ಹಾವೇರಿ: ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ (Cloud Seeding in Haveri) ಸಿದ್ಧತೆ ನಡೆದಿದೆ. ಶಾಸಕ ಪ್ರಕಾಶ ಕೋಳಿವಾಡ ಅವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು ಮೋಡ ಬಿತ್ತನೆಗೆ ಕ್ರಮ ಕೈಗೊಂಡಿದ್ದಾರೆ. ಜು.7ರಂದು ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ ಸಿಗಲಿದೆ.
ಈ ಬಗ್ಗೆ ನಗರದಲ್ಲಿ ಪ್ರಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಾಹಿತಿ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಆರು ಶಾಸಕರು ಮಾತನಾಡಿಕೊಂಡು, ಜಿಲ್ಲೆಯ ಏಂಟು ತಾಲೂಕಿನಲ್ಲಿ ಮೋಡ ಬಿತ್ತನೆ ಮಾಡಲು ತೀರ್ಮಾನಿಸಿದ್ದೇವೆ. ಜು.7ರಂದು ಮಂಗಳವಾರ ಮೋಡ ಬಿತ್ತನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಮೋಡ ಬಿತ್ತನೆಗಾಗಿ ಕಳೆದ ತಿಂಗಳು ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದೆ. ಇದಕ್ಕೆ ಕೇಂದ್ರದ ಡಿಜಿಸಿಎ ಅನುಮತಿ ನೀಡಿದೆ. ರಾಜ್ಯ ಸರ್ಕಾರಕ್ಕೂ ಈ ಬಗ್ಗೆ ಮನವಿ ಮಾಡಿದ್ದೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಆದರೆ, ಅದಕ್ಕೆ ಟೆಂಡರ್, ಇನ್ನಿತರ ಕಾರ್ಯಗಳಿಗೆ ಸಮಯ ಬೇಕಾಗುತ್ತದೆ. ಹೀಗಾಗಿ ಸದ್ಯ ನಾವು ಆರು ಶಾಸಕರು ಸ್ವಂತ ಹಣದಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದ್ದೇವೆ. ಪ್ರತಿ ಗಂಟೆಗೆ 15 ಲಕ್ಷ ಖರ್ಚು ಬರಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ, ಯು.ಬಿ ಬಣಕಾರ, ಶ್ರೀನಿವಾಸ ಮಾನೆ ಇದ್ದರು.
ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಸಚಿವ ಸತೀಶ್ ಜಾರಕಿಹೊಳಿ ಸೂಚನೆ
ನೂತನ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಶುಕ್ರವಾರ ಹಾವೇರಿ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ವೇಳೆ ಕುಡಿಯುವ ನೀರು, ಜನರಿಗೆ ಉದ್ಯೋಗ, ಬೆಳೆ ವಿಮೆ, ಕೆರೆ ತುಂಬಿಸುವ ವ್ಯವಸ್ಥೆ, ಗೊಬ್ಬರ ಕೊರತೆ ನೀಗಿಸುವುದು ಸೇರಿ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಮಹತ್ವದ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಯು.ಬಿ. ಬಣಕಾರ, ಯಾಸೀರ್ಖಾನ್ ಪಠಾಣ್, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಜಿಲ್ಲಾಧಿಕಾರಿ ಡಾ. ವಿಜಯ ಮಹಂತೇಶ ದಾನಮ್ಮನವರ, ಸಿಇಓ ದಲ್ಜಿತ್ ಕುಮಾರ, ಎಸ್ಪಿ ಯಶೋಧಾ ವಂಟಗೋಡಿ, ಉಪ ಜಿಲ್ಲಾಧಿಕಾರಿ ಡಾ. ನಾಗರಾಜ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ಹಾಜರಿದ್ದರು.