ಬೆಂಗಳೂರು: ಮುಡಾ ಹಗರಣಕ್ಕೆ (MUDA scam, MUDA case) ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ (Lokayukta) ಪೊಲೀಸ್ ಟಿ.ಉದೇಶ ಅವರು ದಾಖಲೆಗಳೂ ಸೇರಿದಂತೆ ಒಟ್ಟು 11 ಸಾವಿರ ಪುಟಗಳ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದರು. ಈ ವರದಿಯಲ್ಲಿ, ತನಿಖೆಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ (CM Siddaramih) ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ.
ಜನಪ್ರತಿನಿಧಿಗಳ ಕೋರ್ಟ್ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಅಂತಿಮ ವರದಿ ಸಲ್ಲಿಸಲಾಯಿತು. ಸುಮಾರು 11 ಸಾವಿರ ಪುಟಗಳ ತನಿಖಾ ವರದಿಯನ್ನು ಲೋಕಾಯುಕ್ತ ಎಸ್ಪಿ ಉದೇಶ ಸಲ್ಲಿಸಿದರು. ಪ್ರಕರಣದಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ತನಿಖಾ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಈ ಹಗರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾವಮೈದುನ ಮಲ್ಲಿಕಾರ್ಜುನ ಹಾಗೂ ದೇವರಾಜುಗೆ ಕ್ಲೀನ್ ಚಿಟ್ ನೀಡಿದ್ದಾರೆ. ಇದೇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೂ ಕೂಡ ನಿಮಗೆ ಆಕ್ಷೇಪಣೆಗಳು ಇದ್ದಲ್ಲಿ ಕೋರ್ಟಿಗೆ ಸಲ್ಲಿಸಿ ಎಂದು ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೇಲೆ ಮಾಡಿದ ಆರೋಪಗಳು ಸುಳ್ಳು. ಸೈಟ್ ಹಂಚಿಕೆಯಲ್ಲಿ ಸಿದ್ದರಾಮಯ್ಯ ಮುಡಾ ಮೇಲೆ ಪ್ರಭಾವ ಬೀರಿಲ್ಲ. ಕುಟುಂಬಸ್ಥರಿಗೆ ಪರಿಹಾರವಾಗಿ ಸಿಗಬೇಕಿದ್ದ ಪರಿಹಾರ ಸಿಕ್ಕಿಲ್ಲ. ಪಾರ್ವತಿ ಪಡೆದಿದ್ದ 14 ಸೈಟ್ಗಳನ್ನು ಕೂಡ ವಾಪಸ್ ಕೊಟ್ಟಿದ್ದಾರೆ. ಜಮೀನು ವರ್ಗಾವಣೆ ಕಾನೂನಾತ್ಮಕವಾಗಿ ನಡೆದಿದೆ.
ದೇವರಾಜುಗೆ ಸಂಬಂಧಿಸಿದಂತೆ ಡಿನೋಟಿಫೈ ಪ್ರಕ್ರಿಯೆಯಲ್ಲಿ ಕೆಲ ತಪ್ಪುಗಳಾಗಿವೆ. ದೇವರಾಜು ಜೀವನಕ್ಕೆ ಒಂದೇ ಜಮೀನು ಇರೋದು ಎಂದು ಹೇಳಿಕೊಂಡಿದ್ದರು. ಹೀಗಾಗಿ ಡಿನೋಟಿಫೈ ಮಾಡಬೇಕೆಂದು ದೇವರಾಜು ಕೇಳಿಕೊಂಡಿದ್ದರು. ದೇವರಾಜು ಈ ಮಾಹಿತಿಯನ್ನು ಮರೆಮಾಚಿರುವುದು ಕಂಡು ಬಂದಿದೆ. ಹೀಗಾಗಿ ಪ್ರಕರಣದಲ್ಲಿ ಬೇರೆ ಯಾರದ್ದು ಪಾತ್ರ ಇಲ್ಲ ಎಂದು ತನಿಖಾ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಉಲ್ಲೇಖಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಮೂಲ ಜಮೀನು ಮಾಲೀಕರಾದ ದೇವರಾಜುಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಲೋಕಾಯುಕ್ತ ಪೊಲೀಸರು ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಸುಮಾರು 11,000 ಪುಟಗಳ ಅಂತಿಮ ತನಿಖಾ ವರದಿಯನ್ನು ಸಲ್ಲಿಸಲಾಗಿದೆ.
ಇದನ್ನೂ ಓದಿ: CM Siddaramaiah: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಬಿ ರಿಪೋರ್ಟ್ ನೀಡಲು ಲೋಕಾಯುಕ್ತ ಸಿದ್ಧತೆ