ಕೋಲಾರ: ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಲು ಆಗ್ರಹಿಸಿ ರೈತರಿಂದ (Mango growers Protest) ಇಂದು ಕೋಲಾರ ಜಿಲ್ಲೆ ಬಂದ್ಗೆ ಕರೆ ನೀಡಲಾಗಿತ್ತು. ಕೋಲಾರ, ಶ್ರೀನಿವಾಸಪುರ ಸೇರಿ ಜಿಲ್ಲೆಯ ವಿವಿಧೆಡೆ ರಸ್ತೆಗೆ ಮಾವಿನ ಹಣ್ಣು ಸುರಿದು ರೈತರು ಪ್ರತಿಭಟನೆ ನಡೆಸಿದ್ದಾರೆ.

ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ಒತ್ತಾಯಿಸಿ ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ರೈತರಿಂದ ಪ್ರತಿಭಟನೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಸಂಸದರಾದ ಮಲ್ಲೇಶ್ ಬಾಬು, ತಾಲೂಕು ಅಧ್ಯಕ್ಷ ಬಾಬು ಮೌನಿ ಮತ್ತು ಜೆಡಿಎಸ್ ಮುಖಂಡರು, ರೈತರು ಉಪಸ್ಥಿತರಿದ್ದರು.
ಇನ್ನು ಜಿಲ್ಲೆಯಲ್ಲೇ ಅತಿಹೆಚ್ಚು ಮಾವು ಬೆಳೆಯುವ ಶ್ರೀನಿವಾಸಪುರ ತಾಲೂಕಿನಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶ್ರೀನಿವಾಸಪುರ ಪಟ್ಟಣದಲ್ಲಿ ರೈತರು, ರಸ್ತೆಗೆ ಮಾವಿನ ಹಣ್ಣು ಸುರಿದು ಪ್ರತಿಭಟನೆ ನಡೆಸಿದರು.

ಪ್ರಸ್ತುತ ಟನ್ ಮಾವಿಗೆ ಕೇವಲ 3,000 ರಿಂದ 4,000 ಬೆಲೆ ಮಾತ್ರ ದೊರೆಯುತ್ತಿದೆ. ಆದ್ದರಿಂದ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಟನ್ಗೆ ಕನಿಷ್ಠ 10,000 ಬೆಂಬಲ ಬೆಲೆ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಈ ವೇಳೆ ಜಿಲ್ಲಾ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪ ರೆಡ್ಡಿ ಮಾತನಾಡಿ, ಪ್ರಸ್ತುತ ಮಾರುಕಟ್ಟೆಯಲ್ಲಿ ಮಾವು ದರ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದಾರೆ. ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಪ್ರತಿ ಟನ್ ಮಾವಿಗೆ ಕನಿಷ್ಠ 10 ಸಾವಿರ ರೂ. ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಾವು ಬೆಳೆಗಾರರಿಗೆ ನೆರವು ನೀಡಿ: ಕೃಷಿ ಸಚಿವರಿಗೆ ಪ್ರಲ್ಹಾದ್ ಜೋಶಿ ಪತ್ರ
ನೆರೆಯ ಆಂಧ್ರಪ್ರದೇಶ ಸರ್ಕಾರವು ಈಗಾಗಲೇ ತೋತಾಪುರಿ ತಳಿಯ ಮಾವಿಗೆ ಪ್ರತಿ ಕೆಜಿಗೆ 4 ರೂ. ರಂತೆ ಬೆಂಬಲ ಬೆಲೆ ಘೋಷಿಸಿದೆ. ಅದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಬರಬೇಕು ಎಂದು ಪ್ರತಿಭಟನಾಕಾರರು ಒತ್ತಾಯ ಮಾಡಿದ್ದಾರೆ.