ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸಿಎಂ ಆಗಿ ನಾನೇ ಮುಂದುವರಿಯುವೆ: ಮುಖ್ಯಮಂತ್ರಿ ಬದಲಾವಣೆ ವದಂತಿ ನಿರಾಕರಿಸಿದ ಸಿದ್ದರಾಮಯ್ಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರೆದು, ಮುಂದಿನ ಬಜೆಟ್‌ಗಳನ್ನು ನಾನೇ ಮಂಡಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು: ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -

Profile
Siddalinga Swamy Nov 21, 2025 6:52 PM

ಮೈಸೂರು, ನ. 21: ಮುಖ್ಯಮಂತ್ರಿಯಾಗಿ ನಾನೇ ಮುಂದುವರಿದು, ಮುಂದಿನ ಬಜೆಟ್‌ಗಳನ್ನು ನಾನೇ ಮಂಡಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಕಾಂಗ್ರೆಸ್‌ನ ಕೆಲ ಶಾಸಕರು ಪಕ್ಷದ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರಿದು, ಮುಂದಿನ ಬಜೆಟ್‌ಗಳನ್ನು ನಾನೇ ಮಂಡಿಸುವೆ. ಶುಕ್ರವಾರ ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಲಿದ್ದು, ಶನಿವಾರ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಹೇಳಿದರು.

ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2,400 ರೂ. ಬೆಂಬಲ ಬೆಲೆ ನಿಗದಿಯಾಗಿದ್ದು, ಇದುವರೆಗೆ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಮೆಕ್ಕೆ ಜೋಳದ ಖರೀದಿ ಬಗ್ಗೆ ಸಂಬಂಧಪಟ್ಟ ಸಚಿವರು , ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳದ ಬೆಲೆ (Maize price) ಕುಸಿತ ಕಂಡಿದ್ದು, ಉತ್ಪಾದನೆ ಹೆಚ್ಚಾಗಿದೆ. ಸುಮಾರು 55 ಲಕ್ಷ ಮೆಟ್ರಿಕ್ ಟನ್‌ನಷ್ಟು ಮೆಕ್ಕೆಜೋಳವನ್ನು ರೈತರು ಬೆಳೆಯಬಹುದೆಂಬ ಅಂದಾಜಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮೆಕ್ಕೆ ಜೋಳ ಉತ್ಪತ್ತಿಯಲ್ಲಿ ಏರಿಕೆ ಕಂಡಿದ್ದರೂ ಸಹ, ಕೇಂದ್ರ ಸರ್ಕಾರ ಸುಮಾರು 70 ಲಕ್ಷ ಮೆ.ಟನ್ ನಷ್ಟು ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ನೋಡಲ್‌ ಏಜೆನ್ಸಿಗಳಾದ ನಫೆಡ್, ಎನ್‌ಸಿಸಿಎಫ್ ಸಂಸ್ಥೆಗಳು ಮೆಕ್ಕೆ ಜೋಳ ಖರೀದಿ ಪ್ರಕ್ರಿಯೆ ನಡೆಸದೇ ಇರುವುದರಿಂದ, ರೈತರು ಕೆಲವಡೆ ಧರಣಿ ನಡೆಸುತ್ತಿದ್ದಾರೆ ಎಂದರು.

ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ, ʼಬೆಸ್ಟ್‌ ಆಫ್‌ ಲಕ್‌ʼ ಎಂದ ಡಿಕೆ ಶಿವಕುಮಾರ್

ಮೆಕ್ಕೆಜೋಳ ಖರೀದಿಗೆ ಡಿಸ್ಟಲರಿಗಳೊಂದಿಗೆ ಚರ್ಚೆ

ಡಿಸ್ಟಿಲರಿಗಳು ಮೆಕ್ಕೆ ಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾನುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸರ್ಕಾರದಿಂದ 10 ಲಕ್ಷ ಮೆ. ಟನ್ ಖರೀದಿ

ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಪತ್ರಮುಖೇನ ಕೋರಲಾಗುವುದು ಎಂದರು.

ಮೆಕ್ಕೆ ಜೋಳ ರೈತರ ನೆರವಿಗೆ ಧಾವಿಸಿದ ಸಿಎಂ, ಎಥೆನಾಲ್‌ ತಯಾರಿಗೆ ಖರೀದಿ, ಆಮದು ನಿಯಂತ್ರಿಸಲು ಕೇಂದ್ರಕ್ಕೆ ಆಗ್ರಹ

ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

ಮೆಕ್ಕೆ ಜೋಳದ ಜತೆಗೆ ಹೆಸರುಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್‌ಎಕ್ಯು ಬದಲಾವಣೆಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸುವ ಜತೆಗೆ ಸಂಬಂಧಪಟ್ಟವರ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿ ಅವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.