Asha Raghu no more: ಕನ್ನಡ ಸಾಹಿತಿ, ಪ್ರಕಾಶಕಿ ಆಶಾ ರಘು ಇನ್ನಿಲ್ಲ
ಆಶಾ ರಘು ಅವರು ಕನ್ನಡ ಕಾದಂಬರಿಕಾರರಾಗಿದ್ದರಲ್ಲದೆ ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಇತ್ತೀಚೆಗೆ ಉಪಾಸನಾ ಎಂಬ ಪ್ರಕಾಶನವನ್ನೂ ಆರಂಭಿಸಿ ಯುವ ಲೇಖಕ/ಕಿಯರ ಪುಸ್ತಕಗಳನ್ನು ಪ್ರಕಟಿಸಿದ್ದರು. ಅವರ ಪತಿ ಖ್ಯಾತ ಆಹಾರ ತಜ್ಞ, ಲೇಖಕ ಕೆ.ಸಿ. ರಘು ಎರಡು ವರ್ಷ ಹಿಂದೆ ಮೃತಪಟ್ಟಿದ್ದರು.
ಆಶಾ ರಘು -
ಬೆಂಗಳೂರು, ಜ.10: ಕನ್ನಡ ಕಾದಂಬರಿಕಾರ್ತಿ, ಲೇಖಕಿ, ಪ್ರಕಾಶಕಿ, ಕಲಾವಿದೆ ಆಶಾ ರಘು (Asha Raghu) ಅವರು ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. 'ಆವರ್ತ', 'ಗತ' ಇವರ ಪ್ರಮುಖ ಕಾದಂಬರಿಗಳು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಇವರು ಪಡೆದಿದ್ದರು. ಇವರ ಪತಿ, ಖ್ಯಾತ ಆಹಾರ ತಜ್ಞ ಹಾಗೂ ಲೇಖಕ ಕೆಸಿ ರಘು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು.
ಆಶಾ ರಘು ಅವರು ಕನ್ನಡದ ಪ್ರಮುಖ ಕಾದಂಬರಿಗಾರ್ತಿಯರಲ್ಲಿ ಒಬ್ಬರು. ಕೇಶವ ಅಯ್ಯಂಗಾರ್ ಹಾಗೂ ಸುಲೋಚನ ದಂಪತಿಗಳ ಹಿರಿಯ ಮಗಳಾಗಿ 1979ರ ಜೂನ್ 18ರಂದು ಬೆಂಗಳೂರಿನಲ್ಲಿ ಹುಟ್ಟಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದು, ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು. ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಇತ್ತೀಚೆಗೆ ಉಪಾಸನಾ ಎಂಬ ಪ್ರಕಾಶನವನ್ನೂ ಆರಂಭಿಸಿ ಯುವ ಲೇಖಕ/ಕಿಯರ ಪುಸ್ತಕಗಳನ್ನು ಪ್ರಕಟಿಸಿದ್ದರು.
ಆವರ್ತ, ಗತ, 'ಮಾಯೆ', 'ಚಿತ್ತರಂಗ', ಕೆಂಪು ದಾಸವಾಳ, ವಕ್ಷ ಸ್ಥಲ ಕಾದಂಬರಿಗಳನ್ನು, 'ಆರನೇ ಬೆರಳು', 'ಬೊಗಸೆಯಲ್ಲಿ ಕಥೆಗಳು', 'ಅಪರೂಪದ ಪುರಾಣ ಕಥೆಗಳು' ಮೊದಲಾದ ಕಥಾಸಂಕಲನಗಳನ್ನೂ, 'ಚೂಡಾಮಣಿ', 'ಕ್ಷಮಾದಾನ', 'ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು' 'ಪೂತನಿ ಮತ್ತಿತರ ನಾಟಕಗಳು', ಮೊದಲಾದ ನಾಟಕ ಕೃತಿಗಳನ್ನು ರಚಿಸಿದ್ದಾರೆ. ಇವರ 'ಆವರ್ತ' ಕಾದಂಬರಿಯ ಕುರಿತ ಕೃತಿ 'ಆವರ್ತ-ಮಂಥನ' ಕೂಡಾ ಪ್ರಕಟಗೊಂಡಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (2014), ಸೂರ್ಯನಾರಾಯಣ ಚಡಗ ಪ್ರಶಸ್ತಿ (2014), ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ಪ್ರಶಸ್ತಿ (2019), ರಾಯಚೂರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ಪ್ರಶಸ್ತಿ (2020), ಸೇಡಂನ ಅಮ್ಮ (2021), ಕರ್ನಾಟಕ ಲೇಖಕಿಯರ ಸಂಘದ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ (2023)ಗಳನ್ನು ಪಡೆದಿದ್ದಾರೆ. ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2023 ರಲ್ಲಿ ಇವರಿಗೆ 'ಸಾಹಿತ್ಯಾಮೃತ ಸರಸ್ವತಿ' ಎಂಬ ಬಿರುದು ನೀಡಿ ಗೌರವಿಸಿದೆ.