ಬೆಂಗಳೂರು, ಏ.27: ಸಚಿವ ಡಿ ಸುಧಾಕರ್ (Minister D Sudhakar) ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಜೊತೆ ಚರ್ಚೆ ನಡೆಸಿದ್ದಾರೆ. ಕುಟುಂಬಸ್ಥರನ್ನು ಮಾತನಾಡಿಸಿದ್ದಾರೆ.
ಕೆಲದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಡಿ.ಸುಧಾಕರ್ ಅವರಲ್ಲಿ ದಿಢೀರನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ದೇಹಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ಕೃಷ್ಣ ಆರೋಗ್ಯ ವಿಜ್ಞಾನಗಳ ಸಂಸ್ಥೆಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ವಾರಗಳ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದ ಮುಖ್ಯಮಂತ್ರಿಗಳು ಕಳೆದ ಶನಿವಾರವೂ ಮತ್ತೊಮ್ಮೆ ಭೇಟಿ ಕೊಟ್ಟಿದ್ದರು. ಭಾನುವಾರ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ‘‘ಸಚಿವರಿಗೆ ಶ್ವಾಸಕೋಶ ಕಸಿ (ಟ್ರಾನ್ಸ್ಪ್ಲಾಂಟ್) ಆಗಬೇಕಿದೆ. ಟ್ರಾನ್ಸ್ಪ್ಲಾಂಟ್ ಮಾಡಲು ಮೆದುಳು ಪ್ರಜ್ಞೆಯಲ್ಲಿರಬೇಕು. ಆದರೆ, ಇನ್ನೂ ಪ್ರಜ್ಞೆ ಬಂದಿಲ್ಲ. ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ,’’ ಎಂದಿದ್ದರು.
ಅವರು ಬೇಗ ಚೇತರಿಸಿಕೊಳ್ಳಲಿದ್ದಾರೆ. ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಸುಧಾಕರ್ ಅವರ ದೇಹದ ಎಲ್ಲ ಭಾಗಗಳ ಸ್ಥಿತಿ ಸ್ಥಿರವಾಗಿದ್ದು, ಪ್ರಜ್ಞೆ ಮಾತ್ರ ಇಲ್ಲ. ವೈದ್ಯರು ಸಿಟಿ ಸ್ಕ್ಯಾನ್ ಮಾಡಿದ ಬಳಿಕ ಆರೋಗ್ಯ ಸ್ಥಿತಿ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
D Sudhakar: ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ, ಶ್ವಾಸಕೋಶ ಕಸಿ ಚಿಕಿತ್ಸೆಗೆ ಸಿದ್ಧತೆ