ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC Veterinary Officer recruitment scam) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ ಅಧಿಕಾರಿಗಳು ತನಿಖೆಯನ್ನು ಚುರುಕು ಮಾಡಿದ್ದಾರೆ. ಇದೀಗ ಎಲ್ಲಾ 329 ಅಭ್ಯರ್ಥಿಗಳಿಗೆ ಏಕಾಏಕಿ ನೋಟಿಸ್ ಜಾರಿ ಮಾಡಿ ಶಾಕ್ ನೀಡಿದ್ದಾರೆ. ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತ್ತು.
ಕೆಪಿಎಸ್ ಸಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಅಲ್ಲದೆ ಕೆಲವು ಅಭ್ಯರ್ಥಿಗಳನ್ನು ಇಡಿ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಕೆಲವರ ಅಕ್ರಮ ನಡೆಸಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇದೀಗ ಅಭ್ಯರ್ಥಿಗಳಿಗೂ ನೋಟಿಸ್ ನೀಡಿದೆ. ಈಗಾಗಲೇ 329 ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ 658 ಓಎಂಆರ್ ಕಾರ್ಬನ್ ಶೀಟ್ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಓಎಂಆರ್ ಶೀಟ್ಗಳೊಂದಿಗೆ ಕಾರ್ಬನ್ ಶೀಟ್ಗಳನ್ನು ತಾಳೆ ಹಾಕಿ ಪರಿಶೀಲಿಸುವ ಉದ್ದೇಶದಿಂದ ಅವುಗಳನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿದೆ.
ಪರೀಕ್ಷೆಯ ವೇಳೆ ಉಸ್ತುವಾರಿ ವಹಿಸಿಕೊಂಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದರು. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಂದ ಸುಮಾರು 70ರಿಂದ 80 ಲಕ್ಷ ರೂಪಾಯಿಗಳವರೆಗೆ ಲಂಚ ಪಡೆದಿರುವ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಹಿಂದಷ್ಟೇ ಇ.ಡಿ ಅಧಿಕಾರಿಗಳು ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಕೆಲವು ಸದಸ್ಯರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ಈಗಾಗಲೇ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.