ಪ್ರಚೋದನಕಾರಿ ಭಾಷಣ ಆರೋಪ; ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು
ಗಣೇಶೋತ್ಸವ ಶೋಭಾಯಾತ್ರೆಯಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಇತರರ ವಿರುದ್ಧ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು ಎನ್ನಲಾಗಿದೆ.
ಸಂಗ್ರಹ ಚಿತ್ರ -
ಮೈಸೂರು: ಗಣೇಶೋತ್ಸವ ಶೋಭಾಯಾತ್ರೆಯಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹಾಗೂ ಇತರರ ವಿರುದ್ಧ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆ ಪ್ರತಾಪ್ ಸಿಂಹ ಮತ್ತು ಇತರರ ವಿರುದ್ಧ ಬಿಎನ್ಎಸ್ನ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸೆಕ್ಷನ್ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರತಾಪ್ ಸಿಂಹ ಅವರು ದಲಿತ ಸಂಘರ್ಷ ಸಮಿತಿ (ದಸಂಸ) ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ವಿವಾದಾತ್ಮಕ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಪೊಲೀಸರ ಕರ್ತ್ಯವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.
ಗಣೇಶೋತ್ಸವದ ಶಾಂತಿ ಸಭೆಯಲ್ಲಿ ಟಿ. ನರಸೀಪುರ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ಅವರು, "ನಿಗದಿತ ಮಾರ್ಗ ಬಿಟ್ಟು ಮಸೀದಿ ಮುಂದೆ ಪಟಾಕಿ ಸಿಡಿಸುವುದು ಅಥವಾ ಡ್ಯಾನ್ಸ್ ಮಾಡಿದರೆ ಗ್ರಹಚಾರ ಬಿಡಿಸ್ತೀನಿ" ಎಂದು ಕಠಿಣ ಎಚ್ಚರಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಇನ್ಸ್ಪೆಕ್ಟರ್ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ನಾಯಕರಾದ ಆರ್. ಅಶೋಕ್, ಸಂಸದ ಯದುವೀರ್ ಒಡೆಯರ್, ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಟಿ. ನರಸೀಪುರ ಪೊಲೀಸ್ ಠಾಣೆ ಎದುರು ಅಹೋರಾತ್ರಿ ಧರಣಿ ನಡೆಸಲಾಗಿತ್ತು. ಇನ್ಸ್ಪೆಕ್ಟರ್ ಧನಂಜಯ್ ಅವರನ್ನು ಅಮಾನತುಗೊಳಿಸಬೇಕು ಎಂದು ಅವರು ಪಟ್ಟು ಹಿಡಿದಿದ್ದರು.
ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ; ಗಣೇಶೋತ್ಸವದಲ್ಲಿ ಭಾಗಿ, ಕ್ಷೇತ್ರದ ಜನರ ಕುಶಲೋಪರಿ ವಿಚಾರಣೆ
ಪೊಲೀಸ್ ಎಚ್ಚರಿಕೆಯನ್ನು ಸವಾಲಾಗಿ ಸ್ವೀಕರಿಸಿದ ಹಿಂದೂ ಜಾಗರಣ ವೇದಿಕೆ ಸೆಪ್ಟೆಂಬರ್ 18, 2026 ರಂದು ಲಿಂಕ್ ರಸ್ತೆಯ ಮಸೀದಿ ಮುಂಭಾಗದಲ್ಲೇ ಅದ್ದೂರಿ ಗಣೇಶ ಶೋಭಾಯಾತ್ರೆ ಆಯೋಜಿಸಿತ್ತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕೇಸರಿ ಧ್ವಜ ಹಿಡಿದು ಕುಣಿದು ಸಂಭ್ರಮಿಸಿದ್ದು, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.