ಕಲಬುರಗಿ: ಒಂದೇ ಮರಕ್ಕೆ ನೇಣುಬಿಗಿದುಕೊಂಡು ವಿವಾಹಿತ ಮಹಿಳೆ ಮತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮ ಹೊರವಲಯದಲ್ಲಿ ನಡೆದಿದೆ. ಇಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಮೃತರು ಚಿತ್ತಾಪುರ ಪಟ್ಟಣದ ಶರಣಮ್ಮ (32) ಮತ್ತು ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಬಸವರಾಜ್ (21) ಎಂದು ತಿಳಿದುಬಂದಿದೆ. ಮೃತರಿಬ್ಬರು ಪ್ರೇಮಿಗಳೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ, ಸಿಪಿಐ ಮತ್ತು ಪಿಎಸ್ಐ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
32 ವರ್ಷದ ಮಹಿಳೆ ಜೊತೆಗೆ 21 ವರ್ಷದ ಯುವಕ ಸಂಬಂಧ ಹೊಂದಿದ್ದ ಎಂಬ ಅನುಮಾನ ವ್ಯಕ್ತವಾಗಿದೆ. ಕುಟುಂಬಸ್ಥರಿಗೆ ಹೆದರಿ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಹಿಳೆಗೆ ಈಗಾಗಲೇ ಮದುವೆಯಾಗಿರುವುದು ಕೂಡ ಬೆಳಕಿಗೆ ಬಂದಿದೆ. ಆಕೆಗೂ ಗಂಡ ಮಕ್ಕಳು ಸಂಸಾರ ಇದ್ದು, ಇದೀಗ ದಿಢೀರ್ ಈಕೆ ನೇಣಿಗೆ ಶರಣಾಗಿದ್ದಾಳೆ. ಈ ಇಬ್ಬರ ಸಾವು ಹಲವು ಅನುಮಾನಗಳಿಗೂ ಕಾರಣವಾಗಿದೆ.
ಈ ಘಟನೆ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಎರಡೂ ಕುಟುಂಬದವರನ್ನು ಪೊಲೀಸರು ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ. ಸದ್ಯ ಪೊಲೀಸರು ಪ್ರಕರಣದ ಸಂಪೂರ್ಣ ವಿವರಗಳನ್ನು ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ. ಇಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.