ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ (Bus Accident) ಪರಿಣಾಮ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡು, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. 18 ವರ್ಷದ ಬಾವರಸಿಂಗ್ ರಜಪೂತ್ ಮೃತ ಪ್ರಯಾಣಿಕ. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಸದ್ಯ ಗಾಯಗೊಂಡ ಪ್ರಯಾಣಿಕರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಾವೇರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ತಿಂಗಳು ಶಿವಮೊಗ್ಗ- ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಖಾಸಗಿ ಬಸ್ಗೆ ಬೆಂಕಿ ಬಿದ್ದು, ಸಂಪೂರ್ಣ ಸುಟ್ಟು ಕರಕಲಾಗಿತ್ತು. ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಶ್ರೀ ದುರ್ಗಾಂಬಾ ಎಂಬ ಖಾಸಗಿ ಬಸ್ ಘಾಟಿಯಿಂದ ಕುಂದಾಪುರ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗುತ್ತಿದ್ದಂತೆ ಬಸ್ಸಿನಲ್ಲಿದ್ದವರೆಲ್ಲರೂ ತಕ್ಷಣವೇ ಹೊರಗಡೆ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.
ಹಾಸನದಲ್ಲೂ ಇಂತಹದ್ದೇ ಘಟನೆ ಸಂಭವಿಸಿತ್ತು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿತ್ತು. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ, ಲಗೇಜ್ ಹಾಗೂ ಮೊಬೈಲ್ ವಸ್ತುಗಳು ಬೆಂಕಿಗಾಹುತಿಯಾಗಿದ್ದವು. ಕೂದಲೆಳೆ ಅಂತರದಲ್ಲಿ ಎಲ್ಲರೂ ಪಾರಾಗಿದ್ದರು.
ಆನೇಕಲ್ನಲ್ಲಿ ಭೀಕರ ಅಗ್ನಿ ಅವಘಡ; ನಾಲ್ಕು ಖಾಸಗಿ ಬಸ್ಗಳು ಬೆಂಕಿಗಾಹುತಿ!
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ದೇವರಗುಡ್ಡ ಗ್ರಾಮದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಾರಿಗೆ ಬಸ್ ಹೊತ್ತಿ ಉರಿದಿತ್ತು. ಬಸ್ ಬೆಂಗಳೂರಿನಿಂದ ಗದಗಕ್ಕೆ ಹೊರಟಿತ್ತು. ಬಸ್ನಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಹಾಸಪಟ್ಟಿದ್ದರು.