Janardhana Reddy: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಶಾಸಕತ್ವ ಅನರ್ಹತೆ ಆದೇಶ ವಾಪಸ್
Janardhana Reddy: ಸಿಬಿಐ ಕೋರ್ಟ್ ನೀಡಿದ್ದ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ಜೂ.11ರಂದು ತಾತ್ಕಾಲಿಕ ತಡೆ ನೀಡಿದೆ. ಹಾಗೂ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಮೇ 6ರಂದು ತಾವು ಹೊರಡಿಸಿದ್ದ ಅನರ್ಹ ಆದೇಶ ವಾಪಸ್ ಪಡೆದು ಸುತ್ತೋಲೆ ಹೊರಡಿಸಿದ್ದಾರೆ.

ಜನಾರ್ದನ ರೆಡ್ಡಿ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ (Illegal Mining) ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ (Gali Janardhana Reddy) ಬಿಗ್ ರಿಲೀಫ್ ಸಿಕ್ಕಿದ್ದು, ಶಾಸಕತ್ವ ಅನರ್ಹ ಆದೇಶ ವಾಪಸ್ ಪಡೆಯಲಾಗಿದೆ. ಗಂಗಾವತಿಯ ಶಾಸಕ (Gangavathi MLA) ಸ್ಥಾನದಿಂದ ಅವರನ್ನು ಅನರ್ಹಗೊಳಿಸಿ ಹೊರಡಿಸಲಾಗಿದ್ದ ಆದೇಶವನ್ನು ಮರಳಿ ಪಡೆಯಲಾಗಿದ್ದು, ಅವರ ಶಾಸಕತ್ವ ಮುಂದಿನ ತೀರ್ಪಿನವರೆಗೆ ಯಥಾಸ್ಥಿತಿಯಲ್ಲಿ ಇರಲಿದೆ.
ಹೈದರಾಬಾದ್ ಸಿಬಿಐ ಕೋರ್ಟ್ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧ ತೀರ್ಪು ನೀಡಿ ಏಳು ವರ್ಷಗಳ ಸಜೆ ವಿಧಿಸಿತ್ತು. ಇದರ ಹಿಂದೆಯೇ ಅವರನ್ನು ಶಾಸಕ ಸ್ಥಾನದಿಂದ ತೆಗೆಯಲಾಗಿತ್ತು. ಮೇ 6 ರಿಂದ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಜನಪ್ರತಿನಿಧಿಗಳ ಕಾಯಿದೆ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ ಎರಡು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಅವರ ಶಾಸಕ ಸ್ಥಾನ ರದ್ದಾಗುತ್ತದೆ. ಆದರೆ ಮೇಲಿನ ಕೋರ್ಟ್ ಶಿಕ್ಷೆ ಅಥವಾ ತೀರ್ಪನ್ನು ರದ್ದುಪಡಿಸಿದರೆ, ಶಾಸಕ ಸ್ಥಾನ ಹಾಗೇ ಉಳಿಯುತ್ತದೆ.
ಸಿಬಿಐ ಕೋರ್ಟ್ ನೀಡಿದ್ದ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ಜೂ.11ರಂದು ತಾತ್ಕಾಲಿಕ ತಡೆ ನೀಡಿದೆ. ಹಾಗೂ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಮೇ 6ರಂದು ತಾವು ಹೊರಡಿಸಿದ್ದ ಅನರ್ಹ ಆದೇಶ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ವಾಪಸ್ ಪಡೆದು ಸುತ್ತೋಲೆ ಹೊರಡಿಸಿದ್ದಾರೆ.
ಏನಿದು ಪ್ರಕರಣ?
ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನ ರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸ ರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.
2009ರಲ್ಲಿ ಆಂಧ್ರದ ಅಂದಿನ ಮುಖ್ಯಮಂತ್ರಿ ಕಾಂಗ್ರೆಸ್ನ ರೋಸಯ್ಯ ಅವರು 2009ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆಪ್ಟೆಂಬರ್ 5 ರಂದು ಜನಾರ್ದನ ರೆಡ್ಡಿ, ಶ್ರೀನಿವಾಸ ರೆಡ್ಡಿ ಸಿಬಿಐನಿಂದ ಬಂಧಿತರಾಗಿ, ಮೂರುವರೆ ವರ್ಷಗಳ ಕಾಲ ಚಂಚಲಗುಡ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ವಾಸ ಅನುಭವಿಸಿದ್ದರು. ಪ್ರಕರಣದಲ್ಲಿ ಟಪಾಲ್ ಗಣೇಶ ಮತ್ತವರ ಸಹೋದರ ಏಕಾಂಬರಂ, ಪ್ರಮುಖ ಸಾಕ್ಷಿಯಾಗಿದ್ದು, ಈಗಾಗಲೇ ಸಿಬಿಐ 3400 ಕ್ಕೂ ಹೆಚ್ಚು ದಾಖಲೆಗಳ ಪರಿಶೀಲನೆ ಹಾಗೂ 219ಕ್ಕೂ ಹೆಚ್ವು ಸಾಕ್ಷಿಗಳ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲಾ ಆರೋಪಿಗಳು ಜೈಲಿಗೆ ಹೋಗೇ ಹೋಗ್ತಾರೆ ಎಂದು ಟಪಾಲ್ ಗಣೇಶ್ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿಂದೆ ಜನಾರ್ದನ ರೆಡ್ಡಿ ಹಾಗೂ ಅವರ ಪಟಾಲಂನಿಂದ ಅನುಭವಿಸಿದ್ದ ಕಿರುಕುಳದ ಬಗ್ಗೆಯೂ ಇಂಚಿಂಚಾಗಿ ತೆರೆದಿಟ್ಟಿದ್ದರು.
ಇದನ್ನೂ ಓದಿ: Janardhana Reddy: ಜನಾರ್ದನ ರೆಡ್ಡಿ ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ, ಶಾಸಕ ಸ್ಥಾನ ಏನಾಗುತ್ತೆ?