ಕರ್ನಾಟಕ ಬಜೆಟ್​ ವಿದೇಶ ಪುನೀತ್​ @ 50 ಫ್ಯಾಷನ್​ ಧಾರ್ಮಿಕ ಕ್ರೈಂ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lakshmi Hebbalkar: ಮತೀಯ ಶಕ್ತಿಗಳ ಮೇಲೆ ನಿಗಾ ವಹಿಸಿ: ಯುವ ಕಾಂಗ್ರೆಸ್‌ ಕಾರ್ಯಕರ್ತರಿಗೆ ಲಕ್ಷ್ಮೀ ಹೆಬ್ಬಾಳಕರ್‌ ಕರೆ

Lakshmi Hebbalkar: ಬಿಜೆಪಿ, ಆರ್‌ಎಸ್‌ಎಸ್‌, ಎಬಿವಿಪಿ ಇವೆಲ್ಲದರ ಬಗ್ಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಅತ್ಯಂತ ನಿಗಾ ವಹಿಸಬೇಕಿದೆ. ನಗರ, ಹಳ್ಳಿಗಳೆನ್ನದೆ ಎಲ್ಲ ಕಡೆಗಳಲ್ಲೂ ಬಹಳ ಸೂಕ್ಷ್ಮವಾಗಿ ಮತೀಯ ಶಕ್ತಿಗಳ ಮೇಲೆ ಕಣ್ಣು ಇಡಬೇಕಾಗಿದೆ. ಹೆಚ್ಚು ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷದ ಕಾರ್ಯಕ್ರಮಗಳು, ಯೋಜನೆಗಳನ್ನು ಯುವ ಕಾಂಗ್ರೆಸ್‌ ಕಾರ್ಯಕರ್ತರು ಜನತೆಗೆ ತಿಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.

ಮತೀಯ ಶಕ್ತಿಗಳ ಮೇಲೆ ನಿಗಾ ವಹಿಸಿ: ಲಕ್ಷ್ಮೀ ಹೆಬ್ಬಾಳಕರ್‌ ಕರೆ

Profile Siddalinga Swamy Mar 17, 2025 4:35 PM

ಬೆಂಗಳೂರು: ದೇಶದಲ್ಲಿ ಆಳುತ್ತಿರುವ ಪಕ್ಷವು ಯುವ ಶಕ್ತಿಯನ್ನು ದುರ್ಬಲಗೊಳಿಸುತ್ತಿದ್ದು, ಮತೀಯ ವಿಚಾರಗಳನ್ನು ಮುಂದಿಟ್ಟು ಯುವ ಜನರ ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಬಗ್ಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಎಚ್ಚರ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ (Lakshmi Hebbalkar) ಕರೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಕರ್ನಾಟಕ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದಲ್ಲಿ ಆಳುತ್ತಿರುವ ಬಿಜೆಪಿ ಸರ್ಕಾರ ಯುವ ಜನರ ವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚುತ್ತಿದೆ. ಬೆಲೆ ಏರಿಕೆ ಕಾರಣದಿಂದ ಬಡವರು, ಮಧ್ಯಮ ವರ್ಗದವರು ಹೈರಾಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಜನರಲ್ಲಿ ದ್ವೇಷ, ಅಸೂಯೆಯನ್ನು ಅಳಿಸಿ ಪ್ರೀತಿಯ ಭಾರತವನ್ನು ಪುನರ್ ನಿರ್ಮಾಣ ಮಾಡಬೇಕಿದೆ. ಇದಕ್ಕೆ ಯುವ ಜನರು ಕೈಜೋಡಿಸಬೇಕು ಎಂದು ಸಚಿವರು ಹೇಳಿದರು.

ಇಂದು ಯುವಕರ ಮುಂದೆ ಬಹಳಷ್ಟು ಸವಾಲುಗಳಿವೆ. ಮುಖ್ಯವಾಗಿ ನಿರುದ್ಯೋಗ ಸಮಸ್ಯೆ. ಕೇಂದ್ರದಲ್ಲಿ ಇರುವ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗವನ್ನು ಸೃಷ್ಟಿ ಮಾಡುತ್ತೇವೆಂದು ಹೇಳಿ, ನಂತರ ನೀವು ಬೊಂಡ, ಬಜ್ಜಿಯನ್ನು ಮಾರಿ ಎಂದು ಯುವಜನರನ್ನು ವಂಚಿಸಿದರು ಎಂದು ಆರೋಪಿಸಿದರು.

ಯುವಜನರಿಗೆ ಕಾಂಗ್ರೆಸ್‌ ಸರ್ಕಾರದಿಂದ ನಿರಾಸೆಯಾಗದು

ರಾಜ್ಯದಲ್ಲಿ ಆಡಳಿತದಲ್ಲಿ ಇರುವಂತಹ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯುವಕರಿಗೆ, ಪದವೀಧರರಿಗೆ ನಿರಾಸೆಯನ್ನು ಮಾಡಬಾರದೆಂದು ʼಯುವ ನಿಧಿʼ ಎಂಬ ಉತ್ತಮ ಯೋಜನೆಯನ್ನು ರೂಪಿಸಿದೆ. ರಾಜ್ಯದ ಜನತೆಗೆ ಕೊಟ್ಟಂತಹ ಭರವಸೆಗಳನ್ನು ಈಡೇರಿಸಿಕೊಂಡು ಮುನ್ನಡೆಯುತ್ತಿದೆ ಎಂದು ಹೇಳಿದರು. ದೇಶದ ಯುವಕರೆಂದರೆ ಭರವಸೆ. ಯುವಕರೆಂದರೆ ದೇಶದ ಶಕ್ತಿ. ಯುವಕರನ್ನು ಮೇಲೆತ್ತುವ ನಿಟ್ಟಿನಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ಆಡಳಿತ ನಡೆಸುತ್ತಿದೆ. ಯುವ ಕಾಂಗ್ರೆಸ್‌ ಸೇರಿದಂತೆ ಪಕ್ಷದ ಎಲ್ಲ ಕಾರ್ಯಕರ್ತರ ಶ್ರಮದ ಫಲವಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರ ನಡೆಸುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಯುವಕರಿಗೆ, ಮಹಿಳೆಯರಿಗೆ ಹೆಚ್ಚೆಚ್ಚು ಅವಕಾಶಗಳನ್ನು ನೀಡುತ್ತ ಬಂದಿದೆ. ಎಲ್ಲರನ್ನೂ ಸಮಾನವಾಗಿ ಕಾಣುವುದು ನಮ್ಮ ಪಕ್ಷದ ಮೊದಲ ಧ್ಯೇಯವಾಗಿದೆ. ಯುವ ಕಾಂಗ್ರೆಸ್‌ ಕಾರ್ಯಕರ್ತರು ಸದೃಢ ಸಮಾಜ ಕಟ್ಟಬೇಕಿದೆ. ಮುಂದೆ ರಾಜ್ಯದಲ್ಲಿ 2028ಕ್ಕೆ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಹೋರಾಡಬೇಕು ಎಂದು ಸಚಿವರು ಹೇಳಿದರು.

ಪಕ್ಷದ ಕಾರ್ಯಕ್ರಮಗಳು, ಯೋಜನೆಗಳನ್ನು ಜನರಿಗೆ ತಿಳಿಸಿ

ಬಿಜೆಪಿ, ಆರ್‌ಎಸ್‌ಎಸ್‌, ಎಬಿವಿಪಿ ಇವೆಲ್ಲದರ ಬಗ್ಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಅತ್ಯಂತ ನಿಗಾ ವಹಿಸಬೇಕಿದೆ. ನಗರ, ಹಳ್ಳಿಗಳೆನ್ನದೆ ಎಲ್ಲ ಕಡೆಗಳಲ್ಲೂ ಬಹಳ ಸೂಕ್ಷ್ಮವಾಗಿ ಮತೀಯ ಶಕ್ತಿಗಳ ಮೇಲೆ ಕಣ್ಣು ಇಡಬೇಕಾಗಿದೆ. ಹೆಚ್ಚು ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷದ ಕಾರ್ಯಕ್ರಮಗಳು, ಯೋಜನೆಗಳನ್ನು ಯುವ ಕಾಂಗ್ರೆಸ್‌ ಕಾರ್ಯಕರ್ತರು ಜನತೆಗೆ ತಿಳಿಸಬೇಕು ಎಂದು ಕಿವಿಮಾತು ಹೇಳಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ ಬಿಜೆಪಿ: ಸಿಎಂ ಸಿದ್ದರಾಮಯ್ಯ ಟೀಕೆ

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ವಿಧಾನ‌ ಪರಿಷತ್ ಸದಸ್ಯರಾದ ಎಸ್.ರವಿ, ಬಸನಗೌಡ ಬಾದರ್ಲಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು, ಹಿರಿಯ ಮುಖಂಡರಾದ ಬಿ.ಎಲ್. ಶಂಕರ್, ವಿನಯ್ ಕುಮಾರ್ ಸೊರಕೆ, ವಿ.ಆರ್. ಸುದರ್ಶನ್, ಯುವ‌ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.