ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HD Kumaraswamy: ರೈತನ ಮೇಲೆ ತೋರಿದ ದರ್ಪ ಸರಿಯಲ್ಲ: ಮಲ್ಲಿಕಾರ್ಜುನ ಖರ್ಗೆಗೆ ಕುಮಾರಸ್ವಾಮಿ ಟೀಕೆ

Mallikarjun Kharge: ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರೇ, ರೈತರ ಬಗ್ಗೆ ನಿಮ್ಮ ನಡವಳಿಕೆ ಕಂಡು ಬಹಳ ಬೇಸರವಾಯಿತು. ನಿಮ್ಮಂತಹ ಹಿರಿಯರಿಂದ ಇಂಥ ವರ್ತನೆಯನ್ನು ನಾನು ಖಂಡಿತ ನಿರೀಕ್ಷೆ ಮಾಡಿರಲಿಲ್ಲ. ಕಷ್ಟದಲ್ಲಿರುವ ರೈತ ನಿಮ್ಮಂಥವರ ಬಳಿ ಬಂದು ದುಃಖ ತೋಡಿಕೊಳ್ಳದೆ ಇನ್ನು ಯಾರ ಬಳಿ ಹೋಗಿ ಹೇಳಿಕೊಳ್ಳಬೇಕು ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ರೈತನ ಮೇಲೆ ತೋರಿದ ದರ್ಪ ಸರಿಯಲ್ಲ: ಖರ್ಗೆಗೆ ಕುಮಾರಸ್ವಾಮಿ ಟೀಕೆ

-

ಹರೀಶ್‌ ಕೇರ ಹರೀಶ್‌ ಕೇರ Sep 8, 2025 2:30 PM

ಬೆಂಗಳೂರು: ತೊಗರಿ ಬೆಳೆ ಹಾಳಾಗಿದೆ ಎಂದು ದುಃಖ ಹೇಳಿಕೊಳ್ಳಲು ನಿಮ್ಮ ಬಳಿಗೆ ಬಂದ ರೈತನ (farmer) ಮೇಲೆ ದರ್ಪ ತೋರಿದ್ದು ಸರಿಯಲ್ಲ. ರೈತನನ್ನು ಅಪಮಾನಿಸಿದ್ದೀರಿ. ಜತೆಗೆ, ತಾಯಿಯನ್ನು ಅಪಮಾನಿಸಿದ್ದೀರಿ! ಇದು ಸರಿಯಲ್ಲ. ಕೊನೇ ಪಕ್ಷ ಆ ವ್ಯಕ್ತಿಗೆ ಸಾಂತ್ವನ ಹೇಳಿ, ಆತನ ಕಣ್ಣೀರು ಒರೆಸಬಹುದಿತ್ತು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (Minister HD Kumaraswamy) ಅವರು ಕಾಂಗ್ರೆಸ್‌ ಅಧ್ಯಕ್ಷ (Congress president) ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಟೀಕಿಸಿದ್ದಾರೆ.

ನಿನ್ನೆ ನಡೆದ ಘಟನೆಯೊಂದರಲ್ಲಿ, ಅತಿವೃಷ್ಟಿಯಿಂದಾಗಿ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಯುವ ರೈತನ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರೇಗಿದ್ದರು. ʼನನ್ನದು ನಲವತ್ತು ಎಕರೆಯಲ್ಲಿ ಬೆಳೆದಿದ್ದು ಹಾಳಾಗಿದೆ. ತೊಗರಿ ಮಾತ್ರವಲ್ಲ, ಹೆಸರು, ಹತ್ತಿ, ಸೂರ್ಯಕಾಂತಿ ಸಹ ಹಾಳಾಗಿದೆ. ನಾನು ಯಾರಿಗೆ ಹೋಗಿ ಹೇಳಲಿ. ನೀನು ಬೇಕಿದ್ದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹತ್ತಿರ ಹೋಗಿ ಕೇಳು. ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡʼ ಎಂದು ಸಿಡಿಮಿಡಿ ಮಾಡಿದ್ದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ. ಅದು ಹೀಗಿದೆ:

ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರೇ, ರೈತರ ಬಗ್ಗೆ ನಿಮ್ಮ ನಡವಳಿಕೆ ಕಂಡು ಬಹಳ ಬೇಸರವಾಯಿತು. ನಿಮ್ಮಂತಹ ಹಿರಿಯರಿಂದ ಇಂಥ ವರ್ತನೆಯನ್ನು ನಾನು ಖಂಡಿತ ನಿರೀಕ್ಷೆ ಮಾಡಿರಲಿಲ್ಲ. ಕಷ್ಟದಲ್ಲಿರುವ ರೈತ ನಿಮ್ಮಂಥವರ ಬಳಿ ಬಂದು ದುಃಖ ತೋಡಿಕೊಳ್ಳದೆ ಇನ್ನು ಯಾರ ಬಳಿ ಹೋಗಿ ಹೇಳಿಕೊಳ್ಳಬೇಕು?

ನೀವು ರಾಜ್ಯಸಭೆ ಪ್ರತಿಪಕ್ಷ ನಾಯಕರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರು. ಇದೆಲ್ಲವನ್ನೂ ತಾವು ಮರೆತು ಮಾತನಾಡಿದ್ದೀರಿ! ಇದು ತಮಗೆ ಭೂಷಣವಲ್ಲ.

ದುಃಖ ಹೇಳಿಕೊಳ್ಳಲು ಬಂದ ರೈತನ ಮೇಲೆ ಈ ಪರಿಯ ದರ್ಪ ಅಗತ್ಯವಿರಲಿಲ್ಲ. ನೀವೂ ತೊಗರಿ ರೈತರೇ ಆಗಿರಬಹುದು. ಆದರೆ 40 ಎಕರೆಯಲ್ಲಿ ಬೆಳೆಯುವ ತಮಗೂ, ಒಂದು ಅಥವಾ ಎರಡು ಎಕರೆಯಲ್ಲಿ ಬೆಳೆಯುವ ಆ ಬಡರೈತನಿಗೂ ಹೋಲಿಕೆಯೇ? ನಷ್ಟವನ್ನು ಭರಿಸುವ ಶಕ್ತಿ ನಿಮಗಿರುತ್ತದೆ, ರೈತನಿಗೆ ಆ ಶಕ್ತಿ ಇರಬೇಕಲ್ಲವೇ?

"ನಿನ್ನದು 4 ಎಕ್ರೆ ಹಾಳಾಗಿದೆ. ನನ್ನದು 40 ಎಕ್ರೆ ಹಾಳಾಗಿದೆ. ಪ್ರಚಾರಕ್ಕಾಗಿ ತೊಗರಿ ತೆಗೆದುಕೊಂಡು ಬಂದ್ದಿದ್ದೀಯ? ತೊಗರಿ ಅಷ್ಟೆ ಅಲ್ಲ; ಉದ್ದು, ಹೆಸರು ಕೂಡ ಹಾಳಾಗಿರುವುದು ನನಗೆ ಗೊತ್ತಿದೆ. ಆರು ಹಡೆದವಳ ಮುಂದೆ ಮೂರು ಹಡೆದವಳು ಹೇಳಿದಂತಾಯಿತು.."

ಹೀಗೆಂದರೇನು ಖರ್ಗೆಯವರೇ? ಹಿರಿಯರು ತಾವೇ ಹೇಳಬೇಕು. ರೈತನನ್ನು ಅಪಮಾನಿಸಿದ್ದೀರಿ. ಜತೆಗೆ, ತಾಯಿಯನ್ನು ಅಪಮಾನಿಸಿದ್ದೀರಿ! ಇದು ಸರಿಯಲ್ಲ. ಕೊನೇಪಕ್ಷ ಆ ವ್ಯಕ್ತಿಗೆ ಸಾಂತ್ವನ ಹೇಳಿ, ಆತನ ಕಣ್ಣೀರು ಒರೆಸಬಹುದಿತ್ತು. ನಿಮ್ಮ ನಡವಳಿಕೆ @INCIndia ಪಕ್ಷದ ಪರಂಪರಾಗತ ದರ್ಪ, ಅಹಂಗೆ ಸಾಕ್ಷಿ- ಎಂದು ಎಚ್‌ಡಿಕೆ ಟೀಕಿಸಿದ್ದಾರೆ.