ಮಂಡ್ಯ: ಜನತಾದಳ ಪಕ್ಷವು ದೇವೇಗೌಡರ ಹೋರಾಟದ ಹಿನ್ನೆಲೆಯಲ್ಲಿ ಸ್ಥಾಪಿತವಾಗಿರುವ ಪಕ್ಷ. 25 ವರ್ಷಗಳ ಬೆಳ್ಳಿ ಮಹೋತ್ಸವ ಆಚರಿಸುತ್ತಿರುವ ನಮ್ಮ ಜೆಡಿಎಸ್, ಕನ್ನಡ ನಾಡಿನ ಅಸ್ಮಿತೆಗಾಗಿ ಹುಟ್ಟಿದ ಪಕ್ಷ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆಗಾಗಿ ನಿರಂತರವಾಗಿ ಹೋರಾಡಿದ ಪಕ್ಷವಾಗಿದೆ. ಕರ್ನಾಟಕ ರಾಜ್ಯದಲ್ಲಿ ಹಳೇ ಮೈಸೂರು ಪ್ರಾಂತ್ಯಕಷ್ಟೇ ಜನತಾದಳ ಪಕ್ಷ (ಜೆಡಿಎಸ್) ಸೀಮಿತವಾಗಿಲ್ಲ, ಅದು ತಪ್ಪು ಕಲ್ಪನೆಯಾಗಿದೆ. ರಾಜ್ಯಾದ್ಯಂತ ಪಕ್ಷ ಸಂಘಟನೆಗಾಗಿ ಶ್ರಮಿಸಲಾಗುತ್ತಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಗುರುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.