್ಮೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ರಾಜೀನಾಮೆಗೆ ಬಿ. ಶ್ರೀರಾಮುಲು ಆಗ್ರಹ
ಮಾಜಿ ಸಚಿವ ಬಿ. ಶ್ರೀರಾಮುಲು ಮಾತನಾಡಿ, ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳದ ಜನತೆ ಜಾತ್ಯತೀತವಾಗಿ ಎಲ್ಲರನ್ನೂ ಪ್ರೀತಿಸುವವರು. ಈ ಗ್ಯಾರಂಟಿ ಸರ್ಕಾರ ಬಂದ ಬಳಿಕ ಬಡವರ, ಹಿಂದೂಪರ ಕಾರ್ಯಕರ್ತರ ಪ್ರಾಣಕ್ಕೆ ಗ್ಯಾರಂಟಿ ಇಲ್ಲದ ಪರಿಸ್ಥಿತಿ ಬಂದಿದೆ ಎಂದು ದೂರಿದರು. ಈ ಹತ್ಯೆ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಜವಾಬ್ದಾರಿ ಹೊತ್ತ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು. ಗುಪ್ತಚರ ಇಲಾಖೆ ವಿಫಲತೆಗೆ ಮುಖ್ಯಮಂತ್ರಿಗಳೇ ಹೊಣೆಗಾರರು ಎಂದು ಆರೋಪಿಸಿದ ಅವರು, ಈ ಸರ್ಕಾರ ನಿದ್ರೆ ಮಾಡುತ್ತಿದೆಯೇ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳುವುದನ್ನು ಬಿಟ್ಟು ಬೇರೇನೂ ಮಾಡುತ್ತಿಲ್ಲ ಎಂದು ದೂರಿದರು.
ಹಿಂದೂಪರ ಕಾರ್ಯಕರ್ತರ ಹತ್ಯೆ ಆದಾಗ ಗೃಹ ಸಚಿವರು, ‘ನನಗೆ ಗೊತ್ತಿಲ್ಲ; ನನಗೆ ಮಾಹಿತಿ ಇಲ್ಲ; ಇದು ಆಗಬಾರದಿತ್ತುʼ ಎಂದು ಹಾರಿಕೆಯ ಉತ್ತರ ನೀಡುತ್ತಾರೆ. ಗೃಹ ಸಚಿವರು ಏನು ಮಾಡುತ್ತಿದ್ದಾರೆ? ಈ ಸರ್ಕಾರ ನಮ್ಮ ಭಾಗದಲ್ಲಿ ದ್ವೇಷ ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಟೀಕಿಸಿದರು.
ಮುಸ್ಲಿಂ ಹುಡುಗಿಯೊಬ್ಬಳನ್ನು ಪ್ರೀತಿ ಮಾಡಿದ ಕಾರಣಕ್ಕೆ ಗವಿಸಿದ್ದಪ್ಪ ನಾಯಕ ಹತ್ಯೆಯಾಗಿದ್ದಾನೆ. ಯಾರೂ ಪ್ರೀತಿ ಮಾಡಬಾರದೇ? ಅದೇ ಹುಡುಗಿ ಬಂದು ಪ್ರೀತಿ ಮಾಡಿದ್ದಾಳೆ. ನನ್ನ ಮಗ ಅಲ್ಲಿಗೆ ಹೋಗಿಲ್ಲ ಎಂದು ಗವಿಸಿದ್ದಪ್ಪನ ತಂದೆ ಆರೋಪಿಸಿದರು. ಮಸೀದಿ ಬಳಿ ಮಚ್ಚಿನಿಂದ ಏಕಾಏಕಿ ದಾಳಿ ಮಾಡಿದ್ದಾರೆ. 4 ಜನ ಇದ್ದುದಲ್ಲ. 8-10 ಜನರಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಸರ್ಕಾರ, ಶಾಸಕರ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿದರು. ಎನ್.ಐ.ಎ. ತನಿಖೆ ಮಾಡಬೇಕು; ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.
ಈ ಸುದ್ದಿಯನ್ನೂ ಓದಿ | Pralhad Joshi: ಉತ್ಖನನ ಜಾಗದಲ್ಲಿ ಏನೂ ಸಿಗದಿದ್ದಕ್ಕೆ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ' ಎನ್ನುತ್ತಿರೋ ಸಿಎಂ: ಜೋಶಿ
ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ-ಜೆಡಿಎಸ್ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.