Darshan Thoogudeepa: ಬಳ್ಳಾರಿ ಜೈಲಿಗೆ ಹೋಗಲಿದ್ದಾರಾ ದರ್ಶನ್? ʼದಾಸʼನ ಮುಂದಿನ ನಡೆ ಏನು?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದ ಎ 2 ಆರೋಪಿ ನಟ ದರ್ಶನ್ನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದು ಪಡಿಸಿದ ಬೆನ್ನಲ್ಲೇ ಅವರನ್ನು ಬೆಂಗಳೂರಿನ ಹೊಸಕೆರೆ ಹಳ್ಳಿಯಿಂದ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗುತ್ತದ ಎನ್ನಲಾಗಿದೆ.


ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದ ಎ 2 ಆರೋಪಿ ನಟ ದರ್ಶನ್ನನ್ನು (Darshan Thoogudeepa) ಪೊಲೀಸರು ಮತ್ತೆ ಬಂಧಿಸಿದ್ದಾರೆ. ಹೈಕೋರ್ಟ್ ಕೊಟ್ಟ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದ ಬೆನ್ನಲ್ಲೇ ಅವರನ್ನು ಬೆಂಗಳೂರಿನ ಹೊಸಕೆರೆ ಹಳ್ಳಿಯಿಂದ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಯ ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಈ ಬಾರಿ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಹೋಗುತ್ತಾರಾ ಅಥವಾ ಅವರನ್ನು ಬಳ್ಳಾರಿ ಜೈಲಿನಲ್ಲಿ ಇರಿಸಲಾಗುತ್ತ ಎನ್ನುವ ಕುತೂಹಲ ಮೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಮತ್ತು ಎ 2 ಆರೋಪಿ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ 2024ರ ಡಿಸೆಂಬರ್ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಇದರ ವಿರುದ್ಧ ಕರ್ನಾಟಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ಎಲ್ಲ ಆರೋಪಿಗಳ ಜಾಮೀನು ರದ್ದುಗೊಳಿಸಿದೆ. ಹೀಗಾಗಿ ದರ್ಶನ್ ಮತ್ತು ಪವಿತ್ರಾ ಗೌಡ ಅವರನ್ನು ಮತ್ತೆ ಅರೆಸ್ಟ್ ಮಾಡಲಾಗಿದೆ. ಸದ್ಯ ದರ್ಶನ್ ಅವರ ಮುಂದಿನ ನಡೆ ಏನು ಎನ್ನುವ ಬಗ್ಗೆ ಕುತೂಹಲ ಮನೆ ಮಾಡಿದೆ.
ಈ ಸುದ್ದಿಯನ್ನೂ ಓದಿ: Actor Darshan: ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ಗಮನ ಸೆಳೆದ ರಮ್ಯಾ ಪೋಸ್ಟ್
ಈ ಬಾರಿ ದರ್ಶನ್ ಯಾವ ಜೈಲಿಗೆ?
ಈ ಹಿಂದೆ ದರ್ಶನ್ ಮಧ್ಯಂತರ ಜಾಮೀನು ಪಡೆದಾಗ ಬಳ್ಳಾರಿ ಜೈಲಿನಲ್ಲಿದ್ದರು. ಬೆಂಗಳೂರು ಜೈಲಿನಲ್ಲಿ ರಾಜಾತಿಥ್ಯ ಸ್ವೀಕರಿಸಿದ ಕಾರಣ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಆರೋಪಿಗಳು ಜಾಮೀನು ಪಡೆಯುವಾಗ ಯಾವ ಜೈಲಿನಲ್ಲಿದ್ದರೋ, ಜಾಮೀನು ರದ್ದಾದಾಗಲೂ ಅದೇ ಜೈಲಿಗೆ ಕಳಿಸಬೇಕು ಎಂಬ ನಿಯಮ ಇದೆಯಂತೆ. ಈ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ.
ದರ್ಶನ್ಗಾಗಿ ಯಾವುದೇ ವಿಶೇಷ ವ್ಯವಸ್ಥೆ ಮಾಡಲಾಗಿಲ್ಲ. ಈ ಹಿಂದೆ ದರ್ಶನ್ ಇದ್ದ ಕೊಠಡಿಯನ್ನೇ ಅವರಿಗೆ ಕೊಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ರೇಣುಕಾಸ್ವಾಮಿ ಕುಟುಂಬದ ಸಂತಸ
ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡರ್ ಸಂತಸ ವ್ಯಕ್ತಪಡಿಸಿದ್ದಾರೆ. ʼʼದರ್ಶನ್ ಅವರ ಬೇಲ್ ಸುಪ್ರೀಂ ಕೋರ್ಟ್ನಲ್ಲಿ ರದ್ದಾಗಿದೆ. ಆರೆಸ್ಟ್ ಮಾಡಲು ಆದೇಶ ಆಗಿದೆ. ನ್ಯಾಯಾಂಗದ ಮೇಲೆ ನಂಬಿಕೆ ಹೆಚ್ಚಾಗಿದೆ. ಹೈಕೋರ್ಟ್ ಬೇಲ್ ಕೊಟ್ಟಾಗ ಆತಂಕ ಆಗಿತ್ತು. ಸರ್ಕಾರ ಸುಪ್ರೀಂ ಕೋರ್ಟ್ಗೆ ಅಪೀಲ್ ಮಾಡಿದ್ದರು. ಯಾವುದೇ ಅಪರಾಧಿ ತಪ್ಪಿಸಿಕೊಳ್ಳಲು ಅಸಾಧ್ಯ ಎಂದು ಈ ತೀರ್ಪು ಬಂದಿದೆ. ಸರ್ಕಾರ ಮತ್ತು ನ್ಯಾಯಾಂಗದ ಬಗ್ಗೆ ಹೆಚ್ಚು ನಂಬಿಕೆ ಹುಟ್ಟಿದೆ, ಈ ಕೇಸ್ನಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ಇದೆʼʼ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ತಾಯಿ ರತ್ನಪ್ರಭ ಮಾತನಾಡಿ, ʼʼಕೋರ್ಟಿಗೆ ತಲೆ ಬಾಗಲೇ ಬೇಕು. ನಮಗೆ ನ್ಯಾಯ ಸಿಕ್ಕಿದೆ. ಟ್ರಯಲ್ ಇನ್ನೂ ಕೂಡಾ ನಡೆಯಬೇಕಿದೆ. ನಮ್ಮ ಮನೆಯವರು ಪೂಜೆಗೆ ಕೂತಾಗ ಹೇಳಿದ್ದೇನೆ. ನಮಗೆ ಇದೀಗ ಸಂತೋಷವಾಗಿದೆ. ಕಾನೂನಿನಲ್ಲಿ ಏನು ತೀರ್ಪು ಬರುತ್ತೋ ಅದರ ಬಗ್ಗೆ ನಂಬಿಕೆ ಇದೆ. ಇವತ್ತಿನ ಕೋರ್ಟ್ ತೀರ್ಪಿನಿಂದ ನಂಬಿಕೆ ಬಂದಿದೆʼʼ ಎಂದಿದ್ದಾರೆ.