| ಪರಶುರಾಮ ಎಸ್.ಡಿ.
ಹಾವೇರಿ, ಜು.30: ಜಿಲ್ಲಾ ಕೇಂದ್ರವಾಗಿರುವ ಹಾವೇರಿ ನಗರದಲ್ಲಿ ರಸ್ತೆಗಳ ದುಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ನಗರದ (Haveri News) ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ.
ಹಾವೇರಿ ನಗರದ ಹೊಸಮನಿ ವೃತ್ತ ಸೇರಿದಂತೆ ನಗರದಲ್ಲಿ ಅನೇಕ ಪ್ರಮುಖ ರಸ್ತೆಗಳು ತಗ್ಗುಗುಂಡಿಗಳಿಂದ ಕೂಡಿದ್ದು, ದಿನನಿತ್ಯ ಸಂಚರಿಸುವ ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ತೀರಾ ಹದಗೆಟ್ಟ ರಸ್ತೆಗಳಿಂದಾಗಿ ಸಂಚಾರ ದುಸ್ತರವಾಗಿದ್ದು, ಅಪಘಾತಗಳ ಭೀತಿ ಹೆಚ್ಚಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ರಸ್ತೆಗಳನ್ನು ದುರಸ್ತಿ ಪಡಿಸಿ ಗುಂಡಿಗಳನ್ನು ಮುಚ್ಚುವಂತಹ ಮೂಲಭೂತ ಕಾರ್ಯಗಳಿಗೆ ಆದ್ಯತೆ ನೀಡುವ ಬದಲು ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಇತರ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ʼಸಿಸಿ ಕ್ಯಾಮೆರಾ ಅಳವಡಿಸುವುದು ಅಗತ್ಯವೇ ಸರಿ, ಆದರೆ ಮೊದಲು ಜನರು ಸುರಕ್ಷಿತವಾಗಿ ಸಂಚರಿಸಲು ರಸ್ತೆಗಳನ್ನು ಸರಿಪಡಿಸಬೇಕುʼ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
![]()
ನಗರದ ರಸ್ತೆಗಳ ಗುಂಡಿಗಳನ್ನು ತಕ್ಷಣ ಮುಚ್ಚಬೇಕು. ಹಾಳಾದ ರಸ್ತೆಗಳನ್ನು ಶೀಘ್ರ ದುರಸ್ತಿ ಮಾಡಬೇಕು. ಮೂಲಸೌಕರ್ಯ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು. ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಮದನಕುಮಾರ ಹಜಾರಿ, ಸ್ಥಳೀಯ ನಾಗರಿಕ