Kalaburagi Bandh: ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್: ರೈತರ ಆಕ್ರೋಶ, ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಭಟನೆ
ಬೆಳಗ್ಗಿನಿಂದಲೇ ಪ್ರತಿಭಟನೆಗೆ ಇಳಿದ ರೈತ ಮುಖಂಡರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ ಮಾಡಿದರು. ಬಂದ್ಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಕೇಂದ್ರ ಬಸ್ ನಿಲ್ದಾಣದಿಂದ ಹೊರಡುವ ಸಾರಿಗೆ ಬಸ್ಗಳ ಸಂಚಾರವೂ ಸ್ಥಗಿತಗೊಂಡಿತ್ತು.
-
15 ಟಿಎಂಸಿ ನೀರು ಬಿಡುಗಡೆ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಒತ್ತಾಯ
ಕಲಬುರಗಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಹಾಗೂ ಜಲಮೂಲಗಳ ಮೇಲೆ ಉಂಟಾಗಿರುವ ಸಂಕಷ್ಟವನ್ನು ಪರಿಗಣಿಸಿ ತಕ್ಷಣ ಬರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಗುರುವಾರ ಕಲಬುರಗಿ ಬಂದ್(Kalaburagi Bandh)ಗೆ ಕರೆ ನೀಡಿದವು. ಬಂದ್ ಹಿನ್ನೆಲೆಯಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ರೈತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗ್ಗಿನಿಂದಲೇ ಪ್ರತಿಭಟನೆಗೆ ಇಳಿದ ರೈತ ಮುಖಂಡರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ ಮಾಡಿದರು. ಬಂದ್ಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಕೇಂದ್ರ ಬಸ್ ನಿಲ್ದಾಣದಿಂದ ಹೊರಡುವ ಸಾರಿಗೆ ಬಸ್ಗಳ ಸಂಚಾರವೂ ಸ್ಥಗಿತಗೊಂಡಿತ್ತು.
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ, ಕುಡಿಯುವ ನೀರು ಹಾಗೂ ಜಲಮೂಲಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಬಾವಿ, ಕೆರೆ, ಹಳ್ಳ ಸೇರಿದಂತೆ ಹಲವು ಜಲಮೂಲಗಳು ಬತ್ತುತ್ತಿರುವ ಹಿನ್ನೆಲೆ ಯಲ್ಲಿ ಸರ್ಕಾರ ಕೂಡಲೇ ಬರ ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರೈತರ ಪ್ರಮುಖ ಬೇಡಿಕೆಗಳು
ಜಿಲ್ಲೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡಗಳನ್ನು ತಕ್ಷಣ ಕಳುಹಿಸಿ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಬೆಳೆ ವಿಮೆಯಿಂದ ವಂಚಿತರಾಗಿರುವ ಅರ್ಹ ರೈತರಿಗೆ ವಿಮಾ ಮೊತ್ತ ಬಿಡುಗಡೆ ಮಾಡಬೇಕು. ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕಲಬುರಗಿ ಜಿಲ್ಲೆಯ ಪಾಲಿನ 15 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಇದರೊಂದಿಗೆ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಬಾಕಿ ಉಳಿದಿರುವ ವಯೋವೃದ್ಧರ ಪಿಂಚಣಿ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು. ರೈತರ ಹೋರಾಟಕ್ಕೆ ಅಡತ್ ಮಾಲೀಕರ ಸಂಘ, ಹೋಟೆಲ್ ಹಾಗೂ ಬೇಕರಿ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆ ಗಳು ಬೆಂಬಲ ಸೂಚಿಸಿದವು.
ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟ ಸಂಘಟನೆಯ ಶರಣಬಸಪ್ಪ ಮಮಶೆಟ್ಪಿ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಸಿದ್ದು ಎಸ್.ಎಲ್., ಕರೆಪ್ಪ ಕರೆಗೊಂಡ, ಗುರಣ್ಣಗೌಡ ಜೇವರ್ಗಿ, ಪದ್ಮಿನಿ ಕಿರಣಗಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.