HD Deve Gowda: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ವೇಗ ನೀಡಲು ಎಚ್.ಡಿ.ದೇವೇಗೌಡ ಆಗ್ರಹ
HD Deve Gowda: ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಅದಾಗ್ಯೂ ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೈಲ್ವೇ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು 800 ಕೋಟಿ ರೂ.ಯಿಂದ 7,000 ಕೋಟಿ ರೂ.ಗೂ ಮೀರಿ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ.

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ರಾಜ್ಯಸಭೆಯಲ್ಲಿ ರೈಲ್ವೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದ ರೈಲ್ವೆ ಯೋಜನೆಗಳ ಅಗತ್ಯವನ್ನು ಒತ್ತಿ ಹೇಳಿದರು. ಹಿಂದಿನ ಸರ್ಕಾರಗಳು ಕರ್ನಾಟಕದ ಹಲವು ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಅದಾಗ್ಯೂ ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೈಲ್ವೇ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು 800 ಕೋಟಿ ರೂ.ಯಿಂದ 7,000 ಕೋಟಿ ರೂ.ಗೂ ಮೀರಿ ಹೆಚ್ಚಾಗಿದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಅಡಿಯಲ್ಲಿ ರಾಜ್ಯದ ಅನೇಕ ರೈಲ್ವೆ ಯೋಜನೆಗಳಿಗೆ ಮರು ಚಾಲನೆ ಸಿಕ್ಕಿದೆ. ಅದಾಗ್ಯೂ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೈಲ್ವೆ ಮಾರ್ಗ ಮತ್ತು ಬೆಂಗಳೂರಿನಿಂದ ಭಾರತದ ಇತರ ಭಾಗಗಳಿಗೆ ಸಂಪರ್ಕ ಸೇರಿದಂತೆ ಹಲವು ಯೋಜನೆಗಳು ಕಾರ್ಯರೂಪಕ್ಕೆ ಬಾರದೆ ಇನ್ನೂ ಬಾಕಿ ಉಳಿದಿವೆ. ಇವುಗಳ ಕಡೆ ರೈಲ್ವೆ ಸಚಿವರು ತಕ್ಷಣ ಗಮನ ಹರಿಸಬೇಕಾಗಿದೆ ಎಂದು ಹೇಳಿದರು.
ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳನ್ನು ಮತ್ತಷ್ಟು ವೇಗಗೊಳಿಸುವಂತೆ ಸರ್ಕಾರವನ್ನು ಪದೇ ಪದೆ ಮನವಿ ಮಾಡಿದ ಅವರು, ರೈಲ್ವೆ ಸಂಪರ್ಕವು ಸಾಮಾನ್ಯ ನಾಗರಿಕರಿಗೆ ಕೈಗೆಟುಕುವ ಪ್ರಯಾಣಕ್ಕೆ ಕಾರಣವಾದ ಕೆಲ ಮಹತ್ವದ ಅಂಶಗಳನ್ನು ಉದಾಹರಣೆ ಸಮೇತವಾಗಿ ಉಲ್ಲೇಖಿಸಿದರು.
ಹಾಸನದಿಂದ ಮೈಸೂರಿಗೆ ರೈಲಿನಲ್ಲಿ ಪ್ರಯಾಣ ಮಾಡಿದರೆ ಟಿಕೆಟ್ ವೆಚ್ಚ 30 ರೂ. ಆಗುತ್ತದೆ. ಆದರೆ ಬಸ್ ದರಗಳು ಬಹುತೇಕ ಎರಡು ಪಟ್ಟು ಮೂರು ಪಟ್ಟು ಹೆಚ್ಚಾಗಿರುತ್ತವೆ. ಇದಕ್ಕಾಗಿಯೇ ರೈಲ್ವೆ ಯೋಜನೆಗಳ ವಿಸ್ತರಣೆ ಪೂರ್ಣ ವೇಗದಲ್ಲಿ ಮುಂದುವರಿಯಬೇಕು ಎಂದು ಅವರು ಪ್ರತಿಪಾದಿಸಿದರು.
ಕಳೆದ ಹತ್ತು ವರ್ಷಗಳಲ್ಲಿ ರೈಲ್ವೆ ಕ್ಷೇತ್ರದಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಕ್ತಕಂಠದಿಂದ ಶ್ಲಾಘಿಸಿದರು. ಹಿಂದೆ ಅನುಮೋದನೆ ಪಡೆಯಲು ವರ್ಷಗಳೇ ಹಿಡಿಯುತ್ತಿದ್ದ ರೈಲ್ವೆ ಯೋಜನೆಗಳು ಈಗ ಅಭೂತಪೂರ್ವ ವೇಗದಲ್ಲಿ ಕಾರ್ಯಗತಗೊಳ್ಳುತ್ತಿವೆ. ತಮ್ಮ ಅಧಿಕಾರಾವಧಿಯಲ್ಲಿ ರೈಲ್ವೆ ಅನುದಾನ ಹಂಚಿಕೆ, ಯೋಜನೆಗಳ ಜಾರಿ ಇತ್ಯಾದಿ ಅಂಶಗಳನ್ನು ನೆನಪು ಮಾಡಿಕೊಂಡರು. ಅಲ್ಲದೆ, ಆಗ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮತ್ತು ನಿಧಾನಗತಿಯ ಯೋಜನಾ ಅನುಷ್ಠಾನ ಪರಿಸ್ಥಿತಿಯನ್ನು ನೆನಪಿಸಿಕೊಂಡರು. ಇದಕ್ಕೆ ವ್ಯತಿರಿಕ್ತವಾಗಿ, ದೇಶಾದ್ಯಂತ ರೈಲ್ವೆ ಅಭಿವೃದ್ಧಿಯನ್ನು ಪರಿವರ್ತಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಸ್ಪಷ್ಟ ದೃಷ್ಟಿಕೋನದೊಂದಿಗೆ ಮುನ್ನಡೆಯುತ್ತಿದೆ ಎಂದು ಹೇಳಿದರು.
ರೈಲ್ವೆ ವಿಸ್ತರಣೆ ಮತ್ತು ಸುರಕ್ಷತೆಯಲ್ಲಿ ಗಮನಾರ್ಹ ಸುಧಾರಣೆಗಳು ಕಂಡುಬಂದಿವೆ ಎಂದ ಎಚ್.ಡಿ.ದೇವೇಗೌಡ ಅವರು, ಕೆಲ ಅಂಶಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದರು. ಹಿಂದೆ ಆಧುನಿಕ ಮೂಲ ಸೌಕರ್ಯಗಳ ಕೊರತೆಯಿಂದಾಗಿ ರೈಲ್ವೆ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿದ್ದವು. ಆದರೆ ಇಂದು ಸುರಕ್ಷತಾ ಮಾನದಂಡಗಳು ಗಮನಾರ್ಹವಾಗಿ ಸುಧಾರಿಸಿವೆ. ಇದಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರಯತ್ನಗಳು ಕಾರಣ ಎಂದರು.
ಈ ಸುದ್ದಿಯನ್ನೂ ಓದಿ | Stock Market: ಉತ್ತಮ ಸ್ಟಾಕ್ ಖರೀದಿಗೆ ಈಗ ಸಕಾಲ? ತಜ್ಞರು ಹೇಳೋದೇನು?
ಅಲ್ಲದೆ ಭಾರತದ ರೈಲ್ವೇ ಬೆಳವಣಿಗೆಯನ್ನು ಚೀನಾ, ರಷ್ಯಾ, ಕೆನಡಾ ಮತ್ತು ಆಸ್ಟ್ರೇಲಿಯಾದೊಂದಿಗೆ ಹೋಲಿಸಿ ವಿವರಿಸಿದರು. ಭಾರತದ ಪ್ರಗತಿ ಈಗ ಜಾಗತಿಕ ಮಾನದಂಡಗಳಿಗೆ ಸಮನಾಗಿದೆ ಎಂದರಲ್ಲದೆ, ರೈಲ್ವೇ ಮಾರ್ಗಗಳ ವಿಸ್ತರಣೆ, ವಿದ್ಯುದೀಕರಣ ಮತ್ತು ಸರಕು ಸಾಗಣೆ ಕಾರಿಡಾರ್ಗಳ ಅಭಿವೃದ್ಧಿ ಗಮನಾರ್ಹವಾಗಿ ಆಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.