Bengaluru Rains: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ; ಜು.25ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ!
Bengaluru Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.


ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರವೂ ಮಳೆ ಅಬ್ಬರ ಮುಂದುವರಿದಿದೆ. ಮಧ್ಯಾಹ್ನದಿಂದಲೇ ನಗರದ ವಿವಿಧೆಡೆ ಬಿರುಸಿನ ಮಳೆಯಾಗಿದೆ (Bengaluru Rains). ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣ ಉಂಟಾಗಿ, ವಾಹನ ಸವಾರರು ಹೈರಾಣಾದರು. ಹೆಬ್ಬಾಳ, ಬಾಗಲೂರು, ಬೆಳ್ಳಂದೂರು, ಆರ್.ಟಿ.ನಗರ, ಆರ್ ಆರ್ ನಗರ ಸೇರಿ ಹಲವೆಡೆ ಭಾರಿ ಮಳೆಯಾಗಿದ್ದು, ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.
ಮಡಿವಾಳ ಅಯ್ಯಪ್ಪ ಅಂಡರ್ ಪಾಸ್, ರೂಬಿ 2 ಜಂಕ್ಷನ್, ವೀರಣ್ಣ ಪಾಳ್ಯ ರೈಲ್ವೆ ಗೇಟ್, ಕೆಇಬಿ ಜಂಕ್ಷನ್, ಕೊತ್ತನೂರು ಮುಖ್ಯರಸ್ತೆ, ಎಎಂಸಿ ಜಂಕ್ಷನ್, ಹೆಬ್ಬಾಳ ಅಪ್ಪರ್ ರ್ಯಾಂಪ್ ಬಳಿ ರಸ್ತೆಯಲ್ಲಿ ನೀರು ನಿಂತಿದ್ದರಿಂದ ನಿಧಾನಗತಿಯ ಸಂಚಾರವಿತ್ತು. ಇನ್ನು ರಾಧಾಕೃಷ್ಣ ಥಿಯೇಟರ್ ಬಳಿ ಮರ ಬಿದ್ದಿದ್ದರಿಂದ ಆರ್ಟಿ ನಗರದ ಕಡೆಗೆ ನಿಧಾನಗತಿಯ ಸಂಚಾರವಿತ್ತು.

ಇನ್ನು ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಹವಾಮಾನ ಇಲಾಖೆಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ. ಆದ್ದರಿಂದ ಜನರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಮಳೆಗಾಲದಲ್ಲಿ ಅಲರ್ಜಿ ನಿಯಂತ್ರಣ ಹೇಗೆ?
ಜುಲೈ 24ರವರೆಗೆ ರಾಜ್ಯಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ವರುಣ ಆರ್ಭಟಿಸುವ ನಿರೀಕ್ಷೆ ಇದೆ. ಇನ್ನು ಜುಲೈ 25ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರಿಂದ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.