ಹಾವೇರಿ, ಜು.31: ಜಿಲ್ಲೆಯಲ್ಲಿ (Haveri News) ದಾಖಲಾದ ವಿವಿಧ ಸ್ವತ್ತಿನ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ನಗದು ಹಣ, ಮೊಬೈಲ್ ಫೋನ್ಗಳು, ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳು ಹಾಗೂ ದ್ವಿಚಕ್ರ ವಾಹನಗಳನ್ನು ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವುಗಳ ನಿಜವಾದ ವಾರಸುದಾರರಿಗೆ ಗುರುವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪ್ರಾಪರ್ಟಿ ಪರೇಡ್ ಮೂಲಕ ಹಸ್ತಾಂತರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಯಶೋಧಾ ವಂಟಗೋಡಿ ಅವರು ಸ್ವತಃ ವಾರಸುದಾರರಿಗೆ ವಸ್ತುಗಳನ್ನು ಹಸ್ತಾಂತರಿಸಿ ಮಾತನಾಡಿ, ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತುಗಳನ್ನು ನ್ಯಾಯಾಲಯದ ಆದೇಶದಂತೆ ಶೀಘ್ರವಾಗಿ ಮಾಲೀಕರಿಗೆ ಹಿಂತಿರುಗಿಸುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯವಾಗಿದೆ. ಸಾರ್ವಜನಿಕರು ಕಳೆದುಹೋದ ಅಥವಾ ಕಳ್ಳತನಕ್ಕೊಳಗಾದ ವಸ್ತುಗಳ ಬಗ್ಗೆ ತಕ್ಷಣವೇ ಪೊಲೀಸ್ ಠಾಣೆಗೆ ದೂರು ನೀಡಿದರೆ ಅವುಗಳನ್ನು ಪತ್ತೆಹಚ್ಚಲು ಹಾಗೂ ಮರಳಿ ಒಪ್ಪಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಪ್ರಾಪರ್ಟಿ ಪರೇಡ್ನಲ್ಲಿ ನಗದು ಹಣ, ಮೊಬೈಲ್ಗಳು, ಬೆಲೆಬಾಳುವ ವಸ್ತುಗಳು ಹಾಗೂ ದ್ವಿಚಕ್ರ ವಾಹನಗಳನ್ನು ಪರಿಶೀಲಿಸಿ ಸಂಬಂಧಪಟ್ಟ ವಾರಸುದಾರರಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ತಮ್ಮ ಕಳೆದುಹೋದ ವಸ್ತುಗಳನ್ನು ಮರಳಿ ಪಡೆದ ಸಾರ್ವಜನಿಕರು ಜಿಲ್ಲಾ ಪೊಲೀಸರ ಕಾರ್ಯವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್.ವೈ. ಶಿರಕೋಳ, ಡಿಆರ್ ಡಿಎಸ್ಪಿ ಹನಕನಹಳ್ಳಿ, ಹಾವೇರೊಯ ಡಿಎಸ್ಪಿ ಗಿರಿಮಲ್ಲಪ್ಪ ತಳಕಟ್ಟಿ, ಹಾಗೂ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.