ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

8 ಬಾರಿ ವಿಧಾನಪರಿಷತ್ ಸದಸ್ಯರಾಗುವ ಮೂಲಕ ವಿಶ್ವ ದಾಖಲೆ ಬರೆದ ಬಸವರಾಜ ಹೊರಟ್ಟಿ; ಅಭಿನಂದಿಸಿದ ಸಿದ್ದರಾಮಯ್ಯ

CM Siddaramaiah: ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಪಕ್ಷಾತೀತವಾಗಿ ಇಂದು ಸನ್ಮಾನಿಸಲಾಗಿದೆ. ಎಲ್ಲ ಪಕ್ಷದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹೊರಟ್ಟಿ ಅಜಾತಶತ್ರು. ನೇರ ನುಡಿಯ ದಿಟ್ಟ ವ್ಯಕ್ತಿತ್ವದ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಸವರಾಜ್ ಹೊರಟ್ಟಿ ಅವರನ್ನು ಸನ್ಮಾನಿಸಲಾಯಿತು.

ಬೆಳಗಾವಿ, ಡಿ. 12: ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಬಸವರಾಜ ಹೊರಟ್ಟಿಯವರೊಂದಿಗೆ ನಾಲ್ಕು ದಶಕಗಳ ಸ್ನೇಹ ಸಂಬಂಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ ಹುಬ್ಬಳ್ಳಿ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ವಿಧಾನ ಪರಿಷತ್‌ ಸಭಾಪತಿ ಬಸವರಾಜ್ ಹೊರಟ್ಟಿ (Basavaraja Horatti) ಅವರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಆಡಂಬರವಿಲ್ಲದ ಸ್ನೇಹಜೀವಿ

ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಪಕ್ಷಾತೀತವಾಗಿ ಇಂದು ಸನ್ಮಾನಿಸಲಾಗಿದೆ. ಎಲ್ಲ ಪಕ್ಷದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹೊರಟ್ಟಿಯವರು ಅಜಾತಶತ್ರು. ನೇರ ನುಡಿಯ ದಿಟ್ಟ ವ್ಯಕ್ತಿತ್ವದ ರಾಜಕಾರಣಿಯಾಗಿದ್ದಾರೆ. 1980ರಲ್ಲಿ ವಿಧಾನ ಪರಿಷತ್ತಿನ ಶಾಸಕರಾಗಿದ್ದ ಇವರೊಂದಿನ ನನ್ನ ಸ್ನೇಹ ನಾಲ್ಕು ದಶಕಗಳದ್ದು. ಆಡಂಬರವಿಲ್ಲದ ಸ್ನೇಹಜೀವಿಯಾಗಿರುವ ಹೊರಟ್ಟಿಯವರು ಶಿಕ್ಷಕರ ಕ್ಷೇತ್ರದಿಂದ ಎಂಟು ಬಾರಿ ಶಾಸಕರಾಗಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ ಎಂದರು.

CM Siddaramaiah 1

ನಾವಿಬ್ಬರೂ ಹಳ್ಳಿಗಾಡಿನ ಸಾಮಾನ್ಯ ಕುಟುಂಬದವರು

1983ರಲ್ಲಿ ಶಾಸಕರಾದ ನಂತರ ಹೊರಟ್ಟಿಯವರೊಂದಿಗೆ ಸ್ನೇಹ ಬೆಳೆಯಿತು. ಹಳ್ಳಿಗಾಡಿನ ನಂಟಿರುವ ಇಬ್ಬರೂ ಸಾಮಾನ್ಯ ಕುಟುಂಬದಿಂದ ಬಂದವರು. ಅಧಿಕಾರ ಮತ್ತು ಹುದ್ದೆಯೊಂದಿಗೆ ವ್ಯಕ್ತಿತ್ವದ ನಂಟು ಹೊಂದುವ ವರ್ಗ ಒಂದಾದರೆ, ಅಧಿಕಾರದ ಹಿರಿಮೆಯನ್ನು ಕಾಯ್ದುಕೊಳ್ಳುವ ವರ್ಗವಿದ್ದು, ಹೊರಟ್ಟಿಯವರದು ಎರಡನೇ ವರ್ಗವಾಗಿದೆ. 45 ವರ್ಷಗಳ ರಾಜಕೀಯ ಬದುಕಿನಲ್ಲಿ ಅವರೆಂದಿಗೂ ಅಹಂಕಾರ ತೋರಿದವರಲ್ಲ. ನಾವು ಒಂದೇ ಪಕ್ಷದಲ್ಲಿದ್ದಾಗ ಜೆಡಿಯು ಮತ್ತು ಜೆಡಿಎಸ್ ಒಂದುಗೂಡಿಸಲು ಬಹುವಾಗಿ ಪ್ರಯತ್ನಿಸಿದರು. ಆದರೆ ಹಿರಿಯ ನಾಯಕರು ಒಪ್ಪದಿದ್ದ ಕಾರಣ, ಅವರ ಈ ಪ್ರಯತ್ನಕ್ಕೆ ಫಲ ದೊರೆಯಲಿಲ್ಲ ಎಂದರು.

ಸಭಾಪತಿಗಳ ಕುರ್ಚಿಗೆ ಹೊರಟ್ಟಿ ನ್ಯಾಯ ಒದಗಿಸುತ್ತಾರೆ

ನನಗೂ ಅವರಿಗೂ ಆತ್ಮೀಯತೆ ಇದ್ದರೂ ಸಭಾಪತಿ ಕುರ್ಚಿಯಲ್ಲಿ ಕುಳಿತಾಗ ಅದಕ್ಕೆ ನ್ಯಾಯ ಒದಗಿಸುತ್ತಾರೆ. ನನಗೆ ಸ್ನೇಹವಿದೆ ಎಂದು ಹೆಚ್ಚು ಉತ್ತೇಜನ ನೀಡುವುದಾಗಿ, ನನ್ನ ಪರವಾಗಿ ಮಾತನಾಡುವುದಾಗಲಿ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ನಮಗೆ ಬಹುಮತ ಕಡಿಮೆಯಿದ್ದು ಮುಂದಿನ ಚುನಾವಣೆಯಲ್ಲಿ ಬಹುಮತ ಬರಬಹುದು. ಅಲ್ಲಿಯವರೆಗೆ ಇವರೇ ಮುಂದುವರಿಯುತ್ತಾರೆ. ಸದನ ಉತ್ತಮವಾಗಿ ನಡೆಯುತ್ತಿದೆ. ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುವ ಕೆಲಸವನ್ನು ಅವರು ಯಾವತ್ತೂ ಮಾಡಿಲ್ಲ ಎಂದರು.

ಸತತವಾಗಿ ಎಂಟು ಬಾರಿ ವಿಧಾನಪರಿಷತ್ ಸದಸ್ಯರಾಗಿರುವುದು ವಿಶ್ವ ದಾಖಲೆಯಾಗಿದೆ. ಅವರ ವಿಜಯಪಥ ಸದಾ ಮುಂದುವರಿಯಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು. ಆದರೆ ಬಸವರಾಜ ಹೊರಟ್ಟಿಯವರು ಕಾಂಗ್ರೆಸ್ ಹೊರತುಪಡಿಸಿ, ಬೇರೆ ಯಾವುದೇ ಪಕ್ಷವನ್ನು ಪ್ರತಿನಿಧಿಸಿದರೆ, ಅವರ ವಿರುದ್ಧವೇ ಪ್ರಚಾರ ನಡೆಸುವುದು ಗ್ಯಾರಂಟಿ ಎಂದರು. ಆದಾಗ್ಯೂ ಹೊರಟ್ಟಿಯವರು ಗೆಲ್ಲಲಿ ಎಂದು ವೈಯಕ್ತಿಕವಾಗಿ ಆಶಿಸುತ್ತೇನೆ. ಸರ್ಕಾರಕ್ಕೆ ವಿಧಾನಮಂಡಲಕ್ಕೆ ಅವರ ಮಾರ್ಗದರ್ಶನ ಮತ್ತಷ್ಟು ದೊರೆಯಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಪ್ರತಿಯೊಬ್ಬರೂ ಅವರು ಕಲಿತ ಶಾಲೆಯನ್ನು ಅಭಿವೃದ್ಧಿಪಡಿಸಬೇಕು

ಅವರ ಹಳ್ಳಿಯಲ್ಲಿ ಒಂದು ಶಾಲೆಯನ್ನು ಮಾದರಿ ಶಾಲೆಯನ್ನಾಗಿಸಿದ್ದಾರೆ. ಯಾವುದೇ ಖಾಸಗಿ ಶಾಲೆಗಿಂತಲೂ ಅದು ಕಡಿಮೆ ಇಲ್ಲ. ಅವರು ಕಲಿತ ಶಾಲೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಪ್ರತಿಯೊಬ್ಬರೂ ಅವರು ಕಲಿತ ಶಾಲೆಯನ್ನು ಅಭಿವೃದ್ಧಿಪಡಿಸಿದರೆ ಅದರಿಂದ ಹೆಚ್ಚು ಅನುಕೂಲವಾಗಲಿದೆ ಎಂದರು.‌

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

ನಿಷ್ಪಕ್ಷಪಾತವಾಗಿ ಸದನ ನಡೆಸುತ್ತಾರೆ

ಬಸವರಾಜ ಹೊರಟ್ಟಿ ಅವರನ್ನು ಹೋರಾಟದ ಹೊರಟ್ಟಿ ಎಂದು ಕರೆಯುತ್ತಾರೆ. ಈಗಾಗಲೇ ದಾಖಲೆ ನಿರ್ಮಾಣ ಮಾಡಿದ್ದು ಮತ್ತೊಬ್ಬರು ಶಿಕ್ಷಕರ ಕ್ಷೇತ್ರದಿಂದ ಈ ದಾಖಲೆಯನ್ನು ಮುರಿಯಲು ಸಾಧ್ಯವಿಲ್ಲ. ನಮ್ಮ ಪಕ್ಷದ ಅಭ್ಯರ್ಥಿಯ ಪರ ಪ್ರಚಾರಕ್ಕಾಗಿ ಒಮ್ಮೆ ಹೋಗಿದ್ದರೂ ನಮ್ಮ ಅಭ್ಯರ್ಥಿ ಗೆಲ್ಲಲಿಲ್ಲ. ನಮ್ಮ ಮಧ್ಯೆ ಸ್ನೇಹವಿದ್ದರೂ ಅವರನ್ನು ಸೋಲಿಸಲು ಹೋಗಿದ್ದೆ. ರಾಜಕಾರಣ ಬೇರೆ ಸ್ನೇಹ ಬೇರೆ. ಬಸವರಾಜ್ ಬೊಮ್ಮಾಯಿ ಹಾಗೂ ಅವರ ತಂದೆ ನನಗೆ ಬಹಳ ಆತ್ಮೀಯರು. ಆದರೆ ಅವರ ಮಗನನ್ನು ಚುನಾವಣೆಯಲ್ಲಿ ಸೋಲಿಸಬೇಕಾಯಿತು. ಸಭಾಪತಿಯಾಗಿ ನಿಷ್ಪಕ್ಷಪಾತವಾಗಿ ಸದನ ನಡೆಸುತ್ತಾರೆ. ಅಲ್ಲಿ ಕುಳಿತಾಗ ಕಾನೂನಿನ ಪ್ರಕಾರ ಸಭೆ ನಡೆಸುವ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದಾರೆ. ಪರಿಷತ್ತಿನಲ್ಲಿರುವ ಮೂರೂ ಪಕ್ಷದವರೂ ಅವರನ್ನು ಗೌರವದಿಂದ ಕಾಣುತ್ತಾರೆ. ಕೆಲವೊಮ್ಮೆ ಏಕವಚನ ಬಳಸಿದರು ಯಾರೂ ಕೋಪಿಸಿಕೊಳ್ಳುವುದಿಲ್ಲ. ಅಷ್ಟರಮಟ್ಟಿನ ವ್ಯಕ್ತಿತ್ವ ಅವರದ್ದು. ಅವರ ಅನುಭವದ ಆಧಾರದ ಮೇಲೆ ಸದನಕ್ಕೆ ಮಾರ್ಗದರ್ಶನ ಮಾಡುತ್ತಾರೆ. ಸಂಸದೀಯಪಟು ಆಗಿರುವುದರಿಂದ ಯಾವುದಕ್ಕೆ ಎಷ್ಟು ಒತ್ತು ಕೊಡಬೇಕು, ಯಾವುದೇ ಪಕ್ಷದವರಾಗಲಿ ಬೆದರಿಸಿ ಸುಮ್ಮನೆ ಕೂಡಿಸುತ್ತಾರೆ. ಇವರಲ್ಲದೇ ಬೇರೆ ಯಾರೇ ಆಗಿದ್ದರೂ ಅದನ್ನು ಒಪ್ಪುತ್ತಿದ್ದುದ್ದು ಕಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.