ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Caste Census: ಜಾತಿಗಣತಿ ವರದಿ; ಮರು ಗಣತಿಗೆ ರಾಜ್ಯ ಸರ್ಕಾರ ನಿರ್ಧಾರ, ಜೂ.12ಕ್ಕೆ ವಿಶೇಷ ಕ್ಯಾಬಿನೆಟ್‌ ಸಭೆ

Caste Census: ಜಾತಿ ಗಣತಿ ವರದಿಯ ದತ್ತಾಂಶಗಳ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ವರದಿಯ ಬಿಡುಗಡೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಿವಾದಾಸ್ಪದ ದತ್ತಾಂಶಗಳನ್ನು ಮರು ಪರಿಶೀಲಿಸಲು‌ ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಜಾತಿಗಣತಿ ವರದಿ: ಮರು ಗಣತಿಗೆ ರಾಜ್ಯ ಸರ್ಕಾರ ನಿರ್ಧಾರ

Profile Prabhakara R Jun 10, 2025 5:11 PM

ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಜಾತಿ ಗಣತಿ ವರದಿ ಜಾರಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ. ಜಾತಿಗಣತಿ ವೇಳೆ ಪಡೆದ ದತ್ತಾಂಶಗಳ ಮರು ಗಣತಿಗೆ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಜೂನ್ 12 ರಂದು ನಡೆಯಲಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 2015ರಲ್ಲಿ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಏಪ್ರಿಲ್ 2025ರಲ್ಲಿ ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ಈ ವರದಿಯ ದತ್ತಾಂಶಗಳು ಕೆಲವು ಪ್ರಮುಖ ಸಮುದಾಯಗಳ ಜನಸಂಖ್ಯೆಯನ್ನು ಕಡಿಮೆ ತೋರಿಸಿವೆ ಎಂಬ ಬಗ್ಗೆ ಒಕ್ಕಲಿಗರು, ಲಿಂಗಾಯತರು ಸೇರಿದಂತೆ ಹಲವು ಸಮುದಾಯಗಳು ಹಾಗೂ ನಾಯಕರು ಆರೋಪಿಸಿದ್ದರು. ಕೆಲವು ಕಾಂಗ್ರೆಸ್ ಸಚಿವರೇ ವರದಿಯ ನಿಖರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರಿಂದ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು.

ಜಾತಿ ಗಣತಿ ವರದಿಯ ದತ್ತಾಂಶಗಳ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ವರದಿ ಜಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಿವಾದಾಸ್ಪದ ದತ್ತಾಂಶಗಳನ್ನು ಮರು ಗಣತಿ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾತನಾಡಿ, "ಜಾತಿ ಗಣತಿ ವರದಿಯು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ. ಆದರೆ, ದತ್ತಾಂಶಗಳ ನಿಖರತೆಯ ಬಗ್ಗೆ ಉಂಟಾದ ಗೊಂದಲವನ್ನು ತೆರವುಗೊಳಿಸಲು ಸರ್ಕಾರ ಬದ್ಧವಾಗಿದೆ. ಕಾಂಗ್ರೆಸ್ ಈ ವಿಷಯದಲ್ಲಿ ಪಾರದರ್ಶಕ ನಿರ್ಧಾರ ಕೈಗೊಳ್ಳಲಿದೆ" ಎಂದು ಹೇಳಿದ್ದಾರೆ.

ಜೂನ್ 12ರಂದು ವಿಶೇಷ ಕ್ಯಾಬಿನೆಟ್ ಸಭೆ

ಜೂನ್ 12ರಂದು ವಿಧಾನಸೌಧದಲ್ಲಿ ನಡೆಯಲಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಜಾತಿ ಗಣತಿ ವರದಿಯ ಮರು ಪರಿಶೀಲನೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಸಚಿವರು ತಮ್ಮ ಆಕ್ಷೇಪಣೆಗಳನ್ನು ಲಿಖಿತವಾಗಿ ಸಲ್ಲಿಸಲಿದ್ದಾರೆ. ಜಾತಿ ಗಣತಿಯ ದತ್ತಾಂಶಗಳ ಮರು ಎಣಿಕೆಗೆ ಸಂಬಂಧಿಸಿದ ಸಮಿತಿಯ ರಚನೆ ಅಥವಾ ಪಾರದರ್ಶಕ ಸಮೀಕ್ಷೆಗೆ ಸಂಬಂಧಿಸಿದ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Bengaluru stampede: ಚಿನ್ನಸ್ವಾಮಿ ಸ್ಟೇಡಿಯಂ ಪಾಕಿಸ್ತಾನದಲ್ಲಿಲ್ಲ: ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ